ADVERTISEMENT

ದೇವನಹಳ್ಳಿ: ಜಾತ್ರೆ, ಉತ್ಸವ ನಿಷೇಧ

ಮಾರ್ಗಸೂಚಿ ಪಾಲಿಸಲು ಜಿಲ್ಲಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 4:40 IST
Last Updated 8 ಆಗಸ್ಟ್ 2021, 4:40 IST
ಕೆ. ಶ್ರೀನಿವಾಸ್
ಕೆ. ಶ್ರೀನಿವಾಸ್   

ದೇವನಹಳ್ಳಿ:‘ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್-19 ಮೂರನೇ ಅಲೆಯ ಅಪಾಯ ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಜಿಲ್ಲೆಯ ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಸಹಕರಿಸಬೇಕು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ತಿಳಿಸಿದ್ದಾರೆ.

ಧಾರ್ಮಿಕ ಸ್ಥಳಗಳಾದ ದೇವಸ್ಥಾನ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ದೇವಸ್ಥಾನಗಳಲ್ಲಿ ದೇವರ ದರ್ಶನ, ದೈನಂದಿನ ಪೂಜೆ ಹೊರತುಪಡಿಸಿ ಸೇವೆ, ಪ್ರಸಾದ, ಅನ್ನ ಸಂತರ್ಪಣೆ, ಮುಡಿ ತೆಗೆಯುವುದು ಹಾಗೂ ವಸತಿ ವ್ಯವಸ್ಥೆಗಳಿಗೆ ಅವಕಾಶವಿರುವುದಿಲ್ಲ ಎಂದು ತಿಳಿಸಿದ್ದಾರೆ.

ಜಾತ್ರೆ, ಉತ್ಸವ, ಮೆರವಣಿಗೆ ಮತ್ತು ಧಾರ್ಮಿಕ ಸಭೆ, ಸಮಾರಂಭಗಳನ್ನು ನಿರ್ಬಂಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಓಡಾಡುವವರಿಗೆ ‘ಸಾಂಕ್ರಾಮಿಕ ರೋಗಗಳ ಕಾಯ್ದೆ’ ಅಡಿಯಲ್ಲಿ ಸರ್ಕಾರಿ ಮಾರ್ಗಸೂಚಿಗಳಂತೆ ದಂಡ ವಿಧಿಸಲಾಗುವುದು. ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು 20 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದ್ದಾರೆ.

ADVERTISEMENT

ಮದುವೆ ಮತ್ತು ಇನ್ನಿತರೆ ಸಮಾರಂಭಗಳಲ್ಲಿ 100 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸಂಬಂಧಪಟ್ಟ ತಹಶೀಲ್ದಾರ್‌ ಅವರಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆಯಬೇಕು. ಸಮಾರಂಭದ ವಿಡಿಯೊ ಚಿತ್ರೀಕರಣ ಮಾಡಿ ತಹಶೀಲ್ದಾರ್‌ಗೆ ಕಡ್ಡಾಯವಾಗಿ ಸಲ್ಲಿಸಬೇಕುಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸುವ ಮೂಲಕ ಪ್ರಕರಣಗಳನ್ನು ಕಟ್ಟುನಿಟ್ಟಾಗಿ ಪತ್ತೆ ಮಾಡಿ ಐಸೋಲೇಷನ್ ಮಾಡಲಾಗುವುದು. ಕೋವಿಡ್ ಸಹಾಯವಾಣಿ ಕೇಂದ್ರದ ಮುಖಾಂತರ ಐಸೊಲೇಷನ್‌ನಲ್ಲಿರುವಂತಹ ವ್ಯಕ್ತಿಗಳಿಗೆ ಕೋವಿಡ್ ಕಿಟ್‌ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ

ಸರ್ಕಾರದ ಮಾರ್ಗಸೂಚಿಗಿಂತ ಹೆಚ್ಚಿನ ಪ್ರಕರಣಗಳು ಕಂಡುಬಂದಲ್ಲಿ ಅಂತಹ ಸಮುಚ್ಚಯಗಳನ್ನು ‘ಸೂಕ್ಷ್ಮ ನಿರ್ಬಂಧಿತ ಪ್ರದೇಶ’ವೆಂದು ಘೋಷಣೆ ಮಾಡಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುವುದು. ಹಳ್ಳಿಗಳಲ್ಲಿ ಸರ್ಕಾರದ ಮಾರ್ಗಸೂಚಿಗಿಂತ ಹೆಚ್ಚು ಪ್ರಕರಣಗಳು ಕಂಡುಬಂದಲ್ಲಿ ಅಂತಹ ಹಳ್ಳಿಗಳನ್ನು ನಿರ್ಬಂಧಿತ ವಲಯಗಳೆಂದು ಗುರ್ತಿಸಿ ಸರ್ಕಾರಿ ಕೋವಿಡ್ ಮಾನದಂಡದಂತೆ ‘ಸೀಜ್’ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಹೋಟೆಲ್, ಲಾಡ್ಜ್, ರೆಸಾರ್ಟ್, ಪಾರ್ಟಿ ಹಾಲ್ ಹಾಗೂ ಕಲ್ಯಾಣ ಮಂಟಪಗಳ ಮಾಲೀಕರು ಮುಂಜಾಗ್ರತಾ ಕ್ರಮ ಅನುಸರಿಸಬೇಕು. ಮುಂಬರುವ ದಿನಗಳಲ್ಲಿ ಸರಣಿ ಸಾಲಿನಲ್ಲಿ ಧಾರ್ಮಿಕ ಹಬ್ಬಗಳು ಬರುತ್ತಿರುವುದರಿಂದ ಸಾರ್ವಜನಿಕ ಸ್ಥಳಗಳಲ್ಲಿ, ಸಾರ್ವಜನಿಕ ಮೈದಾನ, ಪಾರ್ಕ್, ಮಾರುಕಟ್ಟೆ ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಗುಂಪು ಸೇರಿ, ಹಬ್ಬ ಆಚರಿಸುವಂತಿಲ್ಲ ಎಂದು ಸೂಚಿಸಿದ್ದಾರೆ.

ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಾಹಣಾ ಕಾಯ್ದೆ 2005ರ ವಿಭಾಗ 22 ರಡಿ ಮತ್ತು ಸಂಬಂಧಿತ ಸೆಕ್ಷನ್‌ಗಳಾದ 51 ರಿಂದ 60ರಡಿ, ಐಪಿಸಿ ಸೆಕ್ಷನ್ 188 ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ಸೆಕ್ಷನ್ 4, 5, ಮತ್ತು 10ರಡಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.