ದೇವನಹಳ್ಳಿ: ತಾಲ್ಲೂಕಿನ ಬೀರಸಂದ್ರದಲ್ಲಿರುವ ಜಿಲ್ಲಾಡಳಿತ ಭವನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ವೇಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಗೃಹ ಆರೋಗ್ಯ ಯೋಜನೆ ಕಾರ್ಯಗಾರ, ಜಿಲ್ಲೆಯಾದ್ಯಂತ ಗೃಹ ಆರೋಗ್ಯ ಯೋಜನೆ ವಿಸ್ತರಣೆ ಮತ್ತು ಆಶಾ ಕೈಪಿಡಿ ಬಿಡುಗಡೆ ಉದ್ಘಾಟನಾ ಕಾರ್ಯಕ್ರಮ ಶುಕ್ರವಾರ ನಡೆಯಿತು.
ಗೃಹ ಆರೋಗ್ಯ ಯೋಜನೆಯಡಿ ಆರೋಗ್ಯಾಧಿಕಾರಿಗಳು ಜಿಲ್ಲೆಯಾದ್ಯಂತ ಮನೆ ಮನೆ ಭೇಟಿ ನೀಡಿ 30 ವರ್ಷ ಮೇಲ್ಪಟ್ಟವರಿಗೆ ಆರೋಗ್ಯ ತಪಾಸಣೆ ನಡೆಸಲಿದ್ದಾರೆ ಎಂದು ಜಿ.ಪಂ ಸಿಇಒ ಕೆ.ಎನ್.ಅನುರಾಧ ಅವರು ತಿಳಿಸಿದರು.
ಈ ಯೋಜನೆಯು ಅಗತ್ಯ ಆರೋಗ್ಯ ಸೇವೆಗಳನ್ನು ನೇರವಾಗಿ ಸಾರ್ವಜನಿಕರ ಮನೆ ಬಾಗಿಲಿಗೆ ಒದಗಿಸುತ್ತದೆ. ವಿಶೇಷವಾಗಿ
ಗ್ರಾಮೀಣ ಭಾಗದ ಜನರಿಗೆ ಮನೆ ಬಾಗಿಲಿಗೆ ಆರೋಗ್ಯ ಸೇವೆ ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗಿದೆ. ಸಾಂಕ್ರಾಮಿಕವಲ್ಲದ ರೋಗಗಳ ಆರಂಭಿಕ ಪತ್ತೆ ಮಾಡಿ ಅದನ್ನು ತಡೆಗಟ್ಟಲು ಈ ಯೋಜನೆ ರೂಪಿಸಲಾಗಿದೆ.
ಯೋಜನೆಯಲ್ಲಿ 30 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ತಪಾಸಣೆ ನಡೆಸಲಾಗುತ್ತದೆ. ಮಧುಮೇಹ, ರಕ್ತದೊತ್ತಡ, ಬಾಯಿ, ಸ್ತನ, ಗರ್ಭಕಂಠದ ಕ್ಯಾನ್ಸರ್ ರೋಗಗಳ ತಪಾಸಣೆ ಮಾಡಲಾಗುವುದು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ತೆರಳಿ ಜನರಿಗೆ ರೋಗಗಳ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ರಕ್ತದೊತ್ತಡ, ಮಧುಮೇಹ ಕಾಯಿಲೆಯವರಿಗೆ ಔಷಧಿಯನ್ನು ಒದಗಿಸಲಾಗುವು. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದರು.
ಡಾ.ಸುಷ್ಮಾ ಮಾತನಾಡಿ, ಕಾಯಿಲೆಗಳ ಬಗ್ಗೆ ಮನೆ ಮನೆಗೆ ತೆರಳಿ ಚಿಕಿತ್ಸೆ ನೀಡುವುದರ ಜೊತೆಗೆ ವ್ಯಾಯಾಮ, ಆರೋಗ್ಯ ಪದ್ಧತಿ ಕುರಿತು ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಕ್ಕಾ ಕೃಷ್ಣಾ ರೆಡ್ಡಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಹೇಮಾವತಿ ಎ.ವಿ, ಡಾ.ಸಿಮಾ, ಡಾ.ನಾಗೇಶ್, ಡಾ.ನಾಗರಾಜ್, ಡಾ.ಕೋಮಲಾ ಹಾಗೂ ಜಿಲ್ಲಾ ಮತ್ತು ತಾಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.