ADVERTISEMENT

ಉತ್ತಮ ಇಳುವರಿಗೆ ಮಣ್ಣಿನ ಫಲವತ್ತತೆ ಕಾಪಾಡಿ

ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದ ತರಬೇತಿ, ದ್ವಿತಳಿ ರೇಷ್ಮೆ ಬೆಳೆ ಕ್ಷೇತ್ರೋತ್ಸವ

​ಪ್ರಜಾವಾಣಿ ವಾರ್ತೆ
Published 5 ಜನವರಿ 2020, 13:11 IST
Last Updated 5 ಜನವರಿ 2020, 13:11 IST
ಚನ್ನರಾಯಪಟ್ಟಣ ಹೋಬಳಿ ಯಲಿಯೂರು ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ವ್ಯಾಪ್ತಿಯ ಜೊನ್ನಹಳ್ಳಿ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ರೈತರಿಗೆ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮದಲ್ಲಿ ವಿಜ್ಞಾನಿ ಚಲಪತಿ ಮಾತನಾಡಿದರು
ಚನ್ನರಾಯಪಟ್ಟಣ ಹೋಬಳಿ ಯಲಿಯೂರು ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ವ್ಯಾಪ್ತಿಯ ಜೊನ್ನಹಳ್ಳಿ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ರೈತರಿಗೆ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮದಲ್ಲಿ ವಿಜ್ಞಾನಿ ಚಲಪತಿ ಮಾತನಾಡಿದರು   

ವಿಜಯಪುರ: ‘ಹಿಪ್ಪುನೇರಳೆ ಸೊಪ್ಪಿನ ಬೆಳೆಯಲ್ಲಿ ಉತ್ತಮ ಇಳುವರಿ ಪಡೆಯಲು ಮಣ್ಣಿನ ಫಲವತ್ತತೆ ಕಾಪಾಡುವುದು ಅಗತ್ಯ’ ಎಂದು ರೇಷ್ಮೆ ಇಲಾಖೆ ವಿಜ್ಞಾನಿ ಚಲಪತಿ ಹೇಳಿದರು.

ಚನ್ನರಾಯಪಟ್ಟಣ ಹೋಬಳಿ ಯಲಿಯೂರು ರೇಷ್ಮೆ ತಾಂತ್ರಿಕ ಸೇವಾ ಕೇಂದ್ರದ ವ್ಯಾಪ್ತಿಯ ಜೊನ್ನಹಳ್ಳಿ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ರೈತರಿಗೆ2020ನೇ ಸಾಲಿನ ಆತ್ಮ ಯೋಜನೆಯಡಿ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ ಹಾಗೂ ದ್ವಿತಳಿ ರೇಷ್ಮೆ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ರೈತರು ತೋಟದಲ್ಲಿ ಮಣ್ಣು ಪರೀಕ್ಷೆ ಮಾಡಿಸುವ ಮೂಲಕ ಮಣ್ಣಿನಲ್ಲಿ ಕೊರತೆಯಿರುವ ಅಂಶಗಳ ಬಗ್ಗೆ ತಿಳಿಯಬೇಕು. ಭೂಮಿಗೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುವ ಮೂಲಕ ಉತ್ತಮ ಇಳುವರಿ ಪಡೆಯುವ ಕಡೆಗೆ ಗಮನ ಹರಿಸಬೇಕು. ಸ್ವಂತ ಅನುಭವದ ಆಧಾರದಲ್ಲಿ ಭೂಮಿಗೆ ಅಗತ್ಯವಿಲ್ಲದ ರಾಸಾಯನಿಕ ಗೊಬ್ಬರಗಳನ್ನು ಭೂಮಿಗೆ ನೀಡುವ ಮೂಲಕ ಫಲವತ್ತತೆ ಹಾಳು ಮಾಡಬಾರದು’ ಎಂದರು.

ADVERTISEMENT

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾವಿತ್ರಮ್ಮ ಮಾತನಾಡಿ, ‘ಸರ್ಕಾರ, ರೇಷ್ಮೆ ಇಲಾಖೆಯ ಮೂಲಕ ಏರ್ಪಡಿಸುವ ಇಂತಹ ತರಬೇತಿಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು. ದ್ವಿತಳಿ ರೇಷ್ಮೆ ಬೆಳೆಯುವ ಕಡೆಗೆ ಗಮನ ಹರಿಸಬೇಕು’ ಎಂದರು.

ರೇಷ್ಮೆಇಲಾಖೆಯ ಸಹಾಯಕ ನಿರ್ದೇಶಕಿ ಗಾಯಿತ್ರಿ ಮಾತನಾಡಿ, ‘ರೈತರು ಕಳೆ ನಾಶ ಮಾಡುವುದಕ್ಕೆ ಕಳೆನಾಶಕ ಔಷಧಿ ಸಿಂಪಡಣೆ ಮಾಡುತ್ತಾರೆ. ಇದರಿಂದ ಮಣ್ಣಿನಲ್ಲಿರುವ ಲವಣಾಂಶಗಳು ನಶಿಸಿ ಮಣ್ಣಿನ ಫಲವತ್ತತೆ ಇಲ್ಲವಾಗುತ್ತದೆ. ಇದರಿಂದ ಬೆಳೆ ಸರಿಯಾಗಿ ಆಗುವುದಿಲ್ಲ’ ಎಂದರು.

‘ವಿವಿಧ ಸಲಕರಣೆಗಳಿಂದ ಕಳೆ ನಾಶ ಮಾಡುವುದನ್ನು ರೈತರು ರೂಢಿಸಿಕೊಳ್ಳಬೇಕು. ಅತಿ ಹೆಚ್ಚು ರಾಸಾಯನಿಕ ಗೊಬ್ಬರಗಳನ್ನು ಬಳಸುವುದನ್ನು ಕಡಿಮೆ ಮಾಡಿದರೆ ಮಣ್ಣಿನ ಫಲವತ್ತತೆ ಉಳಿಯಲು ಸಹಕಾರಿಯಾಗುತ್ತದೆ. ಕೇಂದ್ರದ ವ್ಯಾಪ್ತಿಯಲ್ಲಿ ಮೂರು ತಿಂಗಳಿಗೊಮ್ಮೆಯಾದರೂ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿ ರೈತರಿಗೆ ಮಾಹಿತಿ ನೀಡಲಾಗುವುದು’ ಎಂದರು.

ಗ್ರಾಮ ಪಂಚಾಯಿತಿ ಸದಸ್ಯರಾದ ಭಾಗ್ಯಮ್ಮ, ಅನಿತಾ, ತಾಂತ್ರಿಕ ರೇಷ್ಮೆ ವಿಸ್ತರಣಾಧಿಕಾರಿ ಕೆ.ಎಂ.ಶ್ರೀನಿವಾಸ್, ರೇಷ್ಮೆ ಇಲಾಖೆ ಅಧಿಕಾರಿಗಳಾದ ವೆಂಕಟಾಚಲಪತಿ, ನರೇಂದ್ರಬಾಬು, ಸೂರ್ಯನಾರಾಯಣರಾಂ, ಪ್ರಕಾಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.