ಆನೇಕಲ್: ಕೇಂದ್ರ ಸರ್ಕಾರವು ಕನ್ನಡಿಗರ ಮೇಲೆ ಹಿಂದಿ ಭಾಷೆ ಹೇರಿಕೆ ಮಾಡುವುದನ್ನು ಕೂಡಲೇ ನಿಲ್ಲಿಸಬೇಕು. ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಅಗ್ರ ಸ್ಥಾನ ದೊರೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ್ ಶೆಟ್ಟಿ ತಿಳಿಸಿದರು.
ತಾಲ್ಲೂಕಿನ ಹುಲಿಮಂಗಲದಲ್ಲಿ ಆಯೋಜಿಸಿದ್ದ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,ಪ್ರಾದೇಶಿಕ ಭಾಷೆಗಳಿಗೆ ರಾಷ್ಟ್ರೀಯ ಭಾಷೆ ಸ್ಥಾನಮಾನ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ, ಆಯಾ ಪ್ರದೇಶಗಳಲ್ಲಿ ಅಲ್ಲಿನ ಭಾಷೆಗೆ ಸೂಕ್ತ ಸ್ಥಾನಮಾನ ನೀಡಿದರೆ ಒಕ್ಕೂಟ ವ್ಯವಸ್ಥೆ ಬಲಪಡಲು ಸಾಧ್ಯವಾಗುತ್ತದೆ. ಆದರೆ, ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಹಿಂದಿ ಭಾಷೆಯನ್ನು ಹೇರಿಕೆ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡ್ರಗ್ಸ್ ಮಾಫಿಯಾ ಮಿತಿ ಮೀರಿ ಬೆಳೆಯುತ್ತಿದೆ. ಇದಕ್ಕೆ ಕಡಿವಾಣ ಹಾಕ
ಬೇಕು. ಹಲವು ಪ್ರಭಾವಿಗಳು ಇದರಲ್ಲಿ ಭಾಗಿಗಳಾಗಿದ್ದಾರೆ ಎಂದು ಹೇಳಲಾಗಿದೆ. ಇವರುಗಳಿಗೆ ತಕ್ಕ ಶಿಕ್ಷೆಯಾಗಬೇಕು. ಅಧಿಕಾರ ದುರ್ಬಳಕೆಯಾಗಲು ಬಿಡಬಾರದು ಎಂದು ಹೇಳಿದರು.
ಉಪಾಧ್ಯಕ್ಷ ಜಿಗಣಿ ಪುನೀತ್ ಮಾತನಾಡಿ, ಕೇಂದ್ರ ಲೋಕಸೇವಾ ಆಯೋಗದ ನಾಗರಿಕ ಪರೀಕ್ಷೆಗಳಲ್ಲಿ ಹಿಂದಿ, ಇಂಗ್ಲಿಷ್ ಮಾಧ್ಯಮದಲ್ಲಿ ಮಾತ್ರ ಪ್ರಶ್ನೆ ಪತ್ರಿಕೆಗಳಿರುತ್ತವೆ. ಇಂಗ್ಲಿಷ್ ಜೊತೆಗೆ ಕನ್ನಡ ಭಾಷೆ ಸೇರಿದಂತೆ ಆಯಾ ಪ್ರಾದೇಶಿಕ ಭಾಷೆಗಳಲ್ಲೂ ಪ್ರಶ್ನೆ ಪತ್ರಿಕೆ ನೀಡಬೇಕು. ಎಂದರು.
ಮುಖಂಡರಾದ ಹೆಬ್ಬಗೋಡಿ ಅಂಬರೀಷ್, ಶಿವಾನಂದ ಶೆಟ್ಟಿ, ಶಿವರಾಜು ಗೌಡ, ಮಂಜೇಶ್, ಬಿದರಗುಪ್ಪೆ ಗಣೇಶ್, ಚಂದ್ರವೇಲು, ಲೋಕೇಶ್, ದೀಪಕ್, ಮಂಜು, ನವೀನ್, ಸತೀಶ್ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.