ADVERTISEMENT

ರೈತರ ಹೆಸರಿನಲ್ಲಿ ದಲ್ಲಾಳಿಗಳ ಪ್ರತಿಭಟನೆ

ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರರಾದ ಪುಷ್ಪಾಶಿವಶಂಕರ್ ಗಂಭೀರ ಆರೋಪ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2020, 7:32 IST
Last Updated 9 ಡಿಸೆಂಬರ್ 2020, 7:32 IST
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ ಮಾತನಾಡಿದರು
ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ ಮಾತನಾಡಿದರು   

ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ಪರವಾದ ಕಾಯ್ದೆಗಳನ್ನು ವಿರೋಧಿಸಿ ಭಾರತ್‌ ಬಂದ್‌ ನಡೆಸುತ್ತಿರುವವರು ದಲ್ಲಾಳಿಗಳಿಂದ ಪ್ರಚೋದನೆಗೆ ಒಳಗಾಗಿರುವವರೇ ಹೊರತು ನಿಜವಾದ ರೈತರು ಹೊಲಗಳಲ್ಲಿ ಕೆಲಸ ಮಾಡಿಕೊಂಡಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಮಾಧ್ಯಮ ವಕ್ತಾರರಾದ ಪುಷ್ಪಾಶಿವಶಂಕರ್ ಹೇಳಿದರು.

ಅವರು ಮಂಗಳವಾರ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ಮೂರು ಕೃಷಿ ಮಸೂದೆ ವಿರೋಧಿಸಿ ಬಂದ್, ಪ್ರತಿಭಟನೆ ನಡೆಸಲಾಗುತ್ತಿದೆ. ಆದರೆ, ರೈತರ ಹಿತ ಕಾಪಾಡಲು ಕೇಂದ್ರ ಸರ್ಕಾರ ಕೃಷಿಕರ ಹಾಗೂ ಕೃಷಿ ಕ್ಷೇತ್ರದ ಸುಧಾರಣೆಗೆ ಸ್ವಾತಂತ್ರ್ಯ ನಂತರ ರೈತರಪರವಾಗಿ ಇಷ್ಟೊಂದು ದೊಡ್ಡ ನಿರ್ಣಯ ಬೇರೆ ಯಾವುದೇ ಸರ್ಕಾರ ಮಾಡಿರಲಿಲ್ಲ ಎಂದರು.

ಪ್ರಧಾನಮಂತ್ರಿ ಫಸಲ್ ಬಿಮಾ, ಕಿಸಾನ್ ಸಮ್ಮಾನ್ ನಿಧಿ ಸೇರಿ ಅನೇಕ ರೈತಪರ ಯೋಜನೆ ಜಾರಿ ಮಾಡಲಾಗಿದೆ. ರೈತರ ಆದಾಯ ದ್ವಿಗುಣ ಮಾಡಬೇಕೆಂಬ ಕಲ್ಪನೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸಾಗಿದೆ ಎಂದರು.

ADVERTISEMENT

ಬಿಜೆಪಿ ಜಿಲ್ಲಾ ಅಧ್ಯಕ್ಷ ಎ.ವಿ.ನಾರಾಯಣಸ್ವಾಮಿ ಮಾತನಾಡಿ, ಕೇಂದ್ರ ಸರ್ಕಾರ ಈಗ ಜಾರಿಗೆ ತಂದಿರುವ ಕೃಷಿ ಮಸೂದೆಗಳನ್ನೇ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿತ್ತು. ರೈತರ ಕಲ್ಯಾಣಕ್ಕಾಗಿ ಬಿಜೆಪಿ ಸರ್ಕಾರ ದೃಢಹೆಜ್ಜೆ ಇಟ್ಟಿದೆ. ಇದನ್ನು ಸಹಿಸಲಾಗದೆ ಮತ್ತು ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಎದುರಿಸಲಾಗದೆ ರೈತರ ಹೆಸರಿನಲ್ಲಿ ವಿರೋಧ ಪಕ್ಷಗಳು, ದಲ್ಲಾಳಿಗಳು ರೈತ ಸಂಘಟನೆಗಳನ್ನು ಬಳಸಿಕೊಂಡು ಪ್ರತಿಭಟನೆ ನಡೆಸುತ್ತಿವೆ ಎಂದು ದೂರಿದರು.

ಬಿಜೆಪಿ ರೈತ ಮೋರ್ಚಾ ತಾಲ್ಲೂಕು ಅಧ್ಯಕ್ಷ ಕೋಡಿ ನರಸಿಂಹಮೂರ್ತಿ ಮಾತನಾಡಿ, ರೈತರ ಹೆಸರಲ್ಲಿ ರಾಜಕೀಯ ಮಾಡಲು ವಿರೋಧ ಪಕ್ಷಗಳು ರೈತರನ್ನು ಬಳಸಿಕೊಳ್ಳುತ್ತಿವೆ ಎಂದು ದೂರಿದರು.

ನಗರ ಘಟಕದ ಅಧ್ಯಕ್ಷ ಎಚ್.ಎಸ್.ಶಿವಶಂಕರ್ ಮಾತನಾಡಿ, ರೈತ ಸಂಘದವರಿಗೆ ತಪ್ಪು ಮಾಹಿತಿ ನೀಡಿ ಪ್ರಚೋದಿಸಿ ಪ್ರತಿಭಟನೆಗೆ ಕರೆತರಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದರಾಜು, ತಾಲ್ಲೂಕು ಮಂಡಲ ಅಧ್ಯಕ್ಷ ನಾಗರಾಜು, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್‌ಗೌಡ, ರಾಜ್ಯ ಸಾಮಾಜಿಕ ಜಾಲತಾಣ ಪ್ರಮುಖ ಶಿವಾನಂದರೆಡ್ಡಿ, ರಾಜ್ಯ ಕಾರ್ಯಕಾರಣಿ ಸಮಿತಿ ಸದಸ್ಯ ಬಿ.ಸಿ.ನಾರಾಯಣಸ್ವಾಮಿ, ಜಿಲ್ಲಾ ಮಾಧ್ಯಮ ಪ್ರಮುಖ ರಮೇಶ್, ನಗರ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಮುನಿರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.