ವಿಜಯಪುರ(ದೇವನಹಳ್ಳಿ): ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಪ್ರಬಲ ಆಕಾಂಕ್ಷಿ ಆಗಿರುವ ಡಾ.ಕೆ.ಸುಧಾಕರ್ ಅವರು ಕ್ಷೇತ್ರದಲ್ಲಿ ಜನರ ವಿಶ್ವಾಸಗಳಿಸಿಕೊಳ್ಳುವ ನಿಟ್ಟಿನಲ್ಲಿ ಶನಿವಾರ ಗ್ರಾಮ ಸಂಚಾರ ಆರಂಭಿಸಿದ್ದಾರೆ.
ಹೋಬಳಿಯ ಹಲವರು ಮುಖಂಡರು, ಕಾರ್ಯಕರ್ತರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಿದ್ದಾರೆ.
ಹೋಬಳಿಯ ಗೊಡ್ಲುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಂದೇನಹಳ್ಳಿ, ಪುರ, ಚಿಕ್ಕನಹಳ್ಳಿ, ಹರಳೂರು ನಾಗೇನಹಳ್ಳಿ, ಸೇರಿದಂತೆ ಹಲವು ಹಳ್ಳಿಗಳಿಗೆ ಭೇಟಿ ನೀಡಿ, ಪಕ್ಷದ ಮುಖಂಡರು, ಕಾರ್ಯಕರ್ತರೊಟ್ಟಿಗೆ ಸಮಾಲೋಚನೆ ನಡೆಸಿ, ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ.
ಒಂದು ಕಡೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಪುತ್ರ ಅಲೋಕ್ ವಿಶ್ವನಾಥ್ ಅವರೂ ಟಿಕೆಟ್ ಆಕಾಂಕ್ಷಿಯಾಗಿದ್ದು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸುಧಾಕರ್ ಕ್ಷೇತ್ರ ಸಂಚಾರ ಆರಂಭಿಸುವ ಮೂಲಕ ತಮ್ಮ ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರಲ್ಲಿ ಹುರುಪು ತುಂಬುತ್ತಿದ್ದಾರೆ.
ಈ ವೇಳೆ ಮಾತನಾಡಿದ ಡಾ.ಕೆ.ಸುಧಾಕರ್, ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜನವಿರೋಧಿ ಸರ್ಕಾರವಾಗಿ ಕೆಲಸ ಮಾಡುತ್ತಿದೆ. ಸಂಸದ ಡಿ.ಕೆ.ಸುರೇಶ್ ಅವರು, ದೇಶವನ್ನು ಇಬ್ಭಾಗ ಮಾಡುವಂತಹ ಹೇಳಿಕೆ ನೀಡಿದ್ದಾರೆ. ಇದು ಭವಿಷ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹಿನ್ನಡೆ ಉಂಟು ಮಾಡಲಿದೆ’ ಎಂದು ಹೇಳಿದರು.
ಬಿ.ಚೇತನ್ ಗೌಡ, ನಾರಾಯಣಸ್ವಾಮಿ, ಗೊಡ್ಲುಮುದ್ದೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಜಗದೀಶ್, ಸದಸ್ಯ ರಾಜಣ್ಣ, ಜೆಡಿಎಸ್ ಮುಖಂಡರಾದ ಚಿಕ್ಕನಹಳ್ಳಿ ಸುಬ್ಬಣ್ಣ, ಕಲ್ಯಾಣ್ ಕುಮಾರ್ ಬಾಬು, ಶಿವಾನಂದ, ಪುರ ಕೃಷ್ಣಪ್ಪ, ಅಶ್ವಥ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.