ದೊಡ್ಡಬಳ್ಳಾಪುರ:ರಾಜ್ಯಪತ್ರದಲ್ಲಿ ಜುಲೈ 302018ರಂದು ಪ್ರಕಟಿಸಲಾಗಿದ್ದ ನಗರಸಭೆ ವಾರ್ಡ್ಗಳ ಮೀಸಲಾತಿ ಪಟ್ಟಿಯಂತೆಯೇ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ ನೀಡುತಿದ್ದಂತೆ ನಗರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
‘16ನೇ ವಾರ್ಡ್ ಅನ್ನು ಸಾಮಾನ್ಯ ಮಹಿಳೆಗೆ ಮೀಸಲಿಡಲಾಗಿದೆ. ಆದರೆ ನಿಯಮದ ಪ್ರಕಾರ ಸಾಮಾನ್ಯ ಅಭ್ಯರ್ಥಿಗೆ ಮೀಸಲಿಡಬೇಕು’ ಎಂದುನಗರದ ಕುಚ್ಚಪ್ಪನಪೇಟೆ ನಿವಾಸಿ ರವಿಕುಮಾರ್ ಎಂಬುವವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಇದರಿಂದಾಗಿ ನಗರಸಭೆ ಆಡಳಿತ ಅವಧಿ ಮುಕ್ತಾಯವಾಗಿದ್ದರೂ ಚುನಾವಣೆ ನಡೆಸಿರಲಿಲ್ಲ. ಹೈಕೋರ್ಟ್ ಈ ಹಿಂದೆ ಪ್ರಕಟಿಸಿರುವ ಮೀಸಲಾತಿ ಪಟ್ಟಿಯಂತೆಯೇ ಚುನಾವಣೆ ನಡೆಸಲು ಸೂಚಿಸಿರುವುದರಿಂದ ರಾಜ್ಯ ಚುನಾವಣಾ ಆಯೋಗ ಯಾವುದೇ ಸಂದರ್ಭದಲ್ಲಾದರೂ ನಗರಸಭೆ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡುವ ನಿರೀಕ್ಷೆ ಇದೆ.
ಹೈಕೋರ್ಟ್ ನೀಡಿರುವ ತೀರ್ಪು ಸಮಾಧಾನಕರವಾಗಿಲ್ಲ. ಹೀಗಾಗಿ ಮತ್ತೆ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ರವಿಕುಮಾರ್ ತಿಳಿಸಿದ್ದಾರೆ.
ನಿಟ್ಟುಸಿರು ಬಿಟ್ಟ ಆಕಾಂಕ್ಷಿಗಳು: ಇತ್ತೀಚೆಗಷ್ಟೇ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿ ಬಿಜೆಪಿ ಭರ್ಜರಿ ಜಯಗಳಿಸಿತ್ತು. ಹೀಗಾಗಿ ಈ ಫಲಿತಾಂಶ ನಗರಸಭೆ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ ಎನ್ನುವ ಆತಂಕದಲ್ಲಿದ್ದರು. ಆದರೆ ಫಲಿತಾಂಶದ ನಂತರ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೇಲೆ ಲೋಕಸಭಾ ಚುನಾವಣಾ ಫಲಿತಾಂಶ ಯಾವುದೇ ಪರಿಣಾಮ ಬೀರದೆ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಮೇಲುಗೈ ಸಾಧಿಸಿದ್ದಾರೆ. ಇದರಿಂದ ದೊಡ್ಡಬಳ್ಳಾಪುರ ನಗರಸಭೆ ಚುನಾವಣೆ ಮೇಲು ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಎನ್ನುವ ಆಶಾಭಾವನೆಯಲ್ಲಿ ಆಕಾಂಕ್ಷಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.