ADVERTISEMENT

ಬಿಜೆಪಿ ಅಭ್ಯರ್ಥಿ ಪರ ಸಂಸದ ಮುನಿಸ್ವಾಮಿ ಪ್ರಚಾರ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2020, 2:31 IST
Last Updated 23 ಅಕ್ಟೋಬರ್ 2020, 2:31 IST
ಮಾಲೂರು ಪಟ್ಟಣದಲ್ಲಿ ಗುರುವಾರ ತಾಲ್ಲೂಕು ಬಿಜೆಪಿ ಘಟಕದಿಂದ ಹಮ್ಮಿಕೊಂಡಿದ್ದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಸಂಸದ ಎಸ್. ಮುನಿಸ್ವಾಮಿ ಮಾತನಾಡಿದರು
ಮಾಲೂರು ಪಟ್ಟಣದಲ್ಲಿ ಗುರುವಾರ ತಾಲ್ಲೂಕು ಬಿಜೆಪಿ ಘಟಕದಿಂದ ಹಮ್ಮಿಕೊಂಡಿದ್ದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಸಂಸದ ಎಸ್. ಮುನಿಸ್ವಾಮಿ ಮಾತನಾಡಿದರು   

ಮಾಲೂರು: ‘ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯನ್ನು ಕಾರ್ಯಕರ್ತರು ಗಂಭೀರವಾಗಿ ತೆಗೆದುಕೊಂಡು ಪದವೀಧರರ ಮನೆಗೆ ಭೇಟಿ ನೀಡಿ ಮತ ಕೇಳಿದಾಗ ಮಾತ್ರ ಪಕ್ಷದ ಅಭ್ಯರ್ಥಿ ಗೆಲ್ಲಲು ಸಾಧ್ಯ’ ಎಂದು ಸಂಸದ ಎಸ್. ಮುನಿಸ್ವಾಮಿ ಹೇಳಿದರು.

ಪಟ್ಟಣದಲ್ಲಿ ಗುರುವಾರ ತಾಲ್ಲೂಕು ಬಿಜೆಪಿ ಘಟಕದಿಂದ ಹಮ್ಮಿಕೊಂಡಿದ್ದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಬಿಜೆಪಿ ಆಭ್ಯರ್ಥಿ ಚಿದಾನಂದ ಎಂ. ಗೌಡ ಅವರ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇದು ಕಾರ್ಯಕರ್ತರ ಶಕ್ತಿ ಮತ್ತು ಸಾಮರ್ಥ್ಯ ತೋರಿಸುವ ಚುನಾವಣೆಯಾಗಿದೆ. ಹಾಗಾಗಿ, ಪಟ್ಟಣ ಸೇರಿದಂತೆ ತಾಲ್ಲೂಕಿನಲ್ಲಿರುವ ಪದವೀಧರ ಮತದಾರರ ಮನೆಗಳಿಗೆ ಭೇಟಿ ನೀಡಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಪದವೀಧರರು, ಶಿಕ್ಷಕರು ಮತ್ತು ನಿರುದ್ಯೋಗಿ ಪದವೀಧರರಿಗೆ ನೀಡಿರುವ ಕೊಡುಗೆಗಳ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿಕೊಡಬೇಕು’ ಎಂದು ಸಲಹೆ ನೀಡಿದರು.

ADVERTISEMENT

ಒತ್ತಡದಲ್ಲಿ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರ ಮಾಡಲು ಆಗುವುದಿಲ್ಲ. ಅದಕ್ಕಾಗಿ ಇಂದಿನಿಂದಲೇ ಪದವೀಧರರನ್ನು ಸಂಪರ್ಕಿಸಿ ಚಿದಾನಂದ ಗೌಡ ಅವರ ಗೆಲುವಿಗೆ ಶ್ರಮಿಸಲು ಮುಂದಾಗಬೇಕು ಎಂದರು.

ಇಡೀ ದೇಶವೇ ಕೊರೊನಾದಿಂದ ತತ್ತರಿಸಿ ಹೋಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಕೊರೊನಾ ಸೋಂಕು ತಡೆಗೆ ಪಣತೊಟ್ಟಿದೆ. ಪದವೀಧರ ನಿರುದ್ಯೋಗಿಗಳು ಮತ್ತು ಶಿಕ್ಷಕರಿಗಾಗಿ ಪ್ರಧಾನಿ ನರೇಂದ್ರ ಮೋದಿ ₹ 72 ಸಾವಿರ ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ್ದಾರೆ. ನಿರುದ್ಯೋಗಿ ಪದವೀಧರರು ಸ್ವಾವಲಂಬಿಯಾಗಿ ಬದುಕಲು ಬ್ಯಾಂಕ್‌ಗಳಿಂದ ಸೌಲಭ್ಯ ಕಲ್ಪಿಸಲಾಗಿದೆ. ಈ ಬಗ್ಗೆ ಅವರಿಗೆ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.

ಕಳೆದ ಆರು ವರ್ಷಗಳ ಅವಧಿಯಲ್ಲಿ ಜೆಡಿಎಸ್‌ನ ವಿಧಾನ ಪರಿಷತ್ ಸದಸ್ಯ ತೋಪಲ್ಲಿ ನಾರಾಯಣಸ್ವಾಮಿ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ಈ ಕುರಿತು ಮತದಾರರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.

ಸಭೆಯಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಪುರ ನಾರಾಯಣಸ್ವಾಮಿ, ಎಸ್‌ಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಹನುಮಂತಪ್ಪ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಎಂ. ರಾಮಮೂರ್ತಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಅಮುದ, ಮುಖಂಡರಾದ ಪಿ. ನಾರಾಯಣಸ್ವಾಮಿ, ಗುರುನಾಥ್ ರೆಡ್ಡಿ, ನಗರ ಪ್ರಾಧಿಕಾರದ ಅಧ್ಯಕ್ಷ ಸತೀಶ್ ಆರಾಧ್ಯ, ಪುರಸಭೆ ಸದಸ್ಯ ಎಂ.ವಿ. ವೇಮನ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.