ADVERTISEMENT

ಕೂಡ್ಲು: ರಸ್ತೆ ಅಭಿವೃದ್ಧಿಗೆ ಚಾಲನೆ

ಅಮೃತ ನಗರೋತ್ಥಾನ ಯೋಜನೆಯಡಿ ₹ 8 ಕೋಟಿ ನಿಗದಿ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2022, 5:48 IST
Last Updated 29 ಸೆಪ್ಟೆಂಬರ್ 2022, 5:48 IST
ಆನೇಕಲ್‌ ತಾಲ್ಲೂಕಿನ ಕೂಡ್ಲು ಗ್ರಾಮದಲ್ಲಿ ಅಮೃತ ನಗರೋತ್ಥಾನ ಯೋಜನೆಯಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಿ. ಶಿವಣ್ಣ ಬುಧವಾರ ಭೂಮಿಪೂಜೆ ನೆರವೇರಿಸಿದರು
ಆನೇಕಲ್‌ ತಾಲ್ಲೂಕಿನ ಕೂಡ್ಲು ಗ್ರಾಮದಲ್ಲಿ ಅಮೃತ ನಗರೋತ್ಥಾನ ಯೋಜನೆಯಡಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಿ. ಶಿವಣ್ಣ ಬುಧವಾರ ಭೂಮಿಪೂಜೆ ನೆರವೇರಿಸಿದರು   

ಆನೇಕಲ್:ತಾಲ್ಲೂಕಿನ ಕೂಡ್ಲು ಗ್ರಾಮದ ಬಿಬಿಎಂಪಿ ವ್ಯಾಪ್ತಿಯಲ್ಲಿ ಅಮೃತ ನಗರೋತ್ಥಾನ ಯೋಜನೆಯಡಿ ₹ 8 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಬಿ. ಶಿವಣ್ಣ ಬುಧವಾರ ಭೂಮಿಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಕೂಡ್ಲು ಗ್ರಾಮವು ನಗರ ಪ್ರದೇಶಕ್ಕೆ ಹೊಂದಿಕೊಂಡಿದೆ. ಆನೇಕಲ್‌ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಏಕೈಕ ಬಿಬಿಎಂಪಿ ವಾರ್ಡ್‌ ಆಗಿದೆ. ಹಾಗಾಗಿ, ಇಲ್ಲಿ ಹೆಚ್ಚಿನ ಮೂಲಸೌಲಭ್ಯ ಕಲ್ಪಿಸಲು ಆದ್ಯತೆ ನೀಡಲಾಗಿದೆ. ಗ್ರಾಮದ ವ್ಯಾಪ್ತಿಯಲ್ಲಿ ಸುಸಜ್ಜಿತ ರಸ್ತೆ, ಬೀದಿದೀಪ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.

ಗ್ರಾಮೀಣ ಪ್ರದೇಶದಲ್ಲಿ ನಗರಗಳಲ್ಲಿ ದೊರೆಯುವ ಎಲ್ಲಾ ಸೌಲಭ್ಯಗಳು ದೊರೆಯುವಂತಾಗಬೇಕು. ಕೂಡ್ಲು ಬಿಬಿಎಂಪಿ ವಾರ್ಡ್‌ನಲ್ಲಿ 50 ಸಾವಿರಕ್ಕೂ ಹೆಚ್ಚು ಜನಸಂಖ್ಯೆಯಿದೆ. ಈ ವ್ಯಾಪ್ತಿಯಲ್ಲಿ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಸರ್ಕಾರ ಅನುದಾನ ಮಂಜೂರು ಮಾಡಬೇಕು. ಸಾರ್ವಜನಿಕರು ಕೆಲವು ಸಮಸ್ಯೆಗಳ ಬಗ್ಗೆ ಅಹವಾಲು ಸಲ್ಲಿಸಿದ್ದಾರೆ. ಕೂಡ್ಲು ವ್ಯಾಪ್ತಿಯ ಕೆಲವು ಬಡಾವಣೆಗಳಿಗೆ ಸಂಪರ್ಕ ರಸ್ತೆ, ಬೀದಿದೀಪ ಸೌಲಭ್ಯ ಕಲ್ಪಿಸಲು ಅಧಿಕಾರಿ ಗಳಿಗೆ ಸೂಚಿಸಲಾಗಿದೆ ಎಂದರು.

ADVERTISEMENT

ಕೂಡ್ಲು ಮಾರ್ಗವು ಬೆಂಗಳೂರಿಗೆ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಹೊಸ ರೋಡ್, ಕೂಡ್ಲು ಸೇರಿದಂತೆ ಕೆಲವು ರಸ್ತೆಗಳಲ್ಲಿ ಹೆಚ್ಚಿನ ಟ್ರಾಫಿಕ್‌ ಸಮಸ್ಯೆಯಿದೆ. ಈ ಸಮಸ್ಯೆ ಪರಿಹಾರಕ್ಕೆ ಸಂಚಾರ ಪೊಲೀಸರು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಮಳೆ ಬಂದಾಗ ಕೆಲವು ಮನೆಗಳಿಗೆ ನೀರು ನುಗ್ಗುತ್ತಿರುವ ಬಗ್ಗೆ ದೂರುಗಳಿವೆ. ಈ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತು ಸಾರ್ವಜನಿಕರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೂಡ್ಲು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎನ್.‌ ಬಾಬುರಾಜ್‌, ಮುಖಂಡರಾದ ಬಾಲಕೃಷ್ಣಾ ರೆಡ್ಡಿ, ಚಿಕ್ಕ ಮುನಿಯಪ್ಪ, ಆರ್‌.ಎಂ.ಎನ್‌. ರಮೇಶ್‌, ಗೋವಿಂದ ರೆಡ್ಡಿ, ಸುರೇಶ್‌ ಬಾಬು, ಸಂತೋಷ್‌, ಗಜೇಂದ್ರ ರೆಡ್ಡಿ, ಅನಂತ ರೆಡ್ಡಿ, ಶಿವಪ್ಪ, ಕೆ.ಬಿ. ಮಂಜುನಾಥ್‌, ಭೀಮಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.