ಆನೇಕಲ್: ಭಾರತ ದೇಶವು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ತರವಾದ ಮೈಲಿಗಲ್ಲನ್ನು ದಾಖಲಿಸಿದ್ದು ವೈದ್ಯಕೀಯ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡುವ ಮೂಲಕ ವಿಶ್ವವೇ ನೋಡುವಂತಾಗಿದೆ. ವಿಶ್ವವನ್ನೇ ಕಾಡಿದ ಕೊರೊನಾಗೆ ಲಸಿಕೆ ಕಂಡು ಹಿಡಿದು ವಿದೇಶಗಳಿಗೆ ಹಂಚುವ ಮೂಲಕ ನಮ್ಮ ದೇಶ ಸದೃಢ ಹಾಗೂ ಸ್ವಾವಲಂಬಿ ಎಂಬುದನ್ನು ಸಾಬೀತುಪಡಿಸಿದೆ ಎಂದು ಕೇಂದ್ರ ಸರ್ಕಾರದ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ತಿಳಿಸಿದರು.
ಅವರು ತಾಲ್ಲೂಕಿನ ಜಿಗಣಿ ಸಮೀಪದ ಎಸ್. ವ್ಯಾಸ ವಿಶ್ವವಿದ್ಯಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀಯೋಗ ದಕ್ಷಿಣಾಮೂರ್ತಿ, ನವಗ್ರಹ ಹಾಗೂ ಧನ್ವಂತರಿ ದೇವರ ಪ್ರತಿಷ್ಠಾಪನೆ ಮತ್ತು ಕುಂಭಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು.
ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ಮೂಲಕ ಕೇಂದ್ರ ಸರ್ಕಾರ ಉಜ್ವಲ, ರೋಜಗಾರ್, ದೇಶೀಯ ಉತ್ಪನ್ನಗಳ ತಯಾರಿಕೆ ಹಾಗೂ ಸ್ವಉದ್ಯೋಗಕ್ಕೆ ಪ್ರೋತ್ಸಾಹ ಸೇರಿದಂತೆ ನವ ಭಾರತ ನಿರ್ಮಾಣಕ್ಕೆ ನೀತಿ ಆಯೋಗ ಸೇರಿದಂತೆ ಹತ್ತು ಹಲವು ಯೋಜನೆಗಳನ್ನು ನೀಡಿದ್ದಾರೆ ಎಂದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಮಾತನಾಡಿ, ಸಮಗ್ರ ವೈದ್ಯಕೀಯ ಪದ್ಧತಿಯಿಂದ ಜನ ಸಾಮಾನ್ಯರ ಬದುಕು ಉತ್ತಮವಾಗಿದೆ. ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನ ಅಳವಡಿಸಿಕೊಂಡು ಸಂಶೋಧನೆಗಳ ಮೂಲಕ ಸುಧಾರಿತ ಉಪಕರಣಗಳ ಬಳಕೆಯನ್ನು ಆರೋಗ್ಯ ಕ್ಷೇತ್ರಕ್ಕೆ ಪರಿಚಯಿಸಬೇಕಿದೆ. ಸರಳ ಜೀವನ, ಯೋಗ, ಧ್ಯಾನ, ಪ್ರಾಣಾಯಮಗಳನ್ನು ಮಾಡುವ ಮೂಲಕ ಆರೋಗ್ಯಕರ ಜೀವನವನ್ನು ನಡೆಸಲು ದಾರಿ ಮಾಡಿಕೊಳ್ಳಬೇಕಾಗಿದೆ ಎಂದರು.
ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಎಚ್.ಆರ್. ನಾಗೇಂದ್ರ, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ, ಆದಿಚುಂಚನಗಿರಿ ಪೀಠದ ಸೌಮ್ಯನಾಥ ಸ್ವಾಮೀಜಿ, ಕುಪ್ಪೂರು ಗದ್ದುಗೆ ಮಠದ ಯತೀಶ್ವರ ಶಿವಾಚಾರ್ಯ ಸ್ವಾಮೀಜಿ, ರಾಜಾಪುರ ಸಂಸ್ಥಾನ ಮಠದ ಡಾ.ರಾಜೇಶ್ವರ ಶಿವಾಚಾರ್ಯ ಸ್ವಾಮೀಜಿ, ಶೃಂಗೇರಿ ಪೀಠದ ಆಡಳಿತಾಧಿಕಾರಿ ಡಾ.ಗೌರಿಶಂಕರ್, ವಕೀಲರಾದ ಎಂ.ಟಿ. ನಾಣಯ್ಯ, ಕುಲಸಚಿವರಾದ ಪ್ರೊ.ಎಂ.ಕೆ. ಶ್ರೀಧರ್, ವಿಶ್ವವಿದ್ಯಾಲಯದ ದಯಾನಂದಸ್ವಾಮಿ, ಡಾ.ಬಿ.ಆರ್. ರಾಮಕೃಷ್ಣ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.