ದೇವನಹಳ್ಳಿ: ಪಟ್ಟಣದ ತಾಲ್ಲೂಕು ಆಡಳಿತ ಸೌಧದ ನ್ಯಾಯ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಕಸಾಪ ಸಮ್ಮೇಳನದ ಪೂರ್ವಭಾವಿ ಸಭೆ ನಡೆಯಿತು.
ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್. ಕೃಷ್ಣಪ್ಪ ಮಾತನಾಡಿ, ‘ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಸಮ್ಮೇಳನವನ್ನು ಬೂದಿಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಫೆಬ್ರುವರಿ ಕೊನೆಯ ವಾರದಲ್ಲಿ ಹಮ್ಮಿಕೊಳ್ಳಲಾಗುತ್ತದೆ. ಸಮ್ಮೇಳನದ ಅಧ್ಯಕ್ಷರಾಗಿ ರಾಮಯ್ಯ ಆಯ್ಕೆಯಾಗಿದ್ದು, ಎಲ್ಲ ಕನ್ನಡ ಮನಸುಗಳು ಒಂದಾಗಿ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜಿಸಬೇಕು’ ಎಂದು ಹೇಳಿದರು.
ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಎಲ್ಲ ರೀತಿಯ ಸಾಹಿತ್ಯ ಪ್ರಕಾರಗಳ ಕುರಿತು ತಂಡಗಳನ್ನು ರಚನೆ ಮಾಡಿಕೊಂಡು ಒಮ್ಮತದಿಂದ ಕೆಲಸ ಮಾಡೋಣ ಎಂಬ ಸಂದೇಶ ನೀಡಿದರು.
ತಹಶೀಲ್ದಾರ್ ಶಿವರಾಜ್ ಮಾತನಾಡಿ, ‘ಕನ್ನಡ ಕೆಲಸವೆಂದರೆ ಅದೊಂದು ಅಮೋಘ ಕ್ಷಣ. ಎಲ್ಲ ಆಸಕ್ತರು ಒಂದೆಡೆ ಸೇರಿ ತಾಯಿ ಭುವನೇಶ್ವರಿಯ ಸೇವೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ. ಇಂದಿನ ಯುವ ಪೀಳಿಗೆಗೆ ಕನ್ನಡದ ಕಂಪನ್ನು ಪಸರಿಸುವ ಕೆಲಸಕ್ಕೆ ಅಣಿಯಾಗೋಣ’ ಎಂದರು.
ಕಾರ್ಯಕ್ರಮ ಆಯೋಜನೆಗೆ ಅಂದಾಜು ₹10 ಲಕ್ಷದಷ್ಟು ವೆಚ್ಚವಾಗಲಿದ್ದು, ಕನ್ನಡಪರ ವ್ಯಕ್ತಿತ್ವವಿರುವ ದಾನಿಗಳಿಂದ ಭುವನೇಶ್ವರಿ ಸೇವೆಗೆ ಮುಂದಾಗೋಣ. ಎಲ್ಲ ಇಲಾಖೆಯ ಅಧಿಕಾರಿಗಳು ತಪ್ಪದೆ ಸಮ್ಮೇಳನದಲ್ಲಿ ಭಾಗಿಯಾಗಬೇಕು ಎಂದು ತಿಳಿಸಿದರು.
ಇದೇ ವೇಳೆ ಕಸಾಪ ಟೌನ್ ಘಟಕ, ತಾಲ್ಲೂಕು ಘಟಕ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರು, ಇಲಾಖೆ ಅಧಿಕಾರಿಗಳು ಮುಂತಾದವರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.