ADVERTISEMENT

ಪಾರಿವಾಳ ಗುಟ್ಟದಲ್ಲಿ ಜಿಲ್ಲಾ ಕನ್ನಡ ಭವನ ನಿರ್ಮಾಣಕ್ಕೆ ಶೀಘ್ರ ಕ್ರಮ: ಮುನಿಯಪ್ಪ 

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2025, 1:46 IST
Last Updated 2 ನವೆಂಬರ್ 2025, 1:46 IST
ದೇವನಹಳ್ಳಿಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌. ಮುನಿಯಪ್ಪ ಪುಷ್ಪ ನಮನ ಸಲ್ಲಿಸಿದರು

ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಗೆ ಪುಪ್ಪ ನಮನ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ
ದೇವನಹಳ್ಳಿಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವದಲ್ಲಿ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌. ಮುನಿಯಪ್ಪ ಪುಷ್ಪ ನಮನ ಸಲ್ಲಿಸಿದರು ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಗೆ ಪುಪ್ಪ ನಮನ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌.ಮುನಿಯಪ್ಪ   

ದೇವನಹಳ್ಳಿ: ಜಿಲ್ಲಾ ಕನ್ನಡ ಭವನ ನಿರ್ಮಾಣಕ್ಕೆ ದೇವನಹಳ್ಳಿ ಪಾರಿವಾಳ ಗುಟ್ಟದ ಸಮೀಪದಲ್ಲಿ ಎಕರೆ 20 ಗುಂಟೆ ಜಾಗ ಗುರುತಿಸಲಾಗಿದೆ. ಭವನ ನಿರ್ಮಾಣಕ್ಕೆ ಸಂಬಂಧಿಸಿ ಸಂಬಂಧಪಟ್ಟ ಇಲಾಖೆ ಜೊತೆ ಚರ್ಚಿಸಿ ಶೀಘ್ರ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ವತಿಯಿಂದ ಶನಿವಾರ ನಡೆದ ಕರ್ನಾಟಕ ರಾಜ್ಯೋತ್ಸವ ದಿನಾಚರಣೆಯಲ್ಲಿ ಮಾತನಾಡಿದರು.

ಜಿಲ್ಲೆಯಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ನಿತ್ಯೋತ್ಸವ ಕವಿ ಕೆ.ಎಸ್.ನಿಸಾರ್ ಅಹಮದ್, ಪ್ರಖ್ಯಾತ ಗಾಯಕ ಸಿ.ಅಶ್ವತ್ಥ್, ಕಮಲಾ ಹಂಪನಾ, ವಿ ಸೀತಾರಾಮಯ್ಯ, ತಾ.ಪು. ವೆಂಕಟರಾಮ್, ಸಮೇತನಹಳ್ಳಿ ರಾಮಯ್ಯ ಸೇರಿದಂತೆ ಇನ್ನೂ ಹಲವು ಸಾಹಿತಿಗಳು, ಕಲಾವಿದರು ಹಾಗೂ ಸಮಾಜ ಸೇವಕರು ಆಯಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಸ್ಮರಿಸಿದರು.

ADVERTISEMENT

‘ಕಾಂಗ್ರೆಸ್ ಪಕ್ಷದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದಲೂ ಹಲವು ಜನಪ್ರಿಯ, ಜನಪರ, ಜನಾನುರಾಗಿ ಕಾರ್ಯಗಳನ್ನು ಮಾಡಿತ್ತಿದ್ದೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನುಡಿದಂತೆ ನಡೆಯುವ ಮೂಲಕ ಜನರಿಗೆ ಹತ್ತಿರವಾಗಿದ್ದೇವೆ’ ಎಂದು ಹೇಳಿದರು.

ಜಿಲ್ಲೆಯಲ್ಲಿ 2,29,651 ಬಿಪಿಎಲ್ ಪಡಿತರ ಚೀಟಿದಾರರಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಮತ್ತು ರಾಜ್ಯ ಸರ್ಕಾರದ ಹೆಚ್ಚುವರಿ 5ಕೆ.ಜಿ ಅಕ್ಕಿಯೊಂದಿಗೆ ಒಟ್ಟು 10 ಕೆ.ಜಿ ಅಕ್ಕಿ ವಿತರಿಸಲಾಗುತ್ತಿದೆ. 5 ಕೆ.ಜಿ ಅಕ್ಕಿಗೆ ಪರ್ಯಾಯವಾಗಿ ಇಂದಿರಾ ಪೌಷ್ಠಿಕ ಆಹಾರ ಕಿಟ್ ನೀಡಲಾಗುವುದು. ಇದರಲ್ಲಿ ತೊಗರಿ ಬೇಳೆ, ಹೆಸರು ಬೇಳೆ, ಅಡುಗೆ ಎಣ್ಣೆ, ಸಕ್ಕರೆ ಮತ್ತು ಉಪ್ಪು ಒಳಗೊಂಡ ಪೋಷಕಾಂಶಯುಕ್ತ ವಸ್ತುಗಳನ್ನು ಒಳಗೊಂಡಿರುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ನಾಡು ನುಡಿ, ಸಂಸ್ಕೃತಿ, ಸಾಹಿತ್ಯವನ್ನು ಪ್ರತಿಬಿಂಬಿಸುವ ಜಾನಪದ ಗೀತೆ, ಕವನ, ಸಂಗೀತ ನೃತ್ಯ, ಭರತನಾಟ್ಯ, ಶಾಲಾ ವಿದ್ಯಾರ್ಥಿಗಳ ಯಕ್ಷಗಾನ ನೃತ್ಯ ನೋಡುಗರ ಮನಸೂರೆಗೊಂಡವು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಿಇಒ ಕೆ.ಎನ್ ಅನುರಾಧ, ಎಸ್‌.ಪಿ ಸಿ.ಕೆ ಬಾಬಾ, ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಬಿ.ರಾಜಣ್ಣ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಕೃಷ್ಣಪ್ಪ, ಪುರಸಭೆ ಅಧ್ಯಕ್ಷ ಮುನಿಕೃಷ್ಣ, ತಾಲ್ಲೂಕು ಪಂಚಾಯಿತಿ ಇಒ ಶ್ರೀನಾಥ್‌ ಗೌಡ ಉಪಸ್ಥಿತರಿದ್ದರು.

ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು
ಶಾಲಾ ಮಕ್ಕಳು ಯಕ್ಷಗಾನ ನೃತ್ಯ 
ಕಣ್ಮನ ಸೆಳೆದ ಭರತನಾಟ್ಯ

8260 ನಿವೇಶನ ಅಭಿವೃದ್ಧಿಗೆ ಅನುದಾನ 

ವಸತಿ ಯೋಜನೆ ಮತ್ತು ಮುಖ್ಯಮಂತ್ರಿ ಆಶ್ರಯ ನಿವೇಶನ ಯೋಜನೆಯಡಿ ಜಿಲ್ಲೆಯ ನಿವೇಶನ ಅಭಿವೃದ್ಧಿಗೆ 354.17 ಎಕರೆ ಜಮೀನು ಯೋಗ್ಯವಾಗಿದ್ದು ಇದರಲ್ಲಿ 294.08 ಎಕರೆ ಜಮೀನಿನಲ್ಲಿ 8260 ನಿವೇಶನಗಳನ್ನು ಅಭಿವೃದ್ಧಿ ಪಡಿಸಲು ಅನುದಾನ ಬಿಡುಗಡೆಗೆ ವಸತಿ ನಿಗಮಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರಗತಿ ಕಾಲೊನಿ ಯೋಜನೆಯಡಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಪರಿಶಿಷ್ಠ ಜಾತಿ ಕಾಲೊನಿಗಳಲ್ಲಿ ಮೂಲಭೂತ ಸೌಲಭ್ಯ ಒದಗಿಸಲು ₹3.16 ಕೋಟಿ ಮಂಜೂರು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದರು.

ನಾಲ್ವರಿಗೆ ಜಿಲ್ಲಾ ರಾಜ್ಯೋತ್ಸವ ಗರಿ

ಶಿಕ್ಷಣ ಕ್ಷೇತ್ರದಲ್ಲಿ ಹೊಸಕೋಟೆ ತಾಲ್ಲೂಕಿನ ಬಿ.ಸಿ ಶ್ರೀನಿವಾಸಯ್ಯ ಕನ್ನಡಪರ ಸೇವೆಗೆ ನೆಲಮಂಗಲ ತಾಲ್ಲೂಕಿನ ಉಮೇಶ್ ಗೌಡ ಜಿ ಕೃಷಿ ಕ್ಷೇತ್ರದಲ್ಲಿ ದೇವನಹಳ್ಳಿ ತಾಲ್ಲೂಕಿನ ಬಿ‌.ಆರ್ ಮಂಜುನಾಥ್ ತೋಟಗಾರಿಕೆ ಕ್ಷೇತ್ರದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಹಳ್ಳಿ ರೈತ ಅಂಬರೀಶ್ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.