ADVERTISEMENT

ಪಟಾಕಿ ದುರಂತ: ಮೃತರ ಕುಟುಂಬಕ್ಕೆ ತಲಾ ₹5 ಲಕ್ಷ ಪರಿಹಾರ- ಡಿ.ಕೆ.ಶಿವಕುಮಾರ್‌

​ಪ್ರಜಾವಾಣಿ ವಾರ್ತೆ
Published 7 ಅಕ್ಟೋಬರ್ 2023, 20:23 IST
Last Updated 7 ಅಕ್ಟೋಬರ್ 2023, 20:23 IST
ಅತ್ತಿಬೆಲೆಯ ಘಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿ ಪರಿಶೀಲಿಸಿದರು
ಅತ್ತಿಬೆಲೆಯ ಘಟನಾ ಸ್ಥಳಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭೇಟಿ ನೀಡಿ ಪರಿಶೀಲಿಸಿದರು   

ಆನೇಕಲ್: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಶನಿವಾರ ರಾತ್ರಿ ಅತ್ತಿಬೆಲೆ ಪಟಾಕಿ ದುರಂತ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ಸರ್ಕಾರದಿಂದ ತಲಾ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಅವರು ಪ್ರಕಟಿಸಿದರು.

ದುರಂತ ನಡೆದ ಸ್ಥಳದಿಂದಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಅವರು ಘಟನೆ ಬಗ್ಗೆ ಮಾಹಿತಿ ನೀಡಿದರು.

ADVERTISEMENT

ಇದೊಂದು ಘೋರ ದುರಂತ. ಅಮಾಯಕರು ಮೃತಪಟ್ಟಿದ್ದಾರೆ. ಪಟಾಕಿ ಗೋದಾಮಿನ ಒಳಗೆ ಇನ್ನೂ ಕೆಲವರು ಸಿಲುಕಿದ್ದಾರೆ ಎಂಬ ಮಾಹಿತಿ ಇದೆ. ಹಿಂಬದಿ ಬಾಗಿಲು ಒಡೆದು ಪರಿಶೀಲಿಸುವಂತೆ ಸೂಚಿಸಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಘಟನೆ ನಡೆದಾಗ 20ಕ್ಕೂ ಹೆಚ್ಚು ಕೆಲಸಗಾರರು ಗೋದಾಮಿನಲ್ಲಿದ್ದರು. ಅವರಲ್ಲಿ ಹೆಚ್ಚಿನವರು ತಮಿಳುನಾಡಿನವರು. ಪಟಾಕಿ ಖರೀದಿಸಲು ಬಂದಿದ್ದ ಗ್ರಾಹಕರು ಇದ್ದಾರೆ ಎಂಬ ವರದಿಗಳಿವೆ. ಪಟಾಕಿ ಮಳಿಗೆಗೆ ಅನುಮತಿ ಪಡೆಯಲಾಗಿದೆ. ಆದರೆ, ಗೋದಾಮಿಗೆ ಪಡೆದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತು ಅಧಿಕಾರಿಗಳು ತನಿಖೆ ಮಾಡಲಿದ್ದಾರೆ ಎಂದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಟಾಕಿ ಮಳಿಗೆ ಮಾಲೀಕ ನವೀನ್‌ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.