ದೊಡ್ಡಬಳ್ಳಾಪುರ: ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ಶಾಸಕ ಟಿ.ವೆಂಕಟರಮಣಯ್ಯ ಭೇಟಿ ಮಾಡಿ ನಿಗಮ ಅಥವಾ ಮಂಡಳಿ ಅಧ್ಯಕ್ಷ ಸ್ಥಾನ ಕುರಿತು ಮಾತುಕತೆ ನಡೆಸಿದರು.
ಈ ಬಗ್ಗೆ ಮಾಹಿತಿ ನೀಡಿದ ಶಾಸಕ ಟಿ.ವೆಂಕಟರಮಣಯ್ಯ, ’ಪಕ್ಷದ ವರಿಷ್ಠರು ನೀಡುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ. ಆದರೆ, ಯಾವುದನ್ನು ಬಲವಂತವಾಗಿ ಕೇಳಿ ಪಡೆಯುವ ಅಥವಾ ಬ್ಲ್ಯಾಕ್ ಮೇಲ್ ಮಾಡಿ ಪಡೆಯುವ ಅಗತ್ಯ ನನಗಿಲ್ಲ. ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡುವುದಾಗಿ ಹೇಳಲಾಗಿತ್ತು. ಆದರೆ, ಕೆಲವು ತಾಂತ್ರಿಕ ಕಾರಣಗಳಿಂದಾಗಿ ವಿಳಂಬವಾಗಿದೆ. ಯಾವುದೇ ನಿಗಮ, ಮಂಡಳಿಯ ಅಧ್ಯಕ್ಷ ಪದವಿ ಇಲ್ಲದೆಯೂ ಐದು ವರ್ಷಗಳ ಕಾಲ ಶಾಸಕನಾಗಿ ಕ್ಷೇತ್ರದಲ್ಲಿ ₹2 ಸಾವಿರ ಕೋಟಿಯ ಅಭಿವೃದ್ಧಿ ಕೆಲಸ ಮಾಡಿಸಿದ್ದೇನೆ’ ಎಂದರು.
‘ಈಗಿನ ಸಮ್ಮಿಶ್ರ ಸರ್ಕಾರವು ಕ್ಷೇತ್ರದಲ್ಲಿನ ಅಭಿವೃದ್ಧಿ ಕೆಲಸಗಳಿಗೆ ತೊಂದರೆ ಇಲ್ಲದೆ ಅನುದಾನ ಬಿಡುಗಡೆ ಮಾಡುತ್ತಿದೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಹಾಗಾಗಿ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ನೀಡಲಿ, ನೀಡದಿರಲಿ ಕೆಲಸ ಮಾಡುತ್ತೇನೆ. ಪಕ್ಷದ ವರಿಷ್ಠರು ಕ್ಷೇತ್ರದಲ್ಲಿನ ಅಭಿವೃದ್ಧಿ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವರಿಷ್ಠರು ನನ್ನ ಮೇಲೆ ಹೆಚ್ಚಿನ ವಿಶ್ವಾಸ ಇಟ್ಟಿದ್ದಾರೆ. ಇದನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತೇನೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.