ದೇವನಹಳ್ಳಿ: ನ್ಯಾ.ಎ.ಜೆ. ಸದಾಶಿವ ಆಯೋಗದ ವರದಿ ಅನ್ವಯ ಪರಿಶಿಷ್ಟ ಜಾತಿಯ ಮಾದಿಗ ಸಮುದಾಯಕ್ಕೆ ಒಳಮೀಸಲಾತಿ ನೀಡಲು ಸರ್ಕಾರ ತ್ವರಿತವಾಗಿ ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ಬಹುಜನ ಹಿತರಕ್ಷಣಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಎಂ. ನರಸಿಂಹ ಒತ್ತಾಯಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಮಾದಿಗ ಜನಾಂಗದ ಸಂಖ್ಯೆ ಹೆಚ್ಚಿದೆ. ತಲೆತಲಾಂತರದಿಂದ ಅಸ್ಪೃಶ್ಯತೆಯ ನೆರಳಿನಲ್ಲಿ ಜೀವನ ನಡೆಸುತ್ತಿದ್ದಾರೆ. ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ದೊರೆಯಬೇಕು ಎಂದು ಒತ್ತಾಯಿಸಿದರು.
ಮೀಸಲಾತಿಯಿಂದ ಲಂಬಾಣಿ, ಕೊರಮ, ಕೊರಚ, ಭೋವಿ ಜನಾಂಗವನ್ನು ಹೊರಗಿಡಬೇಕು ಎಂಬುದು ನಮ್ಮ ಒತ್ತಾಯವಲ್ಲ. ಪರಿಶಿಷ್ಟ ಜಾತಿಯ ಜನಸಂಖ್ಯೆ ಆಧರಿಸಿ ಎ, ಬಿ, ಸಿ, ಡಿ ವರ್ಗೀಕರಣ ಮಾಡಿ ಮೀಸಲಾತಿ ಹಂಚಿಕೆಯಾಗಬೇಕು. ಬೇರೊಂದು ಸಮುದಾಯದ ಊಟದ ತಟ್ಟೆಯನ್ನು ಕಸಿಯುವುದು ನಮ್ಮ ಸಮುದಾಯದ ಉದ್ದೇಶವಲ್ಲ. ಅದಕ್ಕಾಗಿ ಹೋರಾಟ ನಡೆಸುತ್ತಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಪಾಲು ಕೇಳುತ್ತಿದ್ದೇವೆ ಎಂದರು.
ಮಾದಿಗರ ಬೇಡಿಕೆ ಈಡೇರಿಕೆಗೆ ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿಯ ಶಾಸಕರು ಸಹಕರಿಸಬೇಕು. ಸಮುದಾಯದ ಹಾಲಿ ಶಾಸಕರು, ಮಾಜಿ ಶಾಸಕರು, ಸಚಿವರು ಸರ್ಕಾರದ ಮೇಲೆ ಈ ಸಂಬಂಧ ಒತ್ತಡ ಹೇರಬೇಕು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.