ಸೂಲಿಬೆಲೆ: ‘ಎಂ.ಟಿ.ಬಿ. ನಾಗರಾಜ್ ರಾಜ್ಯಕ್ಕೆ ಮಂತ್ರಿಯಾಗಿದ್ದಾರೆ. ಆದರೆ, ಅವರು ಜಿಲ್ಲಾ ಉಸ್ತುವಾರಿ ಇಲ್ಲದಿದ್ದರೂ ಹೊಸಕೋಟೆ ತಾಲ್ಲೂಕನ್ನೇ ರಾಜ್ಯ ಮಾಡಿಕೊಂಡಿದ್ದಾರೆ’ ಎಂದು ಶಾಸಕ ಶರತ್ ಬಚ್ಚೇಗೌಡ ಲೇವಡಿ ಮಾಡಿದರು.
ಹೋಬಳಿಯ ಕಂಬಳೀಪುರ ಗ್ರಾಮದಲ್ಲಿ ಶನಿವಾರ ನಡೆದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಸಚಿವ ನಾಗರಾಜ್ ವೇದಿಕೆಯಿಂದ ತೆರಳಿದ ಬಳಿಕ ಮಾತನಾಡಿದ ಅವರು,ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಂಬಳೀಪುರ ಗ್ರಾಮದ ಗೋಮಾಳ ಭೂಮಿಯನ್ನು ಗ್ರಾಮಸ್ಥರಿಗೆ ಹಂಚಿಕೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ವೇದಿಕೆಯಲ್ಲಿ ಮೊದಲು ಮಾತನಾಡಿದ ಸಚಿವ ಎಂ.ಟಿ.ಬಿ. ನಾಗರಾಜ್ ಮಾತನಾಡಿ, ‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ’ ಕಾರ್ಯಕ್ರಮ ರಾಜ್ಯದಲ್ಲಿ ಯಶಸ್ವಿಯಾಗಿದ್ದು, ಬಡವರ ಮನೆ ಬಾಗಿಲಿಗೆ ಜಿಲ್ಲಾಡಳಿತ ಬರುತ್ತಿದೆ. ಒತ್ತುವರಿ ಆಗಿರುವ ಸರ್ಕಾರಿ ಭೂಮಿಯನ್ನು ಸರ್ಕಾರ ತೆರವುಗೊಳಿಸಿ ಬಡವರಿಗೆ ಹಂಚಿಕೆ ಮಾಡಲು ಕ್ರಮಕೈಗೊಳ್ಳುತ್ತದೆ ಎಂದರು.
ಸರ್ಕಾರದಿಂದ ಮಂಜೂರಾಗಿರುವ ಸವಲತ್ತುಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.ತಹಶೀಲ್ದಾರ್ ಮಹೇಶ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಚಂದ್ರಶೇಖರ್, ಗ್ರೇಡ್ 2 ತಹಶೀಲ್ದಾರ್ ಪ್ರಭಾಕರ್, ಪಶು ವೈದ್ಯಾಧಿಕಾರಿ ಡಾ.ಮಂಜುನಾಥ್, ರಾಜಸ್ವ ನಿರೀಕ್ಷಕ ನ್ಯಾನಮೂರ್ತಿ, ಗ್ರಾಮ ಲೆಕ್ಕಾಧಿಕಾರಿ ರಫೀಕ್, ಪಿಡಿಒ ದಿಲೀಪ್ ಕುಮಾರ್ ಹಾಗೂ ಅಧಿಕಾರಿಗಳು
ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.