
ದೊಡ್ಡಬಳ್ಳಾಪುರ: ಕರ್ನಾಟಕ ಏಕೀಕರಣಗೊಂಡು 70 ವರ್ಷ ಕಳೆದರೂ ಕನ್ನಡಿಗರ ಮೇಲೆ ಪರಭಾಷಿಕರ ದಬ್ಬಾಳಿಕೆ ಮುಂದುವರೆದಿದೆ. ರಾಜ್ಯದಲ್ಲಿ ಕನ್ನಡಿಗರೇ ತಮ್ಮ ಅಸ್ತಿತ್ವಕ್ಕಾಗಿ ಹೋರಾಡಬೇಕಿದೆ. ಇದೆಲ್ಲ ಗಮನಿಸಿದರೆ ಏಕೀಕರಣ ಆಶಯ ಇನ್ನೂ ಈಡೇರಿಲ್ಲ ಎಂದು ಭಾಸವಾಗುತ್ತದೆ ಎಂದು ಕನ್ನಡ ಜಾಗೃತಿ ವೇದಿಕೆ ರಾಜ್ಯ ಅಧ್ಯಕ್ಷ ಮಂಜುನಾಥ ದೇವ ಹೇಳಿದರು.
ನಗರದ ಶ್ರೀ ರಾಮಾಂಜನೇಯ ಕಲ್ಯಾಣ ಮಂಟಪದಲ್ಲಿ ಕನ್ನಡ ಜಾಗೃತಿ ವೇದಿಕೆ ತಾಲ್ಲೂಕು ಮತ್ತು ಜಿಲ್ಲಾ ಘಟಕದಿಂದ ಶನಿವಾರ ಆಯೋಜಿಸಿದ್ದ ರಾಜ್ಯೋತ್ಸವದಲ್ಲಿ ಮಾತನಾಡಿದರು.
‘ರಾಜಧಾನಿ ಬೆಂಗಳೂರಿನಂತಹ ಬೃಹತ್ ಮಹಾನಗರದಲ್ಲಿ ಪರಭಾಷಿಕರು ನಮ್ಮ ಸಿಗಾಬೇಕಾದ ಉದ್ಯೋಗ, ನೆಲ, ಜಲ, ಇಲ್ಲಿನ ಸೌಲತ್ತು ಕಸಿದುಕೊಳ್ಳುತ್ತಿದ್ದಾರೆ. ಕನ್ನಡ ನಾಡು ನುಡಿ ಜಲ ಭಾಷೆ ವಿಷಯ ಬಂದಾಗ ಎಲ್ಲಾ ಕನ್ನಡಿಗರು ಒಗಟ್ಟಾಗಬೇಕು. ಈ ವಿಷಯವಾಗಿ ನಮ್ಮ ಸಂಘಟನೆಯಿಂದ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಹೋರಾಟ ರೂಪಿಸಲಾಗುವುದು’ ಎಂದು ತಿಳಿಸಿದರು.
ಕನ್ನಡ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ನಾಗರಾಜು ಸಂಕಣ್ಣ, ರಾಜ್ಯ ಸಂಘಟನಾ ಕಾರ್ಯದರ್ಶಿ ಅಗ್ನಿ ವೆಂಕಟೇಶ್, ತಾಲ್ಲೂಕು ಅಧ್ಯಕ್ಷ ಸಿ.ಶಶಿಧರ್, ಕಾರ್ಮಿಕ ಘಟಕದ ಅಧ್ಯಕ್ಷ ಗುರುಪ್ರಸಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರೇಶ್, ಜಿಲ್ಲಾ ಕಾರ್ಯಧ್ಯಕ್ಷ ಶಿವಪ್ರಸಾದ್, ತಾಲ್ಲೂಕು ಕಾರ್ಯಧ್ಯಕ್ಷ ಮಹದೇವ್, ಜಿಲ್ಲಾ ಕಾರ್ಯದರ್ಶಿ ಸುಧಾಕರ್, ಸಂಘಟನ ಕಾರ್ಯದರ್ಶಿ ಶಿವಪ್ರಸಾದ್, ಯುವ ಘಟಕದ ಅಧ್ಯಕ್ಷ ಚಂದ್ರು, ಕನ್ನಡ ಜಾಗೃತ ಪರಿಷತ್ ಮಾಜಿ ಅಧ್ಯಕ್ಷ ಬಿ.ಜಿ.ಅಮರನಾಥ್, ಬಿಜೆಪಿ ನಗರ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ಕನ್ನಡ ಸಾಹಿತ್ಯ ಪರಿಷತ್ ಕೋಶಾಧ್ಯಕ್ಷ ಸಿ.ಸುರೇಶ್, ಎಂ.ಎ.ಬಿ.ಎಲ್ ವಿದ್ಯಾಸಂಸ್ಥೆ ಪ್ರಿಯಾಂಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.