ಆನೇಕಲ್:ತಾಲ್ಲೂಕು ಕೇಂದ್ರವಾದ ಆನೇಕಲ್ನಲ್ಲಿ ಎಲ್ಲಾ ಮುಖ್ಯರಸ್ತೆಗಳು ಗುಂಡಿಗಳಿಂದ ಕೂಡಿದ್ದು ಅಪಘಾತಗಳು ಹೆಚ್ಚಾಗಿವೆ. ಕೂಡಲೇ, ಗುಂಡಿಗಳನ್ನು ಮುಚ್ಚಬೇಕು ಎಂದು ಒತ್ತಾಯಿಸಿ ಸೋಮವಾರ ಬಿಎಸ್ಪಿ ಮುಖಂಡರು ರಸ್ತೆ ಗುಂಡಿಗಳ ಮುಂದೆ ಕುಳಿತು ಪ್ರತಿಭಟನೆ ನಡೆಸಿದರು.
ಬಿಎಸ್ಪಿ ತಾಲ್ಲೂಕು ಘಟಕದ ಅಧ್ಯಕ್ಷ ಚಿನ್ನಪ್ಪ ವೈ. ಚಿಕ್ಕಹಾಗಡೆ ಮಾತನಾಡಿ, ತಾಲ್ಲೂಕು ಕೇಂದ್ರದ ಎಲ್ಲಾ ರಸ್ತೆಗಳು ಸಂಪೂರ್ಣ ಹಾಳಾಗಿದ್ದು ಗುಂಡಿಗಳ ಮಧ್ಯೆ ಜನರು ಸಂಚಾರ ಮಾಡಬೇಕಾದ ಪರಿಸ್ಥಿತಿಯಿದೆ. ದ್ವಿಚಕ್ರವಾಹನಗಳ ಹಲವಾರು ಮಂದಿ ಅಪಘಾತಕ್ಕೀಡಾಗಿದ್ದಾರೆ. ರಸ್ತೆಗಳಲ್ಲಿ ಪ್ರಾಣವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡಬೇಕಾದ ಪರಿಸ್ಥಿತಿಯಿದೆ ಎಂದು ದೂರಿದರು.
ಸಂಬಂಧಪಟ್ಟವರು ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಸುಗಮ ಓಡಾಟಕ್ಕೆ ಅನುವು ಮಾಡಿಕೊಡಬೇಕು. ಒಂದು ವಾರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚದಿದ್ದರೆ ಕಾರ್ಯಕರ್ತರಿಂದ ಅರೆಬೆತ್ತಲೆ ಪ್ರತಿಭಟನೆ ನಡೆಸಲಾಗುವುದು ಎಂದರು.
ಪಟ್ಟಣದ ಆನೇಕಲ್-ಚಂದಾಪುರ ರಸ್ತೆಯು ಹಲವೆಡೆ ಗುಂಡಿಗಳಿಂದ ತುಂಬಿದೆ. ಆನೇಕಲ್-ಹೊಸೂರು ರಸ್ತೆ, ಆನೇಕಲ್-ಬನ್ನೇರುಘಟ್ಟ ರಸ್ತೆ ಸೇರಿದಂತೆ ಪಟ್ಟಣದ ಬಹುತೇಕ ಮುಖ್ಯರಸ್ತೆಗಳು ಗುಂಡಿಗಳಿಂದ ತುಂಬಿವೆ. ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತದೆ. ಆದರೆ, ಕೆಲವೇ ದಿನಗಳಲ್ಲಿ ಮತ್ತೆ ಗುಂಡಿಗಳು ಬೀಳುತ್ತಿವೆ. ಹಾಗಾಗಿ, ರಸ್ತೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಬೇಕು ಎಂದು ತಿಳಿಸಿದರು.
ಮುಖಂಡರಾದ ಪ್ರವೀಣ್, ದಿಲೀಪ್, ಸಂತೋಷ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.