ವಿಜಯಪುರ: 2022ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಪೈಕಿ ಪ್ರಥಮ ಸ್ಥಾನಕ್ಕೆ ಏರಿಸುವ ಸಂಕಲ್ಪವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ಇದಕ್ಕೆ ಜನರ ಆಶೀರ್ವಾದ ಬೇಕಾಗಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎನ್. ಬಚ್ಚೇಗೌಡ ಹೇಳಿದರು.
ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಗ್ರಾಮದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರದಲ್ಲಿ ಜನರನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮೋದಿಯವರ ಹೆಸರಿನಲ್ಲೇ ಮೋಡಿ ಇದೆ. ದೇಶ ಸುಭದ್ರವಾಗಿರಬೇಕು ಎನ್ನುವ ಕನಸು ಹೊತ್ತಿರುವ ಅವರ ಕೈ ಬಲಪಡಿಸುವ ಕೆಲಸವನ್ನು ಬಿಜೆಪಿಗೆ ಮತ ನೀಡುವ ಮೂಲಕ ಜನರು ಮಾಡಬೇಕು ಎಂದರು.
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ರಾಜಣ್ಣ ಮಾತನಾಡಿ, ದೇಶದ ಬಹುತೇಕ ರಾಜಕೀಯ ಪಕ್ಷಗಳು ಕಾಂಗ್ರೆಸ್ ವಿರುದ್ಧವಾಗಿವೆ. ಆದರೂ, ಚುನಾವಣೆ ಸಂದರ್ಭದಲ್ಲಿ ಅವರುಗಳು ಒಂದಾಗುತ್ತಾರೆ ಎಂದರು. ಬಿಜಿಪಿ ಮುಖಂಡ ಛಲವಾದಿ ನಾರಾಯಣಸ್ವಾಮಿ ಮಾತನಾಡಿದರು.
ಬಿಜೆಪಿ ವಕ್ತಾರ ಸಚ್ಚಿದಾನಂದ್ ಮೂರ್ತಿ, ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜಗೌಡ, ಹೊಸಕೋಟೆ ತಾಲ್ಲೂಕು ಘಟಕದ ಉಪಾಧ್ಯಕ್ಷ ಎಚ್.ಎಂ.ಸುಬ್ಬರಾಜು, ಮುಖಂಡರಾದ ಅಶ್ವಥ್ ನಾರಾಯಣ, ಪ್ರಭಾಕರ್, ನಾರಾಯಣಸ್ವಾಮಿ, ಎ.ಸಿ ಗುರುಸ್ವಾಮಿ, ಮೋಹನ್, ಚನ್ನರಾಯಪಟ್ಟಣ ಹೋಬಳಿ ಶಕ್ತಿ ಕೇಂದ್ರದ ಅಧ್ಯಕ್ಷ ರಾಮಾಂಜಿನೇಯ, ತಾಲ್ಲೂಕು ರೈತ ಮೋರ್ಚಾ ಅಧ್ಯಕ್ಷ ಅಗ್ರಹಾರ ರಾಜಣ್ಣ, ತಾಲ್ಲೂಕು ಎಸ್ಸಿ ಮೋರ್ಚಾ ಉಪಾಧ್ಯಕ್ಷ ಹಂದರಹಳ್ಳಿ ಬಾಬು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.