ADVERTISEMENT

‘ಜೆಡಿಎಸ್ ಚಿಹ್ನೆ ಇಲ್ಲವೆಂದು ಬೇರೆ ಪಕ್ಷಕ್ಕೆ ಮತ ಹಾಕಬೇಡಿ, ನಮ್ಮ ಗುರುತು ಕಮಲ’

ಜೆಡಿಎಸ್ ಮುಖಂಡ ನಿಸರ್ಗ ನಾರಾಯಣಸ್ವಾಮಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2024, 5:14 IST
Last Updated 16 ಏಪ್ರಿಲ್ 2024, 5:14 IST
ವಿಜಯಪುರ ಹೋಬಳಿ ಕೋರಮಂಗಲದಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್ ಮುಖಂಡ ನಿಸರ್ಗ ನಾರಾಯಣಸ್ವಾಮಿ ಮಾತನಾಡಿದರು
ವಿಜಯಪುರ ಹೋಬಳಿ ಕೋರಮಂಗಲದಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್ ಮುಖಂಡ ನಿಸರ್ಗ ನಾರಾಯಣಸ್ವಾಮಿ ಮಾತನಾಡಿದರು   

ವಿಜಯಪುರ(ದೇವನಹಳ್ಳಿ): ಮತದಾನ ದಿನದಂದು ಮತದಾರರು ಮತಗಟ್ಟೆಗೆ ಹೋಗಿ ಜೆಡಿಎಸ್ ಚಿಹ್ನೆ ಇಲ್ಲವೆಂದು ಬೇರೆ ಪಕ್ಷಕ್ಕೆ ಮತ ಹಾಕಬೇಡಿ. ನಮ್ಮ ಗುರುತು ಕಮಲ, ಈ ಗುರುತಿಗೆ ನಾವೆಲ್ಲರೂ ಮತದಾನ ಮಾಡಬೇಕು ಎಂದು ಜೆಡಿಎಸ್ ಮುಖಂಡ ನಿಸರ್ಗ ನಾರಾಯಣಸ್ವಾಮಿ ಹೇಳಿದರು.

ಹೋಬಳಿಯ ಕೋರಮಂಗಲದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿ ಭಾನುವಾರ ಮತಯಾಚಿಸಿ ಅವರು ಮಾತನಾಡಿದರು.

ಜೆಡಿಎಸ್ ಪಕ್ಷದ ನಾಯಕರು, ಮುಖಂಡರು ಮತ್ತು ಕಾರ್ಯಕರ್ತರು ಕೊಟ್ಟ ಮಾತನ್ನು ಎಂದಿಗೂ ತಪ್ಪಿಲ್ಲ. ಮುಂದೆಯೂ ತಪ್ಪುವುದಿಲ್ಲ ಎನ್ನುವ ಸಂದೇಶವನ್ನು ಲೋಕಸಭೆ ಚುನಾವಣೆ ಮೂಲಕ ದೇಶಕ್ಕೆ ರವಾನಿಸಬೇಕಿದೆ ಎಂದರು.

ADVERTISEMENT

ಬಿಜೆಪಿ ರಾಷ್ಟ್ರ ನಾಯಕರು ನಮ್ಮ ವರಿಷ್ಠ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಮೇಲೆ ಇಟ್ಟಿರುವ ಭರವಸೆ ಉಳಿಸಬೇಕು. ಜೆಡಿಎಸ್ ಪಕ್ಷದ ಶಕ್ತಿ ಏನು ಎಂಬುದನ್ನು ತೋರಿಸುವ ಕಾಲ ಬಂದಿದೆ. ವಿರೋಧ ಪಕ್ಷಗಳ ಟೀಕೆಗಳಿಗೆ ಕಿವಿಗೊಡದೆ ಕಾರ್ಯಕರ್ತರು ಮನೆ, ಮನೆಗೆ ಹೋಗಿ ಮತಯಾಚಿಸಬೇಕು ಎಂದು ಹೇಳಿದರು.

ಬಿಜೆಪಿ ಮುಖಂಡ ಜಿ.ಚಂದ್ರಣ್ಣ ಮಾತನಾಡಿ, ಬಿಜೆಪಿಗೆ ನೇರ ಪ್ರತಿಸ್ಪರ್ಧಿ ಕಾಂಗ್ರೆಸ್ ಹೊರತು, ಜೆಡಿಎಸ್ ಅಲ್ಲ, ದೇಶದಲ್ಲಿ ಜಿಎಸ್‌ಟಿ ಜಾರಿಗೆ ತಂದಾಗ, ಮಧ್ಯರಾತ್ರಿಯಲ್ಲಿ ನಡೆದ ಅಧಿವೇಶನದಲ್ಲಿ ಎಚ್.ಡಿ.ದೇವೇಗೌಡ ಅವರು ಪಾಲ್ಗೊಳ್ಳುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದರು. ಜತೆಗೆ ಅವರು ಬಿಜೆಪಿ ಕಾರ್ಯಕ್ರಮಗಳನ್ನು ಮೆಚ್ಚಿಕೊಂಡಿದ್ದಾರೆ ಎಂದು ಹೇಳಿದರು.

ಹಿರಿಯ ಜೆಡಿಎಸ್ ಮುಖಂಡ ಎಂ.ವೀರಪ್ಪ ಮಾತನಾಡಿದರು. ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಆರ್.ಮುನೇಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ, ಬೈರೇಗೌಡ, ಸುಬ್ಬಣ್ಣ, ದಂಡಿಗಾನಹಳ್ಳಿ ನಾರಾಯಣಸ್ವಾಮಿ, ಬಮೂಲ್ ನಿರ್ದೇಶಕ ಇರಿಗೇನಹಳ್ಳಿ ಶ್ರೀನಿವಾಸ್, ಕಲ್ಯಾಣ್ ಕುಮಾರ್ ಬಾಬು, ಗೊಡ್ಲುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಜಗದೀಶ್, ಪುರ ಕೃಷ್ಣಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.