ದೊಡ್ಡಬಳ್ಳಾಪುರ: ಸಾಮಾಜಿಕ ಹೊಣೆಗಾರಿಕೆಯನ್ನು ಸಮರ್ಪಕವಾಗಿ ನಿಭಾಯಿಸುವ ಮೂಲಕ ಪತ್ರಕರ್ತರು ವೃತ್ತಿ ಘನತೆ ಎತ್ತಿ ಹಿಡಿಯಬೇಕಿದೆ ಎಂದು ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಕಿವಿಮಾತು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಾಗೂ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಜಿಲ್ಲಾ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬದಲಾದ ತಂತ್ರಜ್ಞಾನದಕ್ಕೆ ಪೂರಕವಾಗಿ ಹೊಸ ಬಗೆಯ ಆಲೋಚನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡುವುದು ಅವಶ್ಯ. ಬದುಕಿನ ಜೊತೆಗೆ ನೈತಿಕ ಬದ್ಧತೆ ಉಳಿಸಿಕೊಂಡು ಕೆಲಸ ಮಾಡಬೇಕಿದೆ ಎಂದು ಸಲಹೆ ಮಾಡಿದರು.
ಪತ್ರಕರ್ತರು ಯಾವುದೇ ವಿಚಾರದಲ್ಲಿ ಪೂರ್ವಾಗ್ರಹ ಪೀಡಿತರಾಗಿ ವರ್ತಿಸದೇ ನಿಷ್ಪಕ್ಷಪಾತವಾಗಿ ವರದಿ ಮಾಡುವಂತೆ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಹೇಳಿದರು.
ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಪತ್ರಿಕೋದ್ಯಮಕ್ಕೆ ಹೆಚ್ಚಿನ ಜವಾಬ್ದಾರಿಗಳಿವೆ. ಸಮಾಜದ ತಪ್ಪು ತಿದ್ದುವ ಕಾರ್ಯವನ್ನು ಪತ್ರಕರ್ತರು ಮಾಡಬೇಕು ಎಂದು ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ರವಿಮಾವಿನಕುಂಟೆ ಹೇಳಿದರು.
ಪತ್ರಕರ್ತರಾದ ನೆಲಮಂಗಲದ ಎನ್.ಮೂರ್ತಿ, ದೊಡ್ಡಬಳ್ಳಾಪುರದ ಎನ್.ಎಂ.ನಟರಾಜ, ದೇವನಹಳ್ಳಿಯ ಎಸ್.ಸಿ.ಎಂ.ಬೈರೇಗೌಡ, ಹೊಸಕೋಟೆಯ ಎನ್.ಎಂ.ನಾಗರಾಜ, ವಿಜಯಪುರದ ವೆಂಕಟೇಶ್ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಿ.ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ರಮೇಶ್ ಪ್ರಾಸ್ತಾವಿಕ ಮಾತನಾಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯೆ ಕುಸುಮ ಪರ್ವತರಾಜು,ತಾಲ್ಲೂಕು ಸಂಘದ ಅಧ್ಯಕ್ಷ ಚಂದ್ರಶೇಖರ್ ಡಿ.ಉಪ್ಪಾರ್, ಗೌರವ ಅಧ್ಯಕ್ಷ ಕೆ.ಸಿ.ರುದ್ರೇಶ, ಕಾರ್ಯದರ್ಶಿ ಚಂದ್ರಪ್ಪ ನೆಲ್ಲುಗುಡಿಗೆ, ಜಿಲ್ಲಾ ಉಪಾಧ್ಯಕ್ಷ ಮುರಳಿಮೋಹನ, ಬಿ.ಎಸ್.ಮಂಜುನಾಥ, ಜ್ಯೋತೀಶ್ವರಪ್ಪ, ಕಾರ್ಯದರ್ಶಿ ಪರಮಶಿವಯ್ಯ, ನಾಗರಾಜ, ಖಜಾಂಚಿ ಶಾಂತಮೂರ್ತಿ, ಜಿಲ್ಲಾ ಕಸಾಪ ಕಾರ್ಯದರ್ಶಿ ಕೆ.ಆರ್.ರವಿಕಿರಣ್, ತಾಲ್ಲೂಕು ಪತ್ರಕರ್ತರ ಸಂಘ ಕೊತ್ತೂರಪ್ಪ, ಶ್ರೀನಿವಾಸ ತೇರದಾಳ, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ಸುನಿಲ, ನೆಲಮಂಗಲ ತಾಲ್ಲೂಕು ಅಧ್ಯಕ್ಷ ಕೃಷ್ಣಪ್ಪ, ಹೊಸಕೋಟೆ ತಾಲ್ಲೂಕು ಅಧ್ಯಕ್ಷ ನಾಗರಾಜ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.