ವಿಜಯಪುರ (ದೇವನಹಳ್ಳಿ): ಇಲ್ಲಿನ ನೀಲಗೀರಿಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ದೇವನಹಳ್ಳಿ ತಾಲ್ಲೂಕು ಒಕ್ಕಲಿಗರ ಸಂಘದಿಂದ ಹಾಗೂ ಶಾಲಾ ಆಡಳಿತ ಮಂಡಳಿಯಿಂದ ಸೋಮವಾರ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಿತು.
ದೇವನಹಳ್ಳಿ ತಾಲ್ಲೂಕು ಒಕ್ಕಲಿಗರ ಸಂಘದಿಂದ 28 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಮೊಬೈಲ್, ಟ್ಯಾಬ್ ಹಾಗೂ ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು. ಶಾಲೆಯ ಆಡಳಿತ ಮಂಡಳಿಯಿಂದ ಎಸ್ಎಸ್ಎಲ್ಸಿಯಲ್ಲಿ ರಾಜ್ಯಕ್ಕೆ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಾದ ಭಾವನಾಗೆ ₹25 ಸಾವಿರ, ಪವನ್ ₹10 ಸಾವಿರ, ಐಶ್ವರ್ಯ ₹5 ಸಾವಿರ ನಗದು ಬಹುಮಾನ ನೀಡಿ ಸತ್ಕರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ಬೈರೇಗೌಡ, ಯಾವುದೇ ವ್ಯಕ್ತಿ ಜೀವನದಲ್ಲಿ ಏಳಿಗೆಯಾಗಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಕೇವಲ ಅಂಕ ಪಟ್ಟಿಗಾಗಿ ವಿದ್ಯಾರ್ಥಿಗಳು ಓದಬಾರದು, ಜ್ಞಾನ ಸಂಪಾದನೆಗೆ ಓದಬೇಕು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಸಿ.ಮಂಜುನಾಥ್, ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳುವ ಪುರಸ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಬುನಾದಿಯಾಗಲಿದೆ. ಆರ್ಥಿಕವಾಗಿ ಹಿಂದುಳಿದಂತಹ ಪ್ರತಿಭಾನ್ವಿತ ಮಕ್ಕಳಿಗೆ ಸಂಘದಿಂದ ಪ್ರೋತ್ಸಾಹಿಸಿದರೆ ಅವರು ಮತ್ತಷ್ಟು ಸಾಧನೆ ಮಾಡಲು ಅನುಕೂಲವಾಗಲಿದೆ ಎಂದರು.
ವಿ.ಎಸ್.ಎಸ್ ಸಂಘದ ಅಧ್ಯಕ್ಷ ಹಾಗೂ ನೀಲಗೀರಿಶ್ವರ ವಿದ್ಯಾನಿಕೇತನ ಶಾಲೆಯ ಅಧ್ಯಕ್ಷ ಎಂ.ವೀರಣ್ಣ, ಒಕ್ಕಲಿಗ ಸಮುದಾಯದಲ್ಲಿನ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಮುಂದಿನ ದಿನಗಳಲ್ಲಿ ತಾಲ್ಲೂಕು ಮಟ್ಟದ ವಿದ್ಯಾ ಸಂಸ್ಥೆ, ಹಾಸ್ಟಲ್ ವ್ಯವಸ್ಥೆ ಕಲ್ಪಿಸುವಂತೆ ತಾಲ್ಲೂಕು ಒಕ್ಕಲಿಗರ ಸಂಘಕ್ಕೆ ಮನವಿ ಮಾಡಿದರು.
ಸಂಘದ ಕಾರ್ಯದರ್ಶಿ ಜೊನ್ನಹಳ್ಳಿ ಮುನಿರಾಜು, ಖಜಾಂಚಿ ಎವಿ.ಎಂ.ನಾಗರಾಜ್, ಪುರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಸಂಸ್ಥೆಯ ಕಾರ್ಯದರ್ಶಿ ಸಿ.ನಾರಾಯಣಸ್ವಾಮಿ, ಮಂಡಳಿಯ ನಿರ್ದೇಶಕರಾದ ವಿ.ಎಂ.ನಾಗರಾಜ್, ಕೇಶವಪ್ಪ, ಹನುಮಂತಪ್ಪ, ತೋಟದಪ್ಪ, ವಿ.ವೆಂಕಟೇಶ್, ಕೇಶವಣ್ಣ, ಯಲಿಯೂರು ಆನಂದ್ ಶಾಲೆಯ ಪ್ರಾಂಶುಪಾಲ ಸೋಮಶೇಖರ್, ಶಿಕ್ಷಕರು ಹಾಗೂ ಸಮುದಾಯದ ಮುಖಂಡರು ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.