ADVERTISEMENT

ಹೆನ್ನಾಗರ ಯಲ್ಲಮ್ಮ ರಥೋತ್ಸವ ವೈಭವ: ಝೇಂಕರಿಸಿದ ಉಧೋ ಉಧೋ ಯಲ್ಲಮ್ಮ

​ಪ್ರಜಾವಾಣಿ ವಾರ್ತೆ
Published 4 ಜನವರಿ 2026, 6:16 IST
Last Updated 4 ಜನವರಿ 2026, 6:16 IST
ಆನೇಕಲ್ ತಾಲ್ಲೂಕಿನ ಹೆನ್ನಾಗರ ಯಲ್ಲಮ್ಮ ದೇವಿ ದೇವಾಲಯದಲ್ಲಿ ದೇವಿಯ ರಥೋತ್ಸವ ವೈಭವದಿಂದ ನಡೆಯಿತು
ಆನೇಕಲ್ ತಾಲ್ಲೂಕಿನ ಹೆನ್ನಾಗರ ಯಲ್ಲಮ್ಮ ದೇವಿ ದೇವಾಲಯದಲ್ಲಿ ದೇವಿಯ ರಥೋತ್ಸವ ವೈಭವದಿಂದ ನಡೆಯಿತು   

ಆನೇಕಲ್: ತಾಲ್ಲೂಕಿನ ಹೆನ್ನಾಗರ ಯಲ್ಲಮ್ಮ ದೇವಿ ದೇವಾಲಯದಲ್ಲಿ ದೇವಿ ರಥೋತ್ಸವ ಶನಿವಾರ ವೈಭವದಿಂದ ನಡೆಯಿತು. ನೂರಾರು ಮಂದಿ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದರು.

ರಥೋತ್ಸವದ ಪ್ರಯುಕ್ತ ಶನಿವಾರ ದೇವಾಲಯದಲ್ಲಿ ದೇವಿಗೆ ಅಭಿಷೇಕ, ವಿಶೇಷ ಅಲಂಕಾರ ಮಾಡಲಾಗಿತ್ತು. ಜ್ಯೋತಿಲಿಂಗ ಸ್ವಾಮಿ ಗದ್ದಿಗೆಗೆ ಅಭಿಷೇಕ, ಹೋಮ ನೆರವೇರಿಸಲಾಯಿತು. ಮಧ್ಯಾಹ್ನ ಅಲಂಕೃತ ರಥದಲ್ಲಿ ದೇವಿಯ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಅರ್ಚಕರು ಧಾರ್ಮಿಕ ಪೂಜೆ ನೆರವೇರಿಸಿದರು.  ನಂತರ ಗುಮ್ಮಳಾಪುರ ಸಂಸ್ಥಾನ ಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು.

ನೆರೆದಿದ್ದ ಭಕ್ತರು ದೇವಿಯ ಜಯಘೋಷ ಮಾಡುತ್ತಾ ದವನ ಚುಚ್ಚಿದ ಬಾಳೆಹಣ್ಣನ್ನು ರಥಕ್ಕೆ ಎಸೆದು ತಮ್ಮ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು. ಉಧೋ ಉಧೋ ಯಲ್ಲಮ್ಮ ಘೋಷಣೆ ಕೂಗಿ ತಮ್ಮ ಭಕ್ತಿಯನ್ನು ಸಮರ್ಪಿಸಿದರು.

ADVERTISEMENT
ಆನೇಕಲ್ ತಾಲ್ಲೂಕಿನ ಹೆನ್ನಾಗರ ಯಲ್ಲಮ್ಮ ದೇವಿ ದೇವಾಲಯದಲ್ಲಿ ದೇವಿಯ ರಥೋತ್ಸವದಲ್ಲಿ ಪಾಲ್ಗೊಂಡಿದ್ದ ವೀರಗಾಸೆ ಕಲಾವಿದರು

ವೀರಗಾಸೆ, ತಮಟೆ, ಚಂಡೆ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳು ವೈಭವದ ಜಾತ್ರೆಗೆ ಮೆರುಗು ನೀಡಿದವು. ಮಹಿಳೆಯರು ಆಕರ್ಷಕ ಕೋಲಾಟ ಪ್ರದರ್ಶನ ನೀಡಿದರು.

ಹೆನ್ನಾಗರ ಗ್ರಾಮ ಪಂಚಾಯಿತಿ ಸೇರಿದಂತೆ ಜಿಗಣಿ ಹೋಬಳಿಯ ಸಾವಿರಾರು ಮಂದಿ ಭಕ್ತರು ವೈಭವದ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು. ಮಹಿಳೆಯರು ದೇವಿಗೆ ಮಡಿಲಕ್ಕಿ ಅರ್ಪಿಸಿ, ತಮ್ಮ ಭಕ್ತಿ,ಭಾವ ಮೆರದರು.

ಆನೇಕಲ್ ತಾಲ್ಲೂಕಿನ ಹೆನ್ನಾಗರ ಯಲ್ಲಮ್ಮ ದೇವಿ ದೇವಾಲಯದಲ್ಲಿ ದೇವಿಯ ಬ್ರಹ್ಮರಥೋತ್ಸವದ ದನಗಳ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ರಾಸುಗಳು

ಜಾತ್ರೆಯ ಅಂಗವಾಗಿ ಬೆಳಗಿನಿಂದ ಸಂಜೆಯವರೆಗೂ ಅನ್ನದಾಸೋಹ ಏರ್ಪಡಿಸಲಾಗಿತ್ತು. ದೇವಾಲಯದ ಆವರಣದಲ್ಲಿ ಅರವಂಟಿಕೆಗಳನ್ನು ಸ್ಥಾಪಿಸಿ ನೀರು ಮಜ್ಜಿಗೆ ಪಾನಕ, ಕೋಸಂಬರಿ ವಿತರಣೆ ಮಾಡಲಾಯಿತು.

ಆನೇಕಲ್ ತಾಲ್ಲೂಕಿನ ಹೆನ್ನಾಗರ ಯಲ್ಲಮ್ಮ ದೇವಿ ದೇವಾಲಯದಲ್ಲಿ ದೇವಿಯ ಬ್ರಹ್ಮರಥೋತ್ಸವದ ಪ್ರಯುಕ್ತ ದೇವಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು
ಹೆನ್ನಾಗರ ಯಲ್ಲಮ್ಮ ದೇವಿ ದೇವಾಲಯವು ಎರಡನೇ ಸವದತ್ತಿಯಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಧಾರ್ಮಿಕ ಕಾರ್ಯಗಳಿಂದ ಗ್ರಾಮದಲ್ಲಿ ಶಾಂತಿ ನೆಮ್ಮದಿ ದೊರೆಯುತ್ತದೆ
ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜ ಗುಮ್ಮಳಾಪುರ ಸಂಸ್ಥಾನ ಮಠ
ಗಮನ ಸೆಳೆದ ದನಗಳ ಜಾತ್ರೆ
  ಹೆನ್ನಾಗರ ಯಲ್ಲಮ್ಮ ದೇವಿ ದೇವಾಲಯದಲ್ಲಿ ಜಾತ್ರಾ ಮಹೋತ್ಸವ ಪ್ರಯುಕ್ತ ದನಗಳ ಜಾತ್ರೆಯನ್ನು ಆಯೋಜಿಸಲಾಗಿತ್ತು. ತಾಲ್ಲೂಕಿನ ವಿವಿಧೆಡೆಯ ರಾಸುಗಳು ಜಾತ್ರೆಯಲ್ಲಿ ಪಾಲ್ಗೊಂಡಿದ್ದವು. ರಾಸುಗಳನ್ನು ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಿದ್ದರು. ರಾಸುಗಳಿಗೆ ವಿಧವಿಧದ ಅಲಂಕಾರ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.