ದೇವನಹಳ್ಳಿ: ಜಿಲ್ಲೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜೀವನ, ಕೊಡುಗೆ, ಹೋರಾಟ ಒಳಗೊಂಡ ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಗುರುವಾರ ತಾಲ್ಲೂಕಿನ ಬೊಮ್ಮವಾರ ಗ್ರಾಮದ ಗಾಂಧಿ ಭವನದಲ್ಲಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯಲ್ಲಿ ಮಾತನಾಡಿದರು.
ಅಹಿಂಸಾವಾದಿಯಾಗಿದ್ದ ಬಾಪೂಜಿ ಸಹಬಾಳ್ವೆ, ಸಮಾನತೆ, ಸತ್ಯ, ಧರ್ಮ, ಸಹಿಷ್ಣುತೆ, ಪ್ರೀತಿ ವಾತ್ಸಲ್ಯ, ಭಾತೃತ್ವಕ್ಕೆ ಅವರು ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದರು ಎಂದು ಸ್ಮರಿಸಿದರು.
ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಸರಳತೆ, ಸಜ್ಜನಿಕೆ ವ್ಯಕ್ತಿತ್ವವನ್ನು ಇಂದಿನ ಪೀಳಿಗೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಜಿಲ್ಲಾಧಿಕಾರಿ ಎ.ಬಿ ಬಸವರಾಜು, ರಾಷ್ಟ್ರಪಿತ ಗಾಂಧೀಜಿ, ಶಾಸ್ತ್ರಿಜೀ ಅವರ ಜಯಂತಿ ಹಾಗೂ ಪುಣ್ಯಸ್ಮರಣೆ ದಿನದಂದು ಮಾತ್ರ ನೆನಪಿಸಿಕೊಂಡರೆ ಸಾಲದು, ಅವರ ಕೊಡುಗೆಯನ್ನು ಪ್ರತಿ ದಿನವೂ ಸ್ಮರಿಸಿಕೊಳ್ಳಬೇಕಿದೆ. ಯುವ ಪೀಳಿಗೆ ಬಾಪೂಜಿ ಹಾಗೂ ಶಾಸ್ತ್ರಿಜೀ ಜೀವನಾದರ್ಶ, ತತ್ವಗಳು ಹಾಗೂ ಸಾಮಾಜಿಕ ಕೊಡುಗೆಯನ್ನು ಅರಿತು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಕಸಾಪ ಅಧ್ಯಕ್ಷ ಬಿ. ಕೃಷ್ಣಪ್ಪ ಉಪನ್ಯಾಸ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಿದ್ದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಹಾಗೂ ನಗದು ಬಹುಮಾನ ವಿತರಿಸಲಾಯಿತು.
ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎನ್. ಅನುರಾಧ, ಎಸ್ಪಿ ಸಿ.ಕೆ ಬಾಬಾ, ಹೆಚ್ಚುವರಿ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಡಿ. ಅಶೋಕ್ ಕುಮಾರ್, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷ ಜಗನ್ನಾಥ, ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ.ಮಂಜುನಾಥ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.