
ಹೊಸಕೋಟೆ: ತಾಲ್ಲೂಕಿನ ದೇವನಗೊಂದಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಡಿ.ಹೊಸಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಮಕ್ಕಳ ವಿಶೇಷ ಗ್ರಾಮ ಸಭೆ ಹಾಗೂ ಮಕ್ಕಳ ಹಳ್ಳಿ ಸಂತೆ ನಡೆಯಿತು.
ಮಕ್ಕಳು ವಿವಿಧ ಮಳಿಗೆ ತೆರೆದು ವ್ಯಾಪಾರ ವಹಿವಾಟು ನಡೆಸಿದರು. ಯಾವ ವ್ಯಾಪಾರಿಗೂ ತಾವು ಕಮ್ಮಿ ಇಲ್ಲ ಎನ್ನುವಂತೆ ಕೂಗುತ್ತಾ ರಿಯಾಯಿತಿ ನೀಡಿ ಗ್ರಾಹಕರನ್ನು ಸೆಳೆಯುವ ಪ್ರಯತ್ನ ಮಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ ಮಾತನಾಡಿ, ಮಕ್ಕಳಲ್ಲಿರುವ ವ್ಯವಹಾರಿಕ ಜ್ಞಾನ ವೃದ್ದಿಯಾಗಲು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂತೆ ಆಯೋಜಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಪ್ರತಿ ಮಗುವಿಗೆ ಪ್ರತಿ ವರ್ಷ ಸರ್ಕಾರ ₹45 ಸಾವಿರ ಖರ್ಚು ಮಾಡುತ್ತಿದೆ. ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗುವ ಎಲ್ಲಾ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ. ಹೀಗಾಗಿ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕೆಂದು ಮನವಿ ಮಾಡಿದರು.
ದೇವನಗೊಂದಿ ಗ್ರಾಮ ಪಂಚಾಯತಿ ಅಧ್ಯಕ್ಷೆ ರತ್ನ ಗೋವಿಂದರಾಜ್ ಮಾತನಾಡಿದರು. ಉಪಾಧ್ಯಕ್ಷರಾದ ಹರೀಶ್, ಪಿಡಿಓ ಹರೀಶ್, ನಿವೃತ್ತ ಪ್ರಾಂಶುಪಾಲ ಎಂ.ಆರ್. ಶಿವಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಖಜಾಂಚಿ ಟಿ.ಸೊಣ್ಣಪ್ಪ, ಸಂಘಟನಾ ಕಾರ್ಯದರ್ಶಿ ಸುಬ್ಬರಾಯಪ್ಪ, ತಾಲ್ಲೂಕು ನೌಕರರ ಅಧ್ಯಕ್ಷ ಮುನಿಶಾಮಯ್ಯ, ಎಸ್ಡಿಎಂಸಿ ಅಧ್ಯಕ್ಷ ಪ್ರದೀಪ್, ರಂಗನಾಥ ಶಾಲೆಯ ಅಧ್ಯಕ್ಷ ಕೇಶವಮೂರ್ತಿ, ಸಿಆರ್ಪಿ ಶ್ರೀನಿವಾಸ್, ಗ್ರಾಪಂ ಸದಸ್ಯರಾದ ಶಿವಶಂಕರ್, ಪದ್ಮಿನಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.