ಹೊಸಕೋಟೆ: 'ವಸತಿ ಸಚಿವ ಎಂ.ಟಿ.ಬಿ. ನಾಗರಾಜ್ ಅವರು ಸ್ಥಳೀಯ ನಾಯಕರೊಂದಿಗೆ ಚರ್ಚಿಸದೆ ಏಕಾಏಕಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿರುವುದು ತಮಗೆ ಆಘಾತವಾಗಿದೆ' ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೆಪಿಸಿಸಿ ಅಧ್ಯಕ್ಷ ಮುನಿಶಾಮಣ್ಣ ತಿಳಿಸಿದ್ದಾರೆ.
‘ಪಕ್ಷದ ಕಾರ್ಯಕರ್ತರು ಎಂ.ಟಿ.ಬಿ. ನಾಗರಾಜ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಿದ್ದು 5 ವರ್ಷ ತಾಲ್ಲೂಕಿನ ಮತದಾರರ ಸೇವೆ ಮಾಡುವುದಕ್ಕಾಗಿ. ಆದರೆ ಅವರು ನಮ್ಮ ಯಾವುದೇ ತಾಲ್ಲೂಕು ಬ್ಲಾಕ್ ಕಾರ್ಯಕರ್ತರ ಜೊತೆ ಸಮಾಲೋಚಿಸದೆ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಬಾರದಾಗಿತ್ತು. ನಮ್ಮದೇನಾದರೂ ತಪ್ಪುಗಳಿದ್ದರೆ ನಾವು ಅದನ್ನು ತಿದ್ದಿಕೊಳ್ಳುತ್ತಿದ್ದೆವು. ಆದರೂ ನಮಗೆ ಅವರ ಬಗ್ಗೆ ವಿಶ್ವಾಸವಿದ್ದು ನಮ್ಮ ನಾಯಕರಾದ ಸಿದ್ದರಾಮಯ್ಯ ಹಾಗೂ ವೀರಪ್ಪ ಮೊಯಿಲಿ ಅವರ ಮಾತಿಗೆ ಬೆಲೆ ಕೊಟ್ಟು ಅವರು ತಮ್ಮ ನಿರ್ಧಾರ ಬದಲಿಸುತ್ತಾರೆ’ ಎಂದರು.
‘ಅವರನ್ನು ಭೇಟಿ ಮಾಡಿ ಅವರ ಮನವೊಲಿಸಿ ರಾಜಿನಾಮೆಯನ್ನು ವಾಪಸ್ ಪಡೆಯಲು ಹೇಳುತ್ತೇನೆ. ಅಕಸ್ಮಾತ್ ಅವರು ಇದಕ್ಕೆ ಒಪ್ಪದಿದ್ದರೆ ಅವರ ಮೇಲೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.