ವಿಜಯಪುರ: ದೇವನಹಳ್ಳಿ ಮೀಸಲು ಕ್ಷೇತ್ರವಾದರೂ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಳೆದ ಸರ್ಕಾರದಿಂದ ಅಗತ್ಯ ನೆರವು ಸಿಕ್ಕಿಲ್ಲ. ಬಿಜೆಪಿ ಸರ್ಕಾರದಲ್ಲಿ ಹೆಚ್ಚಿನ ಸಹಕಾರ ನೀಡಬೇಕು ಎಂದು ಮುಖಂಡ ಪಿಳ್ಳಮುನಿಶಾಮಪ್ಪ ಅವರು ನೂತನ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ ಸಲ್ಲಿಸಿದರು.
ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಅವರನ್ನು ಸನ್ಮಾನಿಸಿ, ದೇವನಹಳ್ಳಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಬೇಕೆಂದು ಎಂದು ಮನವಿ ಮಾಡಿದರು.
ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಖ್ಯಾತಿಯ ತಾಲ್ಲೂಕಿನಲ್ಲಿ ಕುಡಿಯುವ ನೀರು, ನಿರುದ್ಯೋಗ ಸಮಸ್ಯೆ ಇದೆ. ದನ ಕರುಗಳ ಮೇವಿಗೆ ಹಾಹಾಕಾರ ಇದೆ. ಕ್ಷೇತ್ರದ ಜನರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ನಿರುದ್ಯೋಗ ಯುವ ಜನರಿಗೆ ಉದ್ಯೋಗ ಅವಕಾಶ ಕಲ್ಪಿಸಲು ಕಾರ್ಖಾನೆಗಳನ್ನು ಸ್ಥಾಪನೆ ಮಾಡಬೇಕು. ನೀರಾವರಿ ಯೋಜನೆಗಳು ಸಾಕಾರಗೊಳ್ಳಬೇಕು. ರಸ್ತೆಗಳ ಅಭಿವೃದ್ಧಿಯಾಗಬೇಕು. ತಾಲ್ಲೂಕಿನಲ್ಲಿ ಎರಡು ಪುರಸಭೆಗಳಿದ್ದು ಸರ್ವತೋಮುಖ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು.
ಹೊಸಕೋಟೆ ಬಿಜೆಪಿ ತಾಲ್ಲೂಕು ಘಟಕದ ಉಪಾಧ್ಯಕ್ಷ ಎಚ್.ಎಂ.ಸುಬ್ಬರಾಜು ಮಾತನಾಡಿ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಮಳೆ ಕೊರತೆಯಿಂದಾಗಿ ಬರಗಾಲ ಎದುರಾಗಿದೆ. ಕಳೆದ ವರ್ಷ ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿದ್ದರೂ ಅಗತ್ಯ ಅನುದಾನ ಬಿಡುಗಡೆಯಾಗಿಲ್ಲ.ಸರ್ಕಾರ ಹೆಚ್ಚಿನ ಕಾಳಜಿ ವಹಿಸಬೇಕು ಎಂದರು.
ಕರ್ನಾಟಕ ಮಾದಿಗ ದಂಡೋರ ರಾಜ್ಯ ಘಟಕದ ಉಪಾಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ ಮಾತನಾಡಿ, ತಾಲ್ಲೂಕಿನ ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ಅಗತ್ಯ ಆದಾಯ ಸಿಗುತ್ತಿಲ್ಲ. ಹಳ್ಳಿಗಳಲ್ಲಿ ಮೂಲ ಸೌಕರ್ಯ ಒದಗಿಸಲು ಕಷ್ಟವಾಗುತ್ತಿದೆ. ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಿಗೆ ವಿಶೇಷ ಸೌಲಭ್ಯ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು.
ತಾಲ್ಲೂಕು ಕೇಂದ್ರಕ್ಕೆ ಮನವಿ : ವಿಜಯಪುರ ಹೋಬಳಿ ಅಭಿವೃದ್ಧಿ ದೃಷ್ಟಿಯಿಂದ ಬೆಳವಣಿಗೆ ಹೊಂದುತ್ತಿರುವ ನಗರವಾಗಿದೆ. ತಾಲ್ಲೂಕು ಕೇಂದ್ರವಾಗಲು ಎಲ್ಲಾ ಅರ್ಹತೆ ಹೊಂದಿದೆ. ಬಿಜೆಪಿ ಸರ್ಕಾರದಲ್ಲಾದರೂ ತಾಲ್ಲೂಕು ಕೇಂದ್ರ ಘೋಷಣೆ ಮಾಡಿಸಬೇಕು ಎಂದು ಮನವಿ ಮಾಡಿದರು. ಸಂಸದ ಎ.ನಾರಾಯಣಸ್ವಾಮಿ, ಮುಖಂಡರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.