ಆನೇಕಲ್ : ಮುಂದಿನ ಪೀಳಿಗೆಗಾಗಿ ಪರಿಸರವನ್ನು ಸಂರಕ್ಷಿಸಲು ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವ ಅವಶ್ಯಕತೆಯಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಮೇಲ್ವಿಚಾರಕ ಮಹೇಶ್ ಹೆಗಡೆ ತಿಳಿಸಿದರು.
ಅವರು ತಾಲ್ಲೂಕಿನ ಅತ್ತಿಬೆಲೆ ಸಮೀಪದ ಮಂಚನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ‘ಪರಿಸರ ಜಾಗೃತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಗರೀಕರಣ, ಕೈಗಾರೀಕರಣ ಹಾಗೂ ಮಾನವನ ದುರಾಸೆಯಿಂದಾಗಿ ಪರಿಸರ ಹಾಳಾಗಿ ಭೂಮಂಡಲದಲ್ಲಿ ತಾಪಮಾನ ಹೆಚ್ಚಾಗುತ್ತದೆ. ಇದರ ಪರಿಣಾಮವಾಗಿ ಹಲವಾರು ಸಮಸ್ಯೆಗಳು ತಲೆದೋರುತ್ತಿವೆ. ಭವಿಷ್ಯದಲ್ಲಿನ ಸವಾಲುಗಳನ್ನು ಎದುರಿಸಬೇಕಾದರೆ ಗಿಡ ಮರಗಳನ್ನು ಬೆಳೆಸುವ ಹಾಗೂ ಅರಣ್ಯವನ್ನು ರಕ್ಷಿಸುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ತಿಳಿಸಿದರು.
ಮಕ್ಕಳಲ್ಲಿ ಪ್ರಾರಂಭದ ಹಂತದಿಂದಲೇ ಪರಿಸರ ಪ್ರೇಮವನ್ನು ಬೆಳೆಸಬೇಕು. ಗಿಡ ಮರಗಳನ್ನು ಜೋಪಾನ ಮಾಡುವ ಕಾಳಜಿ ಮೂಡಿಸಬೇಕು ಎಂದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ಜಯಮ್ಮ ಮಾತನಾಡಿ, ‘ಪರಿಸರ ಸಂರಕ್ಷಣೆ ನಮ್ಮೆಲ್ಲರ ಬದ್ಧತೆಯಾಗಬೇಕು. ಮಕ್ಕಳು ಶಾಲೆಯಲ್ಲಿ ಮಾತ್ರವಲ್ಲದೇ ಸುತ್ತಲಿನ ಪ್ರದೇಶದಲ್ಲಿ ಗಿಡ ಮರಗಳನ್ನು ಬೆಳೆಸುವ ಕೆಲಸ ಮಾಡಬೇಕು’ ಎಂದರು.
ವಿದ್ಯಾರ್ಥಿಗಳಿಗಾಗಿ ಪರಿಸರ ಸಂರಕ್ಷಣೆಯ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಗ್ರಾಮ ಪಂಚಾಯಿತಿ ಸದಸ್ಯೆ ರತ್ನಮ್ಮ, ಮೇಲ್ವಿಚಾರಕಿ ಶ್ವೇತಾ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.