ವಿಜಯಪುರ(ಬೆಂ.ಗ್ರಾಮಾಂತರ): ದೇವನಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದಿಂದ 2023 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಪರಿಶಿಷ್ಟ ಜಾತಿಯ ಎಡಗೈ ಸಮುದಾಯದ ಪ್ರಮುಖರು ಮಂಗಳವಾರ ಕೆ.ಎಚ್.ಮುನಿಯಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಬೆಂಗಳೂರಿನ ನಿವಾಸದಲ್ಲಿ ಭೇಟಿಯಾದ ಕ್ಷೇತ್ರದ ಸಮುದಾಯ ಮುಖಂಡರ ನಿಯೋಗ, ದೇವನಹಳ್ಳಿ ಮೀಸಲು ಕ್ಷೇತ್ರವಾದಾಗಿನಿಂದ ಕಾಂಗ್ರೆಸ್ ಪಕ್ಷದಿಂದ ಇದುವರೆಗೂ ಎಡಗೈ ಸಮುದಾಯಕ್ಕೆ ಅವಕಾಶ ನೀಡಿಲ್ಲ. ಈ ಬಾರಿ ನಮ್ಮ ಸಮುದಾಯಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.
ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ. ಆದ್ದರಿಂದ ನೀವು ಸ್ಪರ್ಧೆ ಮಾಡಿದರೆ ಗೆಲುವು ಖಚಿತ. ಸಮುದಾಯಕ್ಕೂ ನ್ಯಾಯ ಸಿಗಲಿದೆ ಎಂದು ಮುನಿಯಪ್ಪ ಅವರಿಗೆ ನಿಯೋಗ ಮನವಿ ಮಾಡಿದೆ.
‘ನಾನು ಇದುವರೆಗೂ ದೇವನಹಳ್ಳಿಯಿಂದ ಸ್ಪರ್ಧೆ ಬಯಸಿಲ್ಲ. ಹಲವಾರು ಮುಖಂಡರು ಬಂದು ಒತ್ತಾಯ ಮಾಡುತ್ತಿದ್ದಾರೆ. ನಾನು ರಾಷ್ಟ್ರ ರಾಜಕಾರಣದಲ್ಲಿ ಇದ್ದವನು. ರಾಜ್ಯ ರಾಜಕಾರಣದ ಕುರಿತು ಚಿಂತನೆ ಮಾಡಿಲ್ಲ. ಒಂದು ವೇಳೆ ಪಕ್ಷದ ಹೈಕಮಾಂಡ್ ಸೂಚಿಸಿದರೆ ಸ್ಪರ್ಧಿಸುವ ಬಗ್ಗೆ ತೀರ್ಮಾನಿಸುತ್ತೇನೆ’ ಎಂದು ಕೆ.ಎಚ್. ಮುನಿಯಪ್ಪ ತಮ್ಮನ್ನು ಸಂಪರ್ಕಿಸಿದ ‘ಪ್ರಜಾವಾಣಿ’ಗೆ ದೂರವಾಣಿಯಲ್ಲಿ ಪ್ರತಿಕ್ರಿಯಿಸಿದರು.
ಚಂದ್ರಪ್ಪ, ಜಿ.ಪಂ. ಮಾಜಿ ಸದಸ್ಯ ಚಂದೇನಹಳ್ಳಿ ಮುನಿಯಪ್ಪ, ಬುಳ್ಳಹಳ್ಳಿ ರಾಜಪ್ಪ, ನಾರಾಯಣಪ್ಪ, ಮುನಿರಾಜು, ಜಾಲಿಗೆ ಮುನಿರಾಜು ನಿಯೋಗದಲ್ಲಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.