
ಹೆಬ್ಬಗೋಡಿ (ಆನೇಕಲ್): ಹುಸ್ಕೂರು ಮದ್ದೂಮ್ಮ ದೇವಿ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಹೆಬ್ಬಗೋಡಿ ಎಸ್ಎಫ್ಎಸ್ ಕಾಲೇಜು ಸಭಾಂಗಣದಲ್ಲಿ ಸೋಮವಾರ ಜಿಲ್ಲಾಧಿಕಾರಿ ಜಗದೀಶ್ ಮತ್ತು ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ವಿಭಾಗದ ಡಿಸಿಪಿ ಎಂ.ನಾರಾಯಣ್ ಅವರು ಪೂರ್ವಭಾವಿ ಸಭೆ ನಡೆಸಿ ಅಧಿಕಾರಿಗಳು ಹಾಗೂ ಗ್ರಾಮಸ್ಥರಿಗೆ ಮಾರ್ಗದರ್ಶನ ನೀಡಿದರು.
ಜಿಲ್ಲಾಧಿಕಾರಿ ಜಗದೀಶ್ ಮಾತನಾಡಿ, ಲಕ್ಷಾಂತರ ಭಕ್ತರು ಪಾಲ್ಗೊಳ್ಳುವ ಈ ಐತಿಹಾಸಿಕ ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ತಾಲ್ಲೂಕು ಆಡಳಿತ, ಪೊಲೀಸ್, ಬೆಸ್ಕಾಂ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಹಿಂದೆ 150 ಅಡಿಗೂ ಎತ್ತರದ ತೇರು ಕಟ್ಟಲಾಗುತ್ತಿತ್ತು. ಈ ಬಾರಿ ಸಾವಿರಾರು ಭಕ್ತರ ದಟ್ಟಣೆ ದೃಷ್ಟಿಯಿಂದ ತೇರಿನ ಎತ್ತರ 80 ಅಡಿ ಮೀರದಂತೆ ಗ್ರಾಮಸ್ಥರು ನಿಗಾ ವಹಿಸಬೇಕು. ಜಾತ್ರೆಗೆ ಸಂಬಂಧಿಸಿದ ಅರ್ಜಿಗಳನ್ನು ಗ್ರಾಮದ ಮುಖಂಡರು ಹೆಬ್ಬಗೋಡಿ ಠಾಣೆಗೆ ಸಲ್ಲಿಸಿದರೆ ಸಂಬಂಧಪಟ್ಟ ಇಲಾಖೆಗಳು ಸ್ವತಃ ಅನುಮತಿ ನೀಡಲಿವೆ. ಇದರಿಂದ ಗ್ರಾಮಸ್ಥರು ಕಚೇರಿಗಳಿಗೆ ಅಲೆದಾಡುವುದು ತಪ್ಪಲಿದೆ.
ಬೆಸ್ಕಾಂ ಇಲಾಖೆ ಜಾತ್ರೆ ದಿನದಂದು ವಿದ್ಯುತ್ ತಂತಿ ತೆರವುಗೊಳಿಸಲು ಮುಂಚಿತವಾಗಿ ಗ್ರಾಮಗಳಿಗೆ ಭೇಟಿ ನೀಡಿ ಸಿಬ್ಬಂದಿ ನಿಯೋಜಿಸಬೇಕು. ಸ್ಥಳೀಯ ಪಂಚಾಯಿತಿಗಳು ರಸ್ತೆ ಗುಂಡಿ ಮುಚ್ಚಿ ಮೂಲಸೌಕರ್ಯ ಕಲ್ಪಿಸಬೇಕು. ಪೊಲೀಸ್ ಇಲಾಖೆ ಶಾಂತಿ ಮತ್ತು ಸುವ್ಯವಸ್ಥೆಗಾಗಿ ಸಿಬ್ಬಂದಿ, ಚೆಕ್ ಪೋಸ್ಟ್ ಮತ್ತು ಪೊಲೀಸ್ ಚೌಕಿ ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶಿಸಿದರು.
ಸಭೆಯಲ್ಲಿ ಡಿಸಿಪಿ ಗೋಪಾಲ್, ಎಎಸ್ಪಿ ವೆಂಕಟೇಶ್ ಪ್ರಸನ್ನ, ಉಪವಿಭಾಗಾಧಿಕಾರಿ ವಿಶ್ವನಾಥ್, ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ್, ಪೌರಾಯುಕ್ತ ಬಿ.ಎಲ್.ರಾಜೇಂದ್ರ, ದೇವಾಲಯದ ಕನ್ವೀನರ್ ಕೆ.ಪಾಪಣ್ಣ, ಎಸಿಪಿ ಸತೀಶ್, ಪೊಲೀಸ್ ಇನ್ಸ್ಪೆಕ್ಟರ್ ಸೋಮಶೇಖರ್, ಸಂಜೀವ್ ಮಹಾಜನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.