ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ ಜಿಲ್ಲೆ): ‘ವಿಧಾನ ಪರಿಷತ್ ಚುನಾವಣೆಯಲ್ಲಿ ರಾಜ್ಯದಲ್ಲಿ ಎರಡಂಕಿ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದ್ದೆ. ಅದರಂತೆ 11 ಸ್ಥಾನ ಗೆದ್ದಿದ್ದೇವೆ. ಇನ್ನೂ ಮೂರು ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇತ್ತು. ನಮ್ಮ ಲೆಕ್ಕಾಚಾರ ತಪ್ಪಿದ್ದರಿಂದ ಅವುಗಳನ್ನು ಕಳೆದುಕೊಂಡೆವು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆ ಫಲಿತಾಂಶದ ಬಗ್ಗೆ ವಿಶ್ಲೇಷಿಸಿದರು.
‘ಕಡಿಮೆ ಮತಗಳ ಅಂತರದಿಂದ ಕಲಬುರಗಿ, ಚಿಕ್ಕಮಗಳೂರು ಮತ್ತು ಕೊಡಗು ಕ್ಷೇತ್ರಗಳನ್ನು ಕಳೆದುಕೊಂಡೆವು.12 ರಿಂದ 13 ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಹಳೇ ಮೈಸೂರು ಭಾಗದ ಫಲಿತಾಂಶದ ಬಗ್ಗೆ ವಿಶ್ಲೇಷಿಸುವುದು ಬೇಡ. ಮಂಡ್ಯದಲ್ಲಿ ಎಲ್ಲ ಪಕ್ಷದವರೂ ಸಹಾಯ ಮಾಡಿದ್ದಾರೆ’ ಎಂದರು.
*
ಫಲಿತಾಂಶ ಸಮಾಧಾನ ತಂದಿದೆ.ರಾಜ್ಯದ ಜನರು ಯಾವ ದಿಕ್ಕಿನಲ್ಲಿ ಸಾಗುತ್ತಿದ್ದಾರೆ ಎನ್ನುವುದಕ್ಕೆ ಇದು ಸಾಕ್ಷಿ. ಈ ಫಲಿತಾಂಶಪರೋಕ್ಷವಾಗಿ ಮುಂದಿನ ವಿಧಾನಸಭೆ ಚುನಾವಣೆಯ ದಿಕ್ಸೂಚಿಯಾಗಿದೆ.
–ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.