ಆನೇಕಲ್ : ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಾಣಕ್ಕೆ ಶಾಸಕ ಬಿ.ಶಿವಣ್ಣ ಭೂಮಿಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಇಂದಿರಾ ಕ್ಯಾಂಟಿನ್ ಬಡವರಿಗೆ ಹಸಿವು ನೀಗಿಸಲು ಉಪಯುಕ್ತವಾಗಿದೆ. ಬೊಮ್ಮಸಂದ್ರ ಕೈಗಾರಿಕ ಪ್ರದೇಶ ಆಗಿರುವುದರಿಂದ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರಿದ್ದಾರೆ. ಅವರಿಗೆ ಅನುಕೂಲ ಕಲ್ಪಿಸಲು ಇಂದಿರಾ ಕ್ಯಾಂಟಿನ್ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಆನೇಕಲ್ ಪುರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ಇಂದಿರಾ ಕ್ಯಾಂಟಿನ್ ನಡೆಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪಂಚಾಯಿತಿ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ಕ್ಯಾಂಟೀನ್ ನಿರ್ಮಿಸಲಾಗುವುದು ಎಂದು ತಿಳಿಸಿದರು.
ಬೊಮ್ಮಸಂದ್ರ ಕೈಗಾರಿಕ ಪ್ರದೇಶ ವ್ಯಾಪ್ತಿಯಲ್ಲಿ ರಸ್ತೆ, ಕುಡಿಯುವ ನೀರು, ಬೀದಿ ದೀಪ, ಒಳಚರಂಡಿ ವ್ಯವಸ್ಥೆ ಸೇರಿದಂತೆ ಮೂಲ ಸೌಕರ್ಯ ಕಲ್ಪಿಸಲಾಗುವುದು. ತಾಲ್ಲೂಕಿನ ಎಲ್ಲಾ ಗ್ರಾಮಗಳಿಗೂ ಕಾವೇರಿ ಸಂಪರ್ಕ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಮೆಟ್ರೊ ವಿಸ್ತರಣೆಯಿಂದಾಗಿ ಈ ಭಾಗದ ಸಮಗ್ರ ಅಭಿವೃದ್ಧಿಗೆ ಮೆಟ್ರೊ ಪೂರಕವಾಗಲಿದೆ ಎಂದು ತಿಳಿಸಿದರು.
ಬೊಮ್ಮಸಂದ್ರ ಕೈಗಾರಿಕ ಮಾಲೀಕರ ಸಂಘದ ಅಧ್ಯಕ್ಷ ಪ್ರಸಾದ್ ಮಾತನಾಡಿ, ಅಭಿವೃದ್ಧಿಗೆ ಕೈಗಾರಿಕ ಸಂಘ ಬದ್ಧವಾಗಿದೆ. ಕಂಪನಿಗಳ ಸಿಎಸ್ಆರ್ ನಿಧಿಯಡಿಯಲ್ಲಿ ಸರ್ಕಾರಿ ಶಾಲೆ ಮತ್ತು ಆಸ್ಪತ್ರೆಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು. ಕೈಗಾರಿಕ ಸಂಘವು ಅಭಿವೃದ್ಧಿಗೆ ಸದಾ ಬೆನ್ನೆಲುಬಾಗಿರುತ್ತದೆ ಎಂದರು.
ಬೊಮ್ಮಸಂದ್ರ ಪುರಸಭೆ ಅಧ್ಯಕ್ಷ ಗೋಪಾಲ್, ಸದಸ್ಯರಾದ ಛಲಪತಿ, ಅಭಿಷೇಕ್, ಮುಖ್ಯಾಧಿಕಾರಿ ರಾಜೇಂದ್ರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.