ADVERTISEMENT

‘ಮತ ಕೇಳಲು ಮುಜುಗರವಿಲ್ಲ’

ಕಾಂಗ್ರೆಸ್‌ನಿಂದ ಗ್ರಾಮ ಪಂಚಾಯಿತಿ ಚುನಾವಣೆಯ ಪೂರ್ವಭಾವಿ ಸಭೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 5:07 IST
Last Updated 26 ನವೆಂಬರ್ 2020, 5:07 IST
ಗ್ರಾಮ ಪಂಚಾಯಿತಿ ಚುನಾವಣೆಯ ಪೂರ್ವಸಿದ್ಧತಾ ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಎಸ್. ರವಿ ಮಾತನಾಡಿದರು
ಗ್ರಾಮ ಪಂಚಾಯಿತಿ ಚುನಾವಣೆಯ ಪೂರ್ವಸಿದ್ಧತಾ ಸಭೆಯಲ್ಲಿ ವಿಧಾನ ಪರಿಷತ್‌ ಸದಸ್ಯ ಎಸ್. ರವಿ ಮಾತನಾಡಿದರು   

ದೇವನಹಳ್ಳಿ: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿದ್ದು ಮತ ಕೇಳಲು ಮುಖಂಡರಿಗೆ ಮುಜುಗರವಿಲ್ಲ ಎಂದು ಕಾಂಗ್ರೆಸ್ ಮುಖಂಡ ಮುನಿನರಸಿಂಹಯ್ಯ ಹೇಳಿದರು.

ಇಲ್ಲಿನ ಕಾರಹಳ್ಳಿಯಲ್ಲಿ ಬುಧವಾರ ಗ್ರಾಮ ಪಂಚಾಯಿತಿ ಚುನಾವಣೆ ಪೂರ್ವಸಿದ್ಧತೆ ಕುರಿತು ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಹೆಬ್ಬಾಳ ಮತ್ತು ನಾಗವಾರ ಕೆರೆಗಳ ತ್ಯಾಜ್ಯ ಸಂಸ್ಕರಿಸಿದ ನೀರು ಕಳೆದ ಅರು ತಿಂಗಳಿಂದ ತಾಲ್ಲೂಕಿನ ಕೆರೆಗಳಿಗೆ ಹರಿಯುತ್ತಿದೆ. ಇಂದು ಕಾರಹಳ್ಳಿ ಅಮಾನಿ ಕೆರೆಗೆ ಪಾದಾರ್ಪಣೆ ಮಾಡಿದೆ.ಹಸಿವು ಮುಕ್ತ ರಾಜ್ಯವನ್ನು ದೇಶದಲ್ಲೆ ಮೊದಲ ಬಾರಿಗೆ ಜಾರಿಗೆ ತಂದ ಸರ್ಕಾರ ಕಾಂಗ್ರೆಸ್ ಎಂಬುದನ್ನು ಯಾರು ಮರೆತಿಲ್ಲ ಎಂದು ಹೇಳಿದರು.

ADVERTISEMENT

ಕೆಪಿಸಿಸಿ ರಾಜ್ಯ ಘಟಕ ಪ್ರಧಾನ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್ ಮಾತನಾಡಿ, ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಿಲ್ಲ, ಸಂಸದರಿಲ್ಲ, ಯಾವುದೇ ರಾಜಕೀಯದ ಹೆಜ್ಜೆಗುರುತು ಮೂಡಿಸಬೇಕಾದರೆ ಪಂಚಾಯಿತಿಯಲ್ಲಿ ಗೆಲುವು ಸಾಧಿಸುವುದು ಅನಿರ್ವಾಯವಾಗಲಿದೆ. ಪ್ರತಿಯೊಂದು ಚುನಾವಣೆಗೆ ಸ್ಥಳೀಯ ಗ್ರಾಮ ಪಂಚಾಯಿತಿ ಚುನಾವಣೆ ಅಡಿಪಾಯವಾಗಲಿದೆ ಎಂದು ಹೇಳಿದರು.

ಮುಖಂಡ ವೆಂಕಟಸ್ವಾಮಿ ಮಾತನಾಡಿ, ಚುನಾವಣೆಯಲ್ಲಿ ಸ್ಥಳೀಯ ಮುಖಂಡರು ಸಮನ್ವಯತೆಯಿಂದ ಕೆಲಸ ಮಾಡಿದರೆ ಗೆಲುವು ಸುಲಭವಾಗಲಿದೆ. ಮುಖಂಡರು ತಮ್ಮ ಸಾಮರ್ಥ್ಯವನ್ನು ಓರೆಗೆ ಹೆಚ್ಚಬೇಕು ಎಂದು ಹೇಳಿದರು.

ಪಂಚಾಯತ್ ರಾಜ್ ಕಾಯ್ದೆ ತಿದ್ದು ಪಡಿ ಸಮಿತಿ ಸಲಹೆಗಾರ ಸಿ. ನಾರಾಯಣಸ್ವಾಮಿ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳೇ ಬಿಜೆಪಿಗೆ ಮಾರಕವಾಗಲಿದೆ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಎಸ್.ರವಿ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನ ಕೊಲೆ ಮಾಡಿದೆ. ರಾಜ್ಯದಲ್ಲಿ ಎರಡು ಬಾರಿ ಬಹುಮತವಿಲ್ಲದಿದ್ದರೂ ಆಪರೇಷನ್ ಕಮಲದ ಮೂಲಕ ಆಡಳಿತದ ಚುಕ್ಕಾಣಿ ಹಿಡಿಯಿತು. ತಮ್ಮ ಘನತೆ ಗೌರವವನ್ನೆ ಬದಿಗಿಟ್ಟ ಕಾಂಗ್ರೆಸ್ ಶಾಸಕರು ₹ 30 ರಿಂದ ₹ 40 ಕೋಟಿಗೆ ಮಾರಾಟವಾದರು. ಬಿಜೆಪಿ ಹಣದಲ್ಲಿ ಚುನಾವಣೆ ನಡೆಸುತ್ತಿದೆ. ವಾಮ ಮಾರ್ಗದಿಂದ ಅಧಿಕಾರ ಹಿಡಿದಿದೆ.ಸ್ಥಳೀಯ ಸಂಸ್ಥೆಗಳ ಅಧಿಕಾರವನ್ನು ಕತ್ತು ಹಿಸುಕಿದಂತೆ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.

ಮುಖಂಡರಾದ ಚಿನ್ನಪ್ಪ, ಲಕ್ಷ್ಮೇಗೌಡ, ಗೋಪಾಲಗೌಡ, ಜಯರಾಮ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಸಿ. ಮಂಜುನಾಥ್, ರಾಧಮ್ಮ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಚೇತನ್‍ಗೌಡ, ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗಗಳ ಉಪಾಧ‍್ಯಕ್ಷ ಜಗನ್ನಾಥ್, ಪ್ರಧಾನ ಕಾರ್ಯದರ್ಶಿ ಆರ್. ರವಿಕುಮಾರ್, ಕುಂದಾಣ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಕೊದಂಡ ರಾಮಯ್ಯ, ಕಾಂಗ್ರೆಸ್ ಎಸ್‌ಟಿ ಘಟಕದ ತಾಲ್ಲೂಕು ಅಧ್ಯಕ್ಷ ಮುನಿರಾಜು, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ, ಉಪಾಧ‍್ಯಕ್ಷ ರಾದ ಎಸ್.ಪಿ. ಮುನಿರಾಜು, ಶಾಂತ ಕುಮಾರ್, ಖಾದಿ ಬೋರ್ಡ್ ಅಧ್ಯಕ್ಷ ನಾಗೇಗೌಡ, ಪ್ರಕಾಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.