ADVERTISEMENT

‘ದೇಶದ ಸಮಗ್ರತೆ ಕಾಪಾಡಿ’

ರಾಷ್ಟ್ರೀಯ ಏಕತಾ ಸಪ್ತಾಹದ ಸಮಾರೋಪದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಲಹೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 5:12 IST
Last Updated 26 ನವೆಂಬರ್ 2020, 5:12 IST
ಗಗನಾರ್ಯ ಮಠದ ಐತಿಹಾಸಿಕ ಕಲ್ಯಾಣಿ ಸ್ವಚ್ಛತಾ ಕಾರ್ಯಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ. ನಾಯಕ್ ಚಾಲನೆ ನೀಡಿದರು
ಗಗನಾರ್ಯ ಮಠದ ಐತಿಹಾಸಿಕ ಕಲ್ಯಾಣಿ ಸ್ವಚ್ಛತಾ ಕಾರ್ಯಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ. ನಾಯಕ್ ಚಾಲನೆ ನೀಡಿದರು   

ದೊಡ್ಡಬಳ್ಳಾಪುರ: ಜಾಗತೀಕರಣ, ಖಾಸಗೀಕರಣದ ಈ ದಿನಗಳಲ್ಲಿ ದೇಶದ ಏಕತೆ, ಸಮಗ್ರತೆ ಕಾಪಾಡಿಕೊಂಡು ದೇಶವನ್ನು ಮುನ್ನಡೆಸುವ ಗುರುತರ ಹೊಣೆಗಾರಿಕೆ ಇದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ. ನಾಯಕ್ ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೌರಾಡಳಿತ ಇಲಾಖೆ, ಜಿಲ್ಲಾಡಳಿತ ಹಾಗೂ ನಗರಸಭೆ ಸಹಯೋಗದೊಂದಿಗೆ ನಗರಸಭೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಏಕತಾ ಸಪ್ತಾಹದ ಸಮಾರೋಪದ ಅಂಗವಾಗಿ ಪರಿಸರ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸಂವಿಧಾನದಲ್ಲಿ ನಂಬಿಕೆ ಇಟ್ಟು ಗೌರವ ನೀಡುವುದರೊಂದಿಗೆ ನಮ್ಮ ಕರ್ತವ್ಯ ನಿಭಾಯಿಸಬೇಕಿದೆ. ಏಕತೆ ಹಾಗೂ ಸಮಗ್ರತೆಯಿಂದ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕಿದೆ. ಭಾಷೆ, ನೆಲ, ಸಂಸ್ಕೃತಿ ವಿಷಯದಲ್ಲಿ ಭಾರತೀಯರಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ಶಕ್ತಿ ಇದೆ. ನಮ್ಮ ಕಲೆ, ಸಂಸ್ಕೃತಿ, ಪರಂಪರೆಗಳನ್ನು ವಿಶ್ವ ಮಟ್ಟದಲ್ಲಿ ಸಾರುವುದು ಹಾಗೂ ನಮ್ಮ ಪರಿಸರವನ್ನು ಸಂರಕ್ಷಣೆ ಮಾಡಿಕೊಳ್ಳುವುದು ಅಗತ್ಯವಾಗಿದೆ ಎಂದರು.

ADVERTISEMENT

ರಾಷ್ಟ್ರೀಯ ಏಕತಾ ಸಪ್ತಾಹದ ಕಾರ್ಯಕ್ರಮ ಈ ಧ್ಯೇಯಗಳಿಗೆ ಇಂಬು ನೀಡುತ್ತಿದೆ. ಜಿಲ್ಲೆಯಾದ್ಯಂತ ಕಾನೂನು ಸೇವೆಗಳ ಮಾರ್ಗದರ್ಶನದಂತೆ ರಾಷ್ಟ್ರೀಯ ಏಕತಾ ಸಪ್ತಾಹ ಆಚರಿಸಲಾಗಿದೆ. ವಿವಿಧ ಇಲಾಖೆಗಳು ಇದರಲ್ಲಿ ತೊಡಗಿಸಿಕೊಂಡಿವೆ. ಪರಿಸರ ಸಂರಕ್ಷಣೆ, ಪ್ರತಿಜ್ಞಾ ವಿಧಿ ಬೋಧನೆ, ಕವಿಗೋಷ್ಠಿ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಸಪ್ತಾಹದಲ್ಲಿ ಹಮ್ಮಿಕೊಳ್ಳಲಾಗಿತ್ತು ಎಂದರು.

ಕಾರ್ಯಕ್ರಮದ ಅಂಗವಾಗಿ ನಾಗರಕೆರೆ ಅಂಗಳದಲ್ಲಿ ಸಸಿಗಳನ್ನು ನೆಡಲಾಯಿತು ಹಾಗೂ ಗಗನಾರ್ಯ ಮಠದಲ್ಲಿನ ಐತಿಹಾಸಿಕ ಕಲ್ಯಾಣಿ ಸ್ವಚ್ಛಗೊಳಿಸಲಾಯಿತು.

ಪೌರಾಡಳಿತ ಇಲಾಖೆ ಜಿಲ್ಲಾ ಯೋಜನಾ ನಿರ್ದೇಶಕಿ ಬಿ.ಎಸ್. ಸುಮಾ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಪರಿಸರ ಎಂಜಿನಿಯರ್‌ ಈರಣ್ಣ, ಹಿರಿಯ ಆರೋಗ್ಯ ನಿರೀಕ್ಷಕಿ ರೂಪಾ ಹಾಗೂ ನಗರಸಭೆ ಸಿಬ್ಬಂದಿ, ಪೌರಕಾರ್ಮಿಕರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.