ವಿಜಯಪುರ: ಕೊರೊನಾ ಸಂಕಷ್ಟದಿಂದಾಗಿ ಇದುವರೆಗೂ ಸರಿಯಾಗಿ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗದೆ ಇರುವುದರಿಂದ ಮಕ್ಕಳ ಕಲಿಕೆಗೆ ಸ್ವಲ್ಪ ಮಟ್ಟಿಗೆ ಹಿನ್ನಡೆಯಾಗುತ್ತಿದ್ದು, ಮಕ್ಕಳನ್ನು ಮುಂದಿನ ದಿನಗಳಲ್ಲಿ ಸರ್ವ ರೀತಿಯಲ್ಲೂ ಸಜ್ಜುಗೊಳಿಸಲು ಶಿಕ್ಷಕರು ಸಿದ್ಧರಾಗಬೇಕು ಎಂದು ಕಾಂಗ್ರೆಸ್ ಮುಖಂಡ ಎ.ಸಿ.ಶ್ರೀನಿವಾಸ್ ಹೇಳಿದರು.
ಚನ್ನರಾಯಪಟ್ಟಣ ಹೋಬಳಿ ಬೆಟ್ಟಕೋಟೆ ರಾಮಕೃಷ್ಣ ಪ್ರೌಢಶಾಲೆಗೆ ಭೇಟಿ ನೀಡಿದ್ದ ಅವರು, ಶೈಕ್ಷಣಿಕ ಪ್ರಗತಿಗಾಗಿ ಶಾಲೆಗೆ ಅಗತ್ಯವಾಗಿರುವ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿ ಮಾತನಾಡಿದರು.
‘ಸರ್ಕಾರ, ಆನ್ ಲೈನ್ ತರಗತಿಗಳನ್ನು ನಡೆಸಲು ಖಾಸಗಿ ಶಾಲಾ ಕಾಲೇಜುಗಳಿಗೆ ಅವಕಾಶ ನೀಡಿದ್ದರಿಂದ ಗ್ರಾಮಾಂತರ ಪ್ರದೇಶಗಳಲ್ಲಿನ ಮಕ್ಕಳು ನೆಟ್ ವರ್ಕ್ ಸಮಸ್ಯೆ, ಮೊಬೈಲ್ ಕೊರತೆಯೂ ಸೇರಿದಂತೆ ತರಗತಿಗಳು ಕೇಳಲಿಕ್ಕೂ ಅವಕಾಶವಿಲ್ಲದೆ ಶಿಕ್ಷಣದಿಂದ ವಂಚಿತರಾಗುವಂತಾಗಿದೆ. ಗ್ರಾಮೀಣ ಭಾಗದ ಮಕ್ಕಳು ಶಿಕ್ಷಣ ವಂಚಿತರಾಗದಂತೆ ಶಿಕ್ಷಕರು ಗಮನಹರಿಸಬೇಕು. ಸರ್ಕಾರದಿಂದ ಸಿಗುವಂತಹ ಎಲ್ಲಾ ಸೌಲಭ್ಯಗಳನ್ನು ಮಕ್ಕಳಿಗೆ ತಲುಪಿಸುವಂತಹ ಕಾರ್ಯ ಮಾಡುವ ಮೂಲಕ ಅವರಿಗೆ ಶೈಕ್ಷಣಿಕವಾಗಿ ಹಿನ್ನಡೆಯಾಗದಂತೆ ನೋಡಿಕೊಳ್ಳಬೇಕು’ ಎಂದರು.
ಶಾಲೆಯ ಮುಖ್ಯಸ್ಥ ರಾಮಕೃಷ್ಣಪ್ಪ ಮಾತನಾಡಿ, ‘ನಗರ ಪ್ರದೇಶಗಳಿಗೆ ಹೋಲಿಸಿದರೆ, ಗ್ರಾಮಾಂತರ ಪ್ರದೇಶಗಳಲ್ಲಿನ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಸಿಗುತ್ತಿದೆ. ನಗರ ಪ್ರದೇಶಗಳ ಮಕ್ಕಳಿಗೆ ಪೈಪೋಟಿ ನೀಡುವ ಮಟ್ಟಕ್ಕೆ ಉತ್ತಮ ಫಲಿತಾಂಶವನ್ನೂ ನೀಡಿದ್ದೇವೆ. ಆದರೆ, ಎಲ್ಲಾ ಸೌಲಭ್ಯಗಳಿಗೂ ಸರ್ಕಾರದ ಮೇಲೆ ಅವಲಂಬಿತರಾದರೆ ಮುಂದಿನ ದಿನಗಳಲ್ಲಿ ಶೈಕ್ಷಣಿಕ ಗುಣಮಟ್ಟ ಕಾಪಾಡುವುದು ಕಷ್ಟವಾಗುತ್ತದೆ. ಆದ್ದರಿಂದ ಸಮುದಾಯ ಶೈಕ್ಷಣಿಕ ಕ್ಷೇತ್ರದ ಕಡೆಗೆ ಹೆಚ್ಚು ಗಮನಹರಿಸುವುದು ಅನಿವಾರ್ಯವಾಗುತ್ತದೆ ಎಂದರು.
ಮುಖಂಡರಾದ ಸೋಮಣ್ಣ, ಆಂಜಿನಪ್ಪ, ರವಿಕುಮಾರ್, ಮಂಜುನಾಥ್, ವಾಸು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.