ದೇವನಹಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿರ್ದೇಶನದಂತೆ ಫೆ.4 ರಂದು ದೇವನಹಳ್ಳಿಯಲ್ಲಿ ಪ್ರಜಾಧ್ವನಿ ಕಾರ್ಯಕ್ರಮದ ಆಯೋಜಿಸಲಾಗುತ್ತದೆ. ತಾಲ್ಲೂಕಿನಿಂದ ಹೆಚ್ಚು ಕಾರ್ಯಕರ್ತರು ಭಾಗವಹಿಸಬೇಕು ಎಂದು ಮಾಜಿ ಶಾಸಕ ವೆಂಕಟಸ್ವಾಮಿ ತಿಳಿಸಿದರು.
ಪಟ್ಟಣದ ಖಾದಿ ಬೋರ್ಡ್ ಕಚೇರಿಯಲ್ಲಿ ಸೋಮವಾರ ಪ್ರಜಾಧ್ವನಿ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
‘ನಾವು ತಾಲ್ಲೂಕಿನಲ್ಲಿ ಎರಡು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದೇವೆ. ಇದೀಗ ಚುನಾವಣೆ ಸಮೀಪಿಸುತ್ತಿದ್ದು, ಈ ಬಾರಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಬೇಕು’ ಎಂದು ಕಾರ್ಯಕರ್ತರಿಗೆ ಸೂಚಿಸಿದರು.
ಫೆ.4ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದು, ವಿಧಾನಸಭೆ ಕ್ಷೇತ್ರದಿಂದ ಕನಿಷ್ಠ 20 ಸಾವಿರ ಜನರು ಸಮಾರಂಭಕ್ಕೆ ಬರಬೇಕು. ಈ ಕಾರ್ಯಕ್ರಮವು ಮುಂಬರುವ ಚುನಾವಣೆಗೆ ದಿಕ್ಸೂಚಿಯಾಗಿದ್ದು, ಪಕ್ಷವನ್ನು ಮತ್ತಷ್ಟು ಬಲಗೊಳಿಸಬೇಕು ಎಂದರು.
ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ವಿ. ಶಾಂತಕುಮಾರ್ ಮಾತನಾಡಿ, ‘ಎಲ್ಲರೂ ಒಗ್ಗಟ್ಟಿನಿಂದ ಈ ಬಾರಿ ಚುನಾವಣೆ ಎದುರಿಸೋಣ. ದೊಡ್ಡಬಳ್ಳಾಪುರದಲ್ಲಿ ನಡೆದ ಪ್ರಜಾಧ್ವನಿ ಕಾರ್ಯಕ್ರಮಕ್ಕಿಂತ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಯಶಸ್ವಿಗೆ ಮುಂದಾಗಬೇಕು. ಗೃಹಲಕ್ಷ್ಮಿ ಯೋಜನೆ ಬಗ್ಗೆ ಗ್ಯಾರಂಟಿ ಕಾರ್ಡ್ ಅನ್ನು ಪ್ರತಿ ಗೃಹಿಣಿಗೆ ತಲುಪಿಸಿ ಜನರ ಮನಸ್ಸು ಗೆಲ್ಲಬೇಕು’ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ಪ್ರಸನ್ನಕುಮಾರ್ ಮಾತನಾಡಿದರು.
ಮಾಜಿ ಶಾಸಕ ಮುನಿನರಸಿಂಹಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್, ಹಿಂದುಳಿದ ವರ್ಗದ ಉಪಾಧ್ಯಕ್ಷ ಸಿ. ಜಗನ್ನಾಥ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಆರ್. ಗೌಡ, ಸದಸ್ಯರಾದ ಲಕ್ಷ್ಮೀನಾರಾಯಣ್, ಚಿನ್ನಪ್ಪ, ದೇವನಹಳ್ಳಿ ಬ್ಲಾಕ್ ಉಪಾಧ್ಯಕ್ಷ ನಾಗೇಗೌಡ, ಚಿನ್ನಪ್ಪ, ಚಂದ್ರಶೇಖರ್, ಪುರುಷೋತ್ತಮ್, ಬೈಚಾಪುರ ರಾಜಣ್ಣ, ಶೆಟ್ಟಿಗೆರೆ ರಾಜಣ್ಣ, ಚನ್ನಹಳ್ಳಿ ರಾಜಣ್ಣ, ಲಕ್ಷ್ಮಣ್ಗೌಡ, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಆರ್. ನಾಗೇಶ್, ಆರ್. ಸುಮಂತ್, ಮಹಿಳಾ ಘಟಕದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.