ಸೂಲಿಬೆಲೆ: ‘ಹೊಸಕೋಟೆ ತಾಲ್ಲೂಕಿನಲ್ಲಿ ದಶಕಗಳ ಕಾಲ ಅಧಿಕಾರ ಮಾಡಿರುವ ಬಿ.ಎನ್.ಬಚ್ಚೇಗೌಡರು ಜಾತಿ, ಧರ್ಮವನ್ನು ದೂರವಿಟ್ಟು ರಾಜಕಾರಣ ಮಾಡಿದವರು. ಅವರ ಮಗನಾಗಿ ನಾನು ಕೂಡ ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡಲ್ಲ’ ಎಂದು ಬಿಜೆಪಿ ಯುವ ಮೊರ್ಚಾ ರಾಜ್ಯ ಕಾರ್ಯದರ್ಶಿ ಶರತ್ ಬಚ್ಚೇಗೌಡ ಹೇಳಿದರು.
ಬಾವಾಪುರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
‘ಬಚ್ಚೇಗೌಡರ ಅಧಿಕಾರ ಅವಧಿಯಲ್ಲಿ ಮಾಡಿರುವ ಶಾಶ್ವತ ಅಭಿವೃದ್ಧಿ ಕಾಮಗಾರಿಗಳು ಅವರ ಸಾಧನೆಯನ್ನು ಹೇಳುತ್ತಿವೆ. ತಾಲ್ಲೂಕಿನ ಯಾವುದೇ ಗ್ರಾಮಕ್ಕೆ ಭೇಟಿ ನೀಡಿದರೂ ಅವರ ಕೊಡುಗೆ ಕಾಣ ಸಿಗುತ್ತದೆ. ಸ್ಥಳೀಯರಿಗೆ ಉದ್ಯೋಗ ಕಲ್ಪಿಸುವ ದೂರದೃಷ್ಟಿಯಿಂದ ಹೊಸಕೋಟೆ ತಾಲ್ಲೂಕಿನ ಪಿಲ್ಲಗುಂಪೆ ಕೈಗಾರಿಕಾ ಪ್ರದೇಶ, ಯಲಚಹಳ್ಳಿ ವೋಲ್ವೋ ಕಾರ್ಖಾನೆ ತಂದಿದ್ದು, ಸಾವಿರಾರು ಜನರಿಗೆ ಉದ್ಯೋಗ ಲಭಿಸಿತು. ಬಚ್ಚೇಗೌಡರ ಸಾಧನೆಯನ್ನು ಪ್ರಶ್ನೆ ಮಾಡುವವರು ಇದನ್ನು ಅರ್ಥ ಮಾಡಿಕೊಳ್ಳಬೇಕು’ ಎಂದರು.
ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ.ಸತೀಶ್ ಗೌಡ ಮಾತನಾಡಿ, ‘ಗ್ರಾಮಸ್ಥರ ಬಹುದಿನದ ಬೇಡಿಕೆಯಾಗಿದ್ದ ಶುದ್ಧ ಕುಡಿಯುವ ನೀರಿನ ಘಟಕದ ನಿರ್ಮಾಣ ಕಾರ್ಯಕ್ಕೆ ಭೂಮಿ ಪೂಜೆ ಸಲ್ಲಿಸಿದ್ದು, ಕೆಲವೇ ದಿನಗಳಲ್ಲಿ ಘಟಕ ಕಾರ್ಯ ನಿರ್ವಹಿಸಲಿದೆ’ ಎಂದರು.
ಯುವ ಮುಖಂಡ ಬಿ.ಜಿ.ನಾರಾಯಣಗೌಡ, ಭುವನಹಳ್ಳಿ ಗೋಪಾಲಪ್ಪ, ಗ್ರಾ.ಪಂ.ಉಪಾಧ್ಯಕ್ಷ ಮುನಿಶಾಮೇಗೌಡ, ಚನ್ನಿಗಲಾಪುರ ನಾರಾಯಣಸ್ವಾಮಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.