ದೇವನಹಳ್ಳಿ:ತಾಲ್ಲೂಕಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿರುವ ಕನ್ನಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಧಿಕಾರಶಾಹಿಯ ನಿರ್ಲಕ್ಷ್ಯ ಹಾಗೂ ಜನಪ್ರತಿನಿಧಿಗಳ ದ್ವೇಷದ ರಾಜಕಾರಣದಿಂದ ಅಭಿವೃದ್ಧಿ ಕಾಮಗಾರಿ ನಡೆಸದೇ ಜನರಿಗೆ ತೊಂದರೆ ನೀಡಲಾಗುತ್ತಿದೆ ಎಂದು ಬಿಕೆಎಸ್ ಪ್ರತಿಷ್ಠಾನ ಮತ್ತು ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಬಿ.ಕೆ. ಶಿವಪ್ಪ ಆರೋಪಿಸಿದರು.
ಪಟ್ಟಣದ ಬಿಕೆಎಸ್ ಪ್ರತಿಷ್ಠಾನದ ಕಚೇರಿ ಆವರಣದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಪಂಚಾಯಿತಿಯಲ್ಲಿ ಇತ್ತೀಚೆಗೆ ದ್ವೇಷದ ರಾಜಕಾರಣ ಶುರುವಾಗಿದೆ. ಸದಸ್ಯರು, ಪಂಚಾಯಿತಿ ಅಧಿಕಾರಿಗಳು, ಗ್ರಾಮದ ಜಲಗಾರರ ಮಧ್ಯೆ ಹೊಂದಾಣಿಕೆ ಇಲ್ಲ. ಇದರಿಂದ ಗ್ರಾಮಗಳಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆಂದು ಸಾರ್ವಜನಿಕರು ದೂರುತ್ತಿದ್ದಾರೆ ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು ಸೇರಿದಂತೆ ಅಧಿಕಾರಿಗಳ ಗಮನಕ್ಕೆ ತಂದರೂ ರಾಜಕೀಯ ದ್ವೇಷದಿಂದ ಕಾಮಗಾರಿ ನೆಪದಲ್ಲಿ ರಸ್ತೆಗಳನ್ನು ಅಗೆದು ಕಾಮಗಾರಿ ಪೂರ್ಣಗೊಳಿಸಿಲ್ಲ ಎಂದು ಪ್ರತಿಷ್ಠಾನಕ್ಕೆ ಸ್ಥಳೀಯರು ದೂರು ನೀಡಿದ್ದಾರೆ. ಪ್ರತಿಷ್ಠಾನದ ಮೂಲಕವೂ ಸಮಸ್ಯೆಗಳ ಇತ್ಯರ್ಥಕ್ಕೆ ಮನವಿ ಮಾಡಿದರೂ ಇದುವರೆಗೂ ಸ್ಪಂದಿಸಿಲ್ಲ. ಇದೇ ರೀತಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬೇಜವಾಬ್ದಾರಿ ಮುಂದುವರಿದರೆ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟಿಸಲಾಗುವುದು ಎಂದು ಎಚ್ಚರಿಸಿದರು.
ದಲಿತರ ಕಾಲೊನಿಗಳಿಗೆ ಹೋಗುವ ರಸ್ತೆಯ ಮಧ್ಯೆ ಕೊಳವೆಬಾವಿ ಕೆಟ್ಟುಹೋಗಿದೆ. ಅದನ್ನು ಇದುವರೆಗೂ ಸರಿಪಡಿಸಿಲ್ಲ. ಕನ್ನಮಂಗಲದ ಸರ್ಕಲ್ನಲ್ಲಿ ಗುಂಡಿ ಬಿದ್ದಿದ್ದು, ದುರಸ್ತಿಪಡಿಸಿಲ್ಲ ಎಂದು ದೂರಿದರು.
ಡಾ.ಬಿ.ಆರ್. ಅಂಬೇಡ್ಕರ್ ಅಭಿಮಾನಿಗಳ ಬಳಗ ಅಧ್ಯಕ್ಷ ಯೋಗೇಶ್ಗೌಡ, ಗೋವಿಂದಸ್ವಾಮಿ, ಜಯಕುಮಾರ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.