ದೇವನಹಳ್ಳಿ:ಜೆಡಿಎಸ್ ರಾಜ್ಯ ಯುವ ಘಟಕದಲ್ಲಿ ತಾಲ್ಲೂಕಿನಿಂದ ಕನಿಷ್ಠ 10 ಮಂದಿ ಯುವ ಮುಖಂಡರಿಗೆ ಅವಕಾಶ ಮಾಡಿಕೊಟ್ಟು ಪಕ್ಷದ ಬಲವರ್ಧನೆಗೆ ಶಕ್ತಿ ತುಂಬಬೇಕು ಎಂದು ಮುಖಂಡ ದೊಡ್ಡಸೊಣ್ಣೆ ಮುನಿರಾಜು ಅವರು, ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ತಾಲ್ಲೂಕಿಗೆ ಖಾಸಗಿ ಕಾರ್ಯಕ್ರಮವೊಂದಕ್ಕೆ ಬಂದಿದ್ದ ವೇಳೆ ಮನವಿ ಸಲ್ಲಿಸಿದ ಅವರು, ಯುವಜನರನ್ನು ಹೊರತುಪಡಿಸಿ ಚುನಾವಣೆ ನಡೆಸುವುದು ಕಷ್ಟ. ಪಕ್ಷ ಸಂಘಟನೆಯೂ ಕಷ್ಟವಾಗುತ್ತದೆ. ಈ ನಿಟ್ಟಿನಲ್ಲಿ ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಈಗಿನಿಂದಲೇ ಕಾರ್ಯ ಪ್ರವೃತ್ತರಾಗಬೇಕಾಗಿದೆ ಎಂದರು.
ಕ್ಷೇತ್ರದಲ್ಲಿ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಯುವ ಮುಖಂಡರಿಗೆ ರಾಜ್ಯ ಘಟಕದಲ್ಲಿ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿದರು.
ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಈಗಾಗಲೇ ಕ್ಷೇತ್ರದಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡುವ ಕಾರ್ಯಕ್ರಮ ಮಾಡುತ್ತಿ ದ್ದೇವೆ. ಬೂತ್ ಕಮಿಟಿಗಳಲ್ಲಿಯೂ ಯುವಕರು, ಮಹಿಳೆಯರಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುತ್ತಿದೆ ಎಂದುಹೇಳಿದರು.
ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಆರ್. ಮುನೇಗೌಡ, ಯುವ ಮುಖಂಡ ಆರ್. ಅಮರನಾಥ್, ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಜಿ.ಎ. ರವೀಂದ್ರ, ಕಲ್ಯಾಣ್ ಕುಮಾರ್ ಬಾಬು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.