ADVERTISEMENT

ಕೇಂದ್ರದ ನೀತಿಗೆ ರೈತರ ಬಲಿ: ಪ್ರತಿಭಟನೆ

ವಿವಿಧ ಬೇಡಿಕೆ ಈಡೇರಿಕೆಗೆ ಪ್ರಾಂತ ರೈತ ಸಂಘ ಪ್ರತಿಭಟನೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2021, 2:56 IST
Last Updated 7 ಮಾರ್ಚ್ 2021, 2:56 IST
ಪ್ರತಿಭಟಿಸಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಗೆ ಮನವಿ ಪತ್ರ ಸಲ್ಲಿಸಿದ ರೈತ ಮುಖಂಡರು
ಪ್ರತಿಭಟಿಸಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಗೆ ಮನವಿ ಪತ್ರ ಸಲ್ಲಿಸಿದ ರೈತ ಮುಖಂಡರು   

ದೇವನಹಳ್ಳಿ: ಇಲ್ಲಿನ ಜಿಲ್ಲಾಡಳಿತ ಭವನ ಆವರಣದಲ್ಲಿ ಶನಿವಾರ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಪ್ರಾಂತ ರೈತ ಸಂಘ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಘಟಕ ಅಧ್ಯಕ್ಷ ವೆಂಕಟಾಚಲಯ್ಯ, ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಹಲವು ವರ್ಷ ನಂತರ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣಕ್ಕೆ ವಶಪಡಿಸಿಕೊಂಡ ಬಗರ್ ಹುಕುಂ ಸಾಗುವಳಿದಾರರಿಗೆ ಪರಿಹಾರ ನೀಡಲಾಗಿದೆ. ಅದೇ ರೀತಿಯಲ್ಲಿ ಇಲ್ಲಿನ ರೈತರಿಗೆ ನೀಡಬೇಕು ಎಂದು ರಾಜ್ಯ ಹೈಕೋರ್ಟ್ ನಿರ್ದೇಶನ ನೀಡಿದೆ. ಇದರ ಪ್ರತಿಯನ್ನು ಜಿಲ್ಲಾಧಿಕಾರಿಗೆ ಸ‌ಲ್ಲಿಸಲಾಗಿದೆ. ಆದರೆ, ಸರ್ಕಾರಕ್ಕೆ ಯಾವುದೇ ವರದಿ ನೀಡದೆ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿದರು.

ಪ್ರಾಂತ ರೈತ ಸಂಘ ಜಿಲ್ಲಾ ಘಟಕ ಅಧ್ಯಕ್ಷ ಎನ್.ವೀರಣ್ಣ ಮಾತನಾಡಿ, ಕೇಂದ್ರ ಸರ್ಕಾರ ರೈತ ವಿರೋಧ ನೀತಿ, ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ತಂದ ನಂತರ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚುತ್ತಲೇ ಇದೆ. ಎ.ಪಿ.ಎಂ.ಸಿಗೆ ತಿದ್ದುಪಡಿ, ಕಾರ್ಮಿಕರ ಕಾಯ್ದೆ, ವಿದ್ಯುತ್ ಖಾಸಗೀಕರಣ, ಗೋಹತ್ಯೆ ನಿಷೇಧ ಕಾಯ್ದೆ, ನೂತನ ಶಿಕ್ಷಣ ನೀತಿ ದೇಶಕ್ಕೆ ಮಾರಕವಾಗಲಿದೆ. ಅವೈಜ್ಞಾನಿಕ ಕಾನೂನು ಜಾರಿ ಮಾಡಿ ರೈತರನ್ನು ಬಲಿಪಶು ಮಾಡುವ ನೀತಿಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ADVERTISEMENT

ಬಡವರು, ಕೂಲಿಕಾರ್ಮಿಕರು ಬೆಲೆ ಏರಿಕೆಯಿಂದಾಗಿ ತತ್ತರಿಸಿ ಹೋಗಿದ್ದಾರೆ. ಒಂದು ಅಡಿ ನಿವೇಶನ ಖರೀದಿಸಲು ಸಾಧ್ಯವಿಲ್ಲವಾದರೂ ಕಾರ್ಪೊರೇಟ್ ಕಂಪನಿಗಳಿಗೆ ಮಠಾಧೀಶರಿಗೆ, ಭೂಮಾಫಿಯಾಗೆ, ಭ್ರಷ್ಟರಿಗೆ ಸರ್ಕಾರ ಭೂಮಿ ನೀಡುವ ಮೂಲಕ ಬಡ ರೈತರನ್ನು ವಂಚಿಸುತ್ತಿದೆ. ಅಗತ್ಯ ದಿನಬಳಕೆ ವಸ್ತುಗಳ ದುಬಾರಿ ಬೆಲೆ ಏರಿಕೆಯಿಂದಾಗಿ ಜನಸಾಮ್ಯಾನರ ಆರ್ಥಿಕ ಸ್ಥಿತಿ ಶೋಚನೀಯವಾಗಿದೆ. ಪೆಟ್ರೋಲ್, ಡಿಸೇಲ್ ಬೆಲೆ ದುಬಾರಿಯಾಗಿರುವುದರಿಂದ ಸಾಮಾನ್ಯ ಪ್ರಯಾಣಿಕರ ದರದ ಜತೆಗೆ ರೈತರ ಉತ್ಪನ್ನಗಳ ಸಾಗಣಿಕೆ ವೆಚ್ಚ ಹೆಚ್ಚಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಇಂಧನದ ಮೇಲಿನ ಸೆಸ್ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ರೈತ ಸಂಘ ತಾಲ್ಲೂಕು ಘಟಕ ಅಧ್ಯಕ್ಷ ಜಿ.ವೆಂಕಟೇಗೌಡ, ಉಪಾಧ್ಯಕ್ಷ ಡಿ.ಎನ್.ಗೋವಿಂದಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಸಿ.ನಂಜೇಗೌಡ, ರೈತ ಮುಖಂಡ
ರಾದ ನಾಗರಾಜಚಾರಿ, ರಾಧಮ್ಮ, ತೇಜಸ್ವಿನಿ, ಸುಮಿತ್ರಮ್ಮ, ಚಂದ್ರಶೇಖರ್, ಜಿ.ಎನ್.ನಾಗರಾಜು, ಶಿವಣ್ಣ, ಲಕ್ಷ್ಮಮ್ಮ, ಸುಬ್ರಮಣಿ, ನಾರಾ
ಯಣಪ್ಪ, ಚಂದ್ರಕಲಾ ಉಪಸ್ಥಿತರಿದ್ದರು. ಇದೇ ಸಂಧರ್ಬದಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಗೆ ಮನವಿ ಪತ್ರ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.