ADVERTISEMENT

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2023, 15:52 IST
Last Updated 24 ಡಿಸೆಂಬರ್ 2023, 15:52 IST
ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಬಿ.ಎನ್.ಬಚ್ಚೇಗೌಡ ದೇವರ ದರ್ಶನ ಪಡೆದರು
ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸಂಸದ ಬಿ.ಎನ್.ಬಚ್ಚೇಗೌಡ ದೇವರ ದರ್ಶನ ಪಡೆದರು   

ಹೊಸಕೋಟೆ: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಭಾನುವಾರ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ.

ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಈ ಮೊದಲೂ ಅನೇಕ ಬಾರಿ ಹೇಳುತ್ತಲೇ ಬಂದಿದ್ದರು. ಅದರೊಂದಿಗೆ ಸಕ್ರಿಯ ರಾಜಕಾರಣದಿಂದ ನಿವೃತ್ತಿ ಪಡೆಯುವ ಇಂಗಿತ ವ್ಯಕ್ತಪಡಿಸಿದ್ದರು. ಆದರೆ, ಅಧಿಕೃತವಾಗಿ ಘೋಷಿಸಿರಲಿಲ್ಲ. 

ಹನುಮ ಜಯಂತಿ ಪ್ರಯುಕ್ತ ಭಾನುವಾರ ಸೂಲಿಬೆಲೆ ರಸ್ತೆ ಖಿಲ್ಲೆ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ADVERTISEMENT

 ‘ನನಗೀಗ 82 ವರ್ಷ ವಯಸ್ಸಾಗಿದೆ. ವಯಸ್ಸಾದ ಮೇಲೆ ರಾಜಕಾರಣ ಬೇಡವಾಗಿದೆ. ಹಾಗಾಗಿ ರಾಜಕಾರಣದಿಂದ ನಿವೃತ್ತಿ ಹೊಂದುತ್ತಿದ್ದೇನೆ’ ಎಂದು ಅಧಿಕೃತವಾಗಿ ಘೋಷಿಸಿದರು.

‘50 ವರ್ಷಕ್ಕೂ ಹೆಚ್ಚು ಸಕ್ರಿಯ ರಾಜಕಾರಣದಲ್ಲಿದ್ದೆ. ಅನೇಕ ಏಳು, ಬೀಳು ಕಂಡಿದ್ದೇನೆ. ಶಾಸಕ, ಸಂಸದ ಮತ್ತು ಸಚಿವನಾಗಿ ಕೆಲಸ ಮಾಡಿರುವ ಸಂತೃಪ್ತಿ ಇದೆ’ ಎಂದು ಅವರು ಹೇಳಿದರು.

ಬಿಎಂಆರ್‌ಡಿ ಮಾಜಿ ಅಧ್ಯಕ್ಷ ವಿಜಯಕುಮಾರ್, ಸುಬ್ಬಣ್ಣ, ಪುರಸಭೆ ಮಾಜಿ ಸದಸ್ಯ ಎಚ್.ಜೆ.ಅರುಣ್‌ಕುಮಾರ್, ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಉಪ್ಪಾರಹಳ್ಳಿ ಮುನಿಯಪ್ಪ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.