ವಿಜಯಪುರ: ಜನರ ಆರೋಗ್ಯ ಸುಧಾರಣೆಗಾಗಿ ಸರ್ಕಾರ ಜಾರಿಗೊಳಿಸುತ್ತಿರುವ ಯೋಜನೆ ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವಂತಹ ಕೆಲಸವನ್ನುವೈದ್ಯಕೀಯ ಸಿಬ್ಬಂದಿ ಮಾಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ರೂಪ ಹೇಳಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಭೇಟಿ ನೀಡಿದ್ದ ಅವರು, ಆಸ್ಪತ್ರೆಗೆ ಬರುತ್ತಿರುವ ಹೊರರೋಗಿಗಳು ಅವರಿಗೆ ಲಭ್ಯವಾಗುತ್ತಿರುವ ಸೌಲಭ್ಯಗಳು, ಕೋವಿಡ್ ಲಸಿಕೆ ಪಡೆದುಕೊಂಡ ಫಲಾನುಭವಿಗಳ ವಿವರ, ಆಸ್ಪತ್ರೆಯಲ್ಲಿ ಕುಡಿಯುವ ನೀರಿನ ಸಮಸ್ಯೆ, ಸಿಬ್ಬಂದಿ ಕೊರತೆ, ಆಸ್ಪತ್ರೆಗೆ ಸರಬರಾಜಾಗುತ್ತಿರುವ ಔಷಧಿಗಳ ಪ್ರಮಾಣದ ಕುರಿತು ಮಾಹಿತಿ ಪಡೆದುಕೊಂಡರು. ಕೋವಿಡ್ ಲಸಿಕೆಯ ಕುರಿತು ನರ್ಸ್ಗಳ ಮೂಲಕ ಜನರಿಗೆ ಸೂಕ್ತವಾದ ಜಾಗೃತಿ ಮೂಡಿಸಬೇಕು. 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯುವಂತೆ ನೋಡಿಕೊಳ್ಳಬೇಕು. ಹೆರಿಗೆಗಾಗಿ ಬರುವಂತಹ ಮಹಿಳೆಯರ ಆರೈಕೆಯನ್ನು ಉತ್ತಮವಾಗಿ ನೋಡಿಕೊಳ್ಳಬೇಕು. ಆಸ್ಪತ್ರೆಯಲ್ಲಿಸ್ವಚ್ಛತೆ ಕಾಪಾಡಿಕೊಳ್ಳುವ ಕಡೆಗೆ ಹೆಚ್ಚು ಗಮನಹರಿಸಿ, ಪ್ರತಿಯೊಬ್ಬರೂ ಮಾಸ್ಕ್ ಧರಿಸಿಕೊಂಡು ಆಸ್ಪತ್ರೆಗೆ ಬರುವಂತಹ ಜಾಗ್ರತೆ ವಹಿಸಬೇಕು ಎಂದು ವೈದ್ಯರಿಗೆ ಸೂಚಿಸಿದರು.
ಡಾ. ಶ್ಯಾಂಸುಂದರ್ ಮಾತನಾಡಿ, ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಸ್ವಲ್ಪಮಟ್ಟಿಗೆ ಕಾಡುತ್ತಿದೆ. ಈಗ ಇರುವ ಸಿಬ್ಬಂದಿಯಿಂದಲೇ ಎಲ್ಲಾ ಕೆಲಸಗಳನ್ನು ನಿಗದಿತ ಸಮಯದಲ್ಲಿ ಮಾಡಿಸುವಂತಹ ಕೆಲಸ ಮಾಡುತ್ತಿದ್ದೇವೆ ಎಂದರು.
ಕುಡಿಯುವ ನೀರಿಗೆ ಆದ್ಯತೆ: ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗುತ್ತಿದ್ದು, ಅದನ್ನು ನಿಭಾಯಿಸಲಿಕ್ಕೆ ಟಾಸ್ಕ್ ಪೋರ್ಸ್ ನಡಿ ಕೊಳವೆಬಾವಿಗಳು ಕೊರೆಯಲಿಕ್ಕೆ ಅನುಮತಿ ನೀಡಲಾಗಿದೆ. ಪ್ರತಿ ತಾಲ್ಲೂಕಿಗೆ ₹50 ಲಕ್ಷ ಹಣವನ್ನು ಬಿಡುಗಡೆ ಮಾಡಿದ್ದಾರೆ ಎಂದು ರೂಪ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.