ದೊಡ್ಡಬಳ್ಳಾಪುರ:ಬಾಲ್ಯವಿವಾಹ ಮತ್ತು ಹದಿನೆಂಟು ವರ್ಷದ ಒಳಗಿನ ಮಕ್ಕಳ ಮೇಲಿನ ಲೈಂಗಿಕ ಕಿರುಕುಳದ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಿಗೆ ಜಾಗೃತಿಯ ಕೊರತೆಯೇ ಇಂತಹ ಕೃತ್ಯಗಳು ಹೆಚ್ಚಾಗಲು ಕಾರಣವಾಗಿದೆ ಎಂದು ಜಿಲ್ಲಾ ಮಕ್ಕಳ ಸಹಾಯವಾಣಿ ಸಂಯೋಜಕ ಎಸ್.ಪಿ. ಮಂಜುನಾಥ್ ಹೇಳಿದರು.
ಅವರು ನಗರದ ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆ, ಮಕ್ಕಳ ಸಹಾಯವಾಣಿ-1098 ವತಿಯಿಂದ ಸಾಸಲು ಹೋಬಳಿ ಹಾಗೂ ತೂಬಗೆರೆ ಹೋಬಳಿ ವ್ಯಾಪ್ತಿಗೆ ಬರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಬಾಲ್ಯವಿವಾಹ ಮತ್ತು ಅಪ್ರಾಪ್ತರಿಗೆ ಲೈಂಗಿಕ ಕಿರುಕುಳ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು
ಬಾಲ್ಯವಿವಾಹದಿಂದ ದೈಹಿಕ ಹಾಗೂ ಮಾನಸಿಕವಾಗಿ ಪ್ರಭಾವ ಬೀರಲಿದ್ದು, ಈ ಬಗ್ಗೆ ಅರಿವು ಅಗತ್ಯವಾಗಿದೆ. ಬಾಲ್ಯವಿವಾಹದಿಂದ ದೈಹಿಕ ಹಾಗೂ ಮಾನಸಿಕವಾಗಿ ಹಲವಾರು ತೊಂದರೆಗಳಾಗುತ್ತವೆ. ಚಿಕ್ಕವಯಸ್ಸಿನಲ್ಲಿಯೇ ಗರ್ಭ ಧರಿಸುವುದರಿಂದ ತಾಯಿ ಹಾಗೂ ಮಗುವಿಗೆ ಆರೋಗ್ಯ ಸಮಸ್ಯೆಗಳು ಕಾಡುತ್ತವೆ ಎಂದು ಹೇಳಿದರು.
ಮಕ್ಕಳ ಮೇಲೆ ಲೈಂಗಿಕ ಕಿರುಕುಳಗಳಾಗುತ್ತಿದ್ದರೆ ತಕ್ಷಣವೇ ಮಕ್ಕಳ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಪ್ರಮುಖವಾಗಿ ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಸಹಾಯವಾಣಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕಿದೆ ಎಂದರು.
ಗ್ರಾಮೀಣ ಅಭ್ಯುದಯ ಸೇವಾ ಸಂಸ್ಥೆಯ ಕಾರ್ಯದರ್ಶಿ ಅಮಲಿನಾಯಕ್ ಮಾತನಾಡಿ, ಕೊರೊನಾದಿಂದಾಗಿ ಬಾಲ್ಯವಿವಾಹಗಳು ಹೆಚ್ಚಾಗುತ್ತಿವೆ. ಇದು ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು ಬಾಲ್ಯವಿವಾಹ ತಡೆಯುವಲ್ಲಿ ಹೆಚ್ಚಿನ ಗಮನಹರಿಸಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಮಕ್ಕಳ ಸಹಾಯವಾಣಿಯ ತಾಲ್ಲೂಕು ಸಂಯೋಜಕ ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಯಾದ ರಶ್ಮಿ ಸೊಬರದ್,ಅ ಕ್ಷತಾಗೊಂಬಿ, ತಂಡದ ಸದಸ್ಯರಾದ ಶಶಿಕುಮಾರ್, ಕೆ.ಆರ್. ನರಸಿಂಹರಾಜು, ಶ್ಯಾಮಲಾ ಇದ್ದರು. ಇದೇ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಆರೋಗ್ಯ ರಕ್ಷಕ ಪರಿಕರ ವಿತರಿಸಲಾಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.