ಹೊಸಕೋಟೆ: ತಾಲ್ಲೂಕಿನ ಅನುಗೊಂಡನಹಳ್ಳಿ ಮತ್ತು ಹೊಸಕೋಟೆ ನಗರಕ್ಕೆ ಸಂಪರ್ಕಕ್ಕೆ ತೊಡಕು ಉಂಟು ಮಾಡಿದ್ದ ತಾಲ್ಲೂಕಿನ ಕೊರಳೂರು ಗ್ರಾಮದ ರೈಲ್ವೆ ಮೇಲ್ಸೇತುವೆ ಮತ್ತು ದೇವನಗೊಂದಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ರಾಜ್ಯ ಸರ್ಕಾರವು ಅನುದಾನ ಬಿಡುಗಡೆಗೆ ಅನುಮೋದನೆ ನೀಡಿದೆ.
ಈ ಪ್ರಕಾರ ಕೊರಳೂರು ರೈಲ್ವೆ ಮೇಲ್ಸೇತುವೆಗೆ ₹97.27 ಕೋಟಿ ಮತ್ತು ದೇವನಗೊಂದಿ ರೈಲ್ವೆ ಮೇಲ್ಸೇತುವೆಗೆ ₹12 ಕೋಟಿ ಸೇರಿದಂತೆ ಒಟ್ಟಾರೆ ₹109.27 ಕೋಟಿ ಅನುದಾನ ಸಿಕ್ಕಿದೆ. ಈ ಮೇಲ್ಸೇತುವೆ ನಿರ್ಮಾಣದಿಂದ ದಶಕಗಳ ಸಂಚಾರ ದಟ್ಟಣೆ ಸಮಸ್ಯೆಗೆ ಮುಕ್ತಿ ದೊರಕಲಿದೆ ಎಂದು ತಿಳಿದುಬಂದಿದೆ.
ರಾಷ್ಟ್ರೀಯ ಹೆದ್ದಾರಿ 207ರ ಕೊರಳೂರು ಗ್ರಾಮದ ಬಳಿ ಹಾದು ಹೋಗಿರುವ ರೈಲ್ವೆ ಹಳಿಗೆ ಅಡ್ಡಲಾಗಿ ಸಣ್ಣ ನೀರಾವರಿ ಮತ್ತು ರಾಜ್ಯ ಲೋಕೋಪಯೋಗಿ ಇಲಾಖೆ ಜಂಟಿಯಾಗಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಿವೆ.
ತಾಲ್ಲೂಕಿನ ದೇವನಗೊಂದಿ ಗ್ರಾಮದ ರೈಲ್ವೆ ನಿಲ್ದಾಣದ ಬಳಿ ಲೋಕೋಪಯೋಗಿ ಮತ್ತು ರೈಲ್ವೆ ಇಲಾಖೆ ಸಹಯೋಗದಲ್ಲಿ ನಿರ್ಮಾಣವಾಗಬೇಕಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಅರ್ಧಕ್ಕೆ ನಿಂತಿತ್ತು. ಇದರಿಂದ ಸಂಚಾರ ದಟ್ಟಣೆ ಎದುರಾಗಿತ್ತು. ಈ ಸಮಸ್ಯೆ ಕುರಿತು ಶಾಸಕರು ಮತ್ತು ಅಧಿಕಾರಿಗಳಿಗೆ ಹಲವು ಬಾರಿ ದೂರು ನೀಡಲಾಗಿತ್ತು. ಜೊತೆಗೆ ‘ಪ್ರಜಾವಾಣಿ’ ಪತ್ರಿಕೆಯು ಈ ಸಂಬಂಧ ಹಲವು ವರದಿಗಳನ್ನು ಪ್ರಕಟಿಸಿ, ಗಮನ ಸೆಳೆಯುವ ಕೆಲಸ ಮಾಡಿತ್ತು. ಇದೀಗ ಕಾಮಗಾರಿ ಆರಂಭಕ್ಕೆ ಅನುದಾನ ಬಿಡುಗಡೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕೊರಳೂರು ಬಳಿ ಕೆ.ಸಿ. ವ್ಯಾಲಿ ನೀರಿನ ಪೈಪ್ಲೈನ್ ಹಾದು ಹೋಗಿದೆ. ಹಾಗಾಗಿ, ಮೇಲ್ಸೇತುವೆ ನಿರ್ಮಾಣ ಸಣ್ಣ ನೀರಾವರಿ ಹಾಗೂ ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಬರಲಿದೆ. ಎರಡೂ ಇಲಾಖೆಯಿಂದ ಅಗತ್ಯ ತಾಂತ್ರಿಕ ಕಾರ್ಯ ಮುಗಿಸಿ ಅಂತಿಮವಾಗಿ ಅಗತ್ಯ ಅನುದಾನ ₹97.27ಕೋಟಿಗೆ ಅನುಮೋದನೆ ಸಿಕ್ಕಿದೆ. ಇನ್ನೊಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಸಂಚಾರ ದಟ್ಟಣೆಗೆ ಮುಕ್ತಿ ದೊರೆಯಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.