ದೇವನಹಳ್ಳಿ: ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆ ತರಲು ನೂತನ ಶಿಕ್ಷಣ ನೀತಿ ಜಾರಿ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.
ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನ ವತಿಯಿಂದ 2019 ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ನಡೆದ 10ನೇ ತರಗತಿ ಮತ್ತು ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡವಾರು ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
‘ಕೇಂದ್ರ ಸರ್ಕಾರದ ಉದ್ದೇಶಿತ ನೂತನ ಶಿಕ್ಷಣ ನೀತಿ ಕರಡು ಚರ್ಚೆಗೆ ಬಂದಿದೆ. ಇದರಿಂದ ಇಡೀ ದೇಶದಲ್ಲಿ ಶಿಕ್ಷಣದ ಕ್ರಾಂತಿಯಾಗಲಿದೆ. ಇದು ಸಮಾನ ಶಿಕ್ಷಣ ವ್ಯವಸ್ಥೆ. ಜಾತಿ ಧರ್ಮದ ಹಂಗಿಲ್ಲದೆ ವಿದ್ಯಾರ್ಥಿಳು ಶಿಕ್ಷಣ ಪಡೆಯಬಹುದು. 14 ವರ್ಷದವರೆಗೆ ಕಡ್ಡಾಯ ಶಿಕ್ಷಣ ಮುಂದುವರೆಯಲಿದೆ’ ಎಂದು ಹೇಳಿದರು.
ಪ್ರತಿಯೊಬ್ಬ ವಿದ್ಯಾರ್ಥಿ ಪ್ರಚಲಿತ ವಿದ್ಯಮಾನದ ಬಗ್ಗೆ ತಿಳಿದುಕೊಳ್ಳಬೇಕು. ಜಗತ್ತಿನ ಅನೇಕ ಕಡೆ ನೂತನ ಅವಿಷ್ಕಾರಗಳು ನಡೆಯುತ್ತಿರುತ್ತಿವೆ. ವಿಜ್ಞಾನ, ವಾಣಿಜ್ಯ, ಬಾಹ್ಯಾಕಾಶ, ಆರ್ಥಿಕ ವ್ಯವಸ್ಥೆಯಲ್ಲಿನ ಏರಿಳಿತ, ರಾಜಕೀಯದಲ್ಲಿನ ಬದಲಾವಣೆ, ಕ್ರೀಡೆ ಮತ್ತು ಸಾಂಸ್ಕೃತಿ ಕ್ಷೇತ್ರ ಪ್ರತಿಯೊಂದರ ಬಗ್ಗೆ ತಿಳಿದುಕೊಳ್ಳಬೇಕು ಎಂದರು.
ಬೋಧನೆ ಅಂಕ ಗಳಿಕೆಗೆ ಮಾತ್ರ ಜ್ಞಾನವನ್ನು ವೃದ್ಧಿಸಿಕೊಳ್ಳದೆ ಪ್ರತಿಯೊಂದು ವಿಷಯದ ಬಗ್ಗೆ ಮಾಹಿತಿ ಪಡೆಯಬೇಕು ಎಂದು ಹೇಳಿದರು.
ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನ ಅಧ್ಯಕ್ಷ ಸುರೇಶ್ ಮಾತನಾಡಿದರು. ಬಿಜೆಪಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಸುನೀಲ್, ಲಯನ್ಸ್ ಸಂಸ್ಥೆ ಅಧ್ಯಕ್ಷ ಶ್ರೀರಾಮಯ್ಯ, ಉಪನ್ಯಾಸಕ ಕೇಶವಮೂರ್ತಿ, ಸ್ವಾಮಿ ವಿವೇಕಾನಂದ ಪ್ರತಿಷ್ಠಾನ ನಿರ್ದೇಶಕರಾದ ಲೋಹಿತ್, ಅಂಬರೀಷ್, ರವಿಕುಮಾರ್, ಚಂದ್ರು, ಉಮಾಶಂಕರ್, ನಟರಾಜ್, ಚಿರಂಜೀವಿಗೌಡ, ನವೀನ್ ಕುಮಾರ್, ಮುರುಳಿ, ಸಾಗರ್, ಚಂದನ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.