ತೂಬಗೆರೆ (ದೊಡ್ಡಬಳ್ಳಾಪುರ): ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ತಡೆಹಿಡಿಯಲಾಗಿದ್ದ ಕಾಮಗಾರಿಗಳಿಗೆ ಈಗ ಚಾಲನೆ ದೊರೆತಿದೆ. ಕಂಚಿಗನಾಳ ಗ್ರಾಮದ ರಸ್ತೆಗೆ ಅಭಿವೃದ್ಧಿಗೆ ₹1 ಕೋಟಿ ಟೆಂಡರ್ ಮುಕ್ತಾಯವಾಗಿದ್ದು ಸದ್ಯದಲ್ಲೇ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.
ತಾಲ್ಲೂಕಿನ ತೂಬಗೆರೆ ದೊಡ್ಟತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದ ಸಭೆಯಲ್ಲಿ ಬಗರ್ ಹುಕುಂ ಸಾಗುವಳಿದಾರ ರೈತರಿಗೆ ಹಕ್ಕುಪತ್ರ ವಿತರಣೆ ಮಾಡಿ ಮಾತನಾಡಿದರು.
ತೂಬಗೆರೆ ಹೋಬಳಿಗೆ ಒಂದು ವರ್ಷದಲ್ಲಿ ₹50 ಕೋಟಿ ವಿವಿಧ ಅಭಿವೃದ್ಧಿ ಕಾಮಗಾರಿ ಮಂಜೂರು ಮಾಡಿಸಲಾಗಿದೆ. ಇವುಗಳಲ್ಲಿ ಬಹುತೇಕ ಕಾಮಗಾರಿ ಪ್ರಗತಿಯಲ್ಲಿದ್ದು ಕೆಲ ಕಾಮಗಾರಿ ಮಾತ್ರ ಪ್ರಾರಂಭವಾಗಬೇಕಿದೆ. ತೂಬಗೆರೆ ಹೋಬಳಿಯಲ್ಲಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆಗಾಗಿ ಘಾಟಿ ಕ್ಷೇತ್ರದ ಸಮೀಪದ ವಿಶ್ವೇಶ್ವರಯ್ಯ ಪಿಕಪ್ ಡ್ಯಾಂ ಅಭಿವೃದ್ಧಿ ಹಾಗೂ ನೀರು ತರುವ ಯೋಜನೆಗೆ ಹಣ ನೀಡುವಂತೆ ಸರ್ಕಾರಕ್ಕೆ ಯೋಜನ ವರದಿ ನೀಡಲಾಗಿದೆ ಎಂದರು.
ತೂಬಗೆರೆ ಹೋಬಳಿಯಲ್ಲಿ ಅಕ್ರಮ ಸಕ್ರಮ ಯೋಜನೆಯಲ್ಲಿ 94ಸಿಯಲ್ಲಿ ಅರ್ಜಿ ಸಲ್ಲಿಸಿದ್ದ ಫಲಾನುಭವಿಗಳಿಗೆ, ಬಗರ್ ಹುಕುಂ ಸಾಗುವಳಿದಾರರಿಗೆ ಬಾಕಿ ಇರುವ ಪತ್ರಗಳನ್ನು ಶೀಘ್ರದಲ್ಲೇ ವಿತರಿಸಲಾಗುವುದು. ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ರೈತರ ಪರವಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಸರ್ಕಾರಿ ಕಚೇರಿಗಳನ್ನು ಸಂಪರ್ಕಿಸುವ ಮೂಲಕ ಮಾಹಿತಿ ಪಡೆಯಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಅಪ್ಪಯ್ಯ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೆಂಕಟೇಶ್ಬಾಬು, ಸೊಣ್ಣಪ್ಪ, ತೂಬಗೆರೆ ಹೋಬಳಿ ಜೆಡಿಎಸ್ ಘಟಕದ ಅಧ್ಯಕ್ಷ ದೇವರಾಜ್, ಜೆಡಿಎಸ್ ಯುವ ಮುಖಂಡ ಗೌರೀಶ್, ಗ್ರಾಮ ಪಂಚಾಯಿತಿ ಸದಸ್ಯ ವೆಂಕಟೇಶ್, ಸುಬ್ರಮಣಿ, ನಾರಾಯಣಪ್ಪ, ಎಚ್.ನಾರಾಯಣಪ್ಪ, ಮುಖಂಡರಾದ ಎ.ನರಸಿಂಹಯ್ಯ, ಶ್ರೀರಾಮ್,ಲಕ್ಷ್ಮೀನಾರಾಯಣ, ಗುರುಪ್ರಸಾದ್, ರಾಜಶೇಖರ್, ವಾಸು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.