ADVERTISEMENT

‘ಶಿಕ್ಷಣದಿಂದ ಉತ್ತಮ ವ್ಯಕ್ತಿತ್ವ ಸಾಧ್ಯ’

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2019, 13:07 IST
Last Updated 6 ಆಗಸ್ಟ್ 2019, 13:07 IST
ವಿಜಯಪುರದ ರಾಷ್ಟ್ರೀಯ ಬಾಲಕಾರ್ಮಿಕರ ವಿಶೇಷ ಶಾಲೆಯಲ್ಲಿ ಆಯೋಜಿಸಿದ್ದ ಶಿಕ್ಷಣದ ಮಹತ್ವ ಕಾರ್ಯಕ್ರಮವನ್ನು ಸಿ.ಮುನಿಯಪ್ಪ ಉದ್ಘಾಟಿಸಿದರು
ವಿಜಯಪುರದ ರಾಷ್ಟ್ರೀಯ ಬಾಲಕಾರ್ಮಿಕರ ವಿಶೇಷ ಶಾಲೆಯಲ್ಲಿ ಆಯೋಜಿಸಿದ್ದ ಶಿಕ್ಷಣದ ಮಹತ್ವ ಕಾರ್ಯಕ್ರಮವನ್ನು ಸಿ.ಮುನಿಯಪ್ಪ ಉದ್ಘಾಟಿಸಿದರು   

ವಿಜಯಪುರ: ‘ಶಿಕ್ಷಣ ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುತ್ತದೆ. ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಂಡು, ಉತ್ತಮ ಶಿಕ್ಷಣ ಪಡೆಯಬೇಕು’ ಎಂದು ಭಾರತ ಜನಜಾಗೃತಿ ಸೇನೆ ರಾಜ್ಯ ಘಟಕದ ಅಧ್ಯಕ್ಷ ಸಿ.ಮುನಿಯಪ್ಪ ಹೇಳಿದರು.

ಇಲ್ಲಿನ ಇಂದಿರಾನಗರದಲ್ಲಿರುವ ಪ್ರಭಂಜನ ಎಜುಕೇಷನ್ ಟ್ರಸ್ಟ್, ರಾಷ್ಟ್ರೀಯ ಬಾಲ ಕಾರ್ಮಿಕರ ವಿಶೇಷ ಶಾಲೆಯಲ್ಲಿ ಡಾ.ಜಿ.ಪರಮೇಶ್ವರ ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ‘ಶಿಕ್ಷಣದ ಮಹತ್ವ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಆಸ್ತಿ–ಅಂತಸ್ತು ಮನುಷ್ಯರನ್ನು ಉತ್ತಮರನ್ನಾಗಿಸಲು ಸಾಧ್ಯವಿಲ್ಲ. ಗುಣಮಟ್ಟದ ಶಿಕ್ಷಣದಿಂದ ಒಳ್ಳೆಯ ವ್ಯಕ್ತಿತ್ವ ಬೆಳೆಯುತ್ತದೆ. ಈ ನಿಟ್ಟಿನಲ್ಲಿ ತುಮಕೂರಿನಲ್ಲಿ ಸಿದ್ದಾರ್ಥ ಅವರು ವಿದ್ಯಾಸಂಸ್ಥೆಗಳನ್ನು ಸ್ಥಾಪನೆ ಮಾಡಿ ಲಕ್ಷಾಂತರ ಮಂದಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಯಶಸ್ಸು ಕಂಡಿದ್ದಾರೆ’ ಎಂದು ಹೇಳಿದರು.

ADVERTISEMENT

ಪ್ರಭಂಜನ ಎಜುಕೇಷನ್ ಟ್ರಸ್ಟ್‌ನ ಅಧ್ಯಕ್ಷ ಡಾ.ವಿ.ಎನ್.ರಮೇಶ್ ಮಾತನಾಡಿ, ‘ಸಾಧನೆ ಮಾಡಲುಹಲವು ಅವಕಾಶಗಳಿದ್ದರೂ, ಹಲವು ಪೋಷಕರು ಆರ್ಥಿಕ ಮುಗ್ಗಟ್ಟಿಗೆ ಸಿಲುಕಿ, ಉದ್ಯೋಗಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ಇದೆ. ಅಂತಹ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ, ಬಾಲಕಾರ್ಮಿಕರ ವಸತಿ ಶಾಲೆ ತೆರೆದು, ಗುಣಮಟ್ಟದ ಶಿಕ್ಷಣ ನೀಡುವ ಕಾರ್ಯ ಮಾಡಲಾಗುತ್ತಿದೆ’ ಎಂದು ತಿಳಿಸಿದರು.

‘ಟ್ರಸ್ಟ್‌ ಮಕ್ಕಳಿಗೆ ಶಿಕ್ಷಣದ ಜೊತೆಗೆ, ಅಗತ್ಯವಿರುವ ಸಮವಸ್ತ್ರ, ಊಟ, ಕಲಿಕಾ ಸಾಮಗ್ರಿಗಳ ವಿತರಣೆ, ಆರೋಗ್ಯ ತಪಾಸಣೆಯಂತಹ ಹಲವು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ’ ಎಂದರು.

ಮುಖ್ಯಶಿಕ್ಷಕಿ ನಳಿನ, ಸಹಶಿಕ್ಷಕಿಯರಾದ ಮೀನಾಕ್ಷಿ, ವಾಣಿ, ಜ್ಯೋತಿ, ಸಹಾಯಕಿ ಶ್ಯಾಮಲಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.