ADVERTISEMENT

ಕೇಂದ್ರ ಕಾರ್ಮಿಕ ಕಾಯ್ದೆಗೆ ವಿರೋಧ: ಸಿದ್ದಲಿಂಗಯ್ಯ ವೃತ್ತದ ಬಳಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2025, 2:23 IST
Last Updated 10 ಜುಲೈ 2025, 2:23 IST
<div class="paragraphs"><p>ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಕಾರ್ಮಿಕ ಸಂಘಟನೆಗಳಿಂದ ನಗರದ ಸಿದ್ದಲಿಂಗಯ್ಯ ವೃತ್ತದ ಬಳಿ ಪ್ರತಿಭಟನೆ ನಡೆಸಿದರು</p></div>

ದೊಡ್ಡಬಳ್ಳಾಪುರ ತಾಲ್ಲೂಕಿನ ವಿವಿಧ ಕಾರ್ಮಿಕ ಸಂಘಟನೆಗಳಿಂದ ನಗರದ ಸಿದ್ದಲಿಂಗಯ್ಯ ವೃತ್ತದ ಬಳಿ ಪ್ರತಿಭಟನೆ ನಡೆಸಿದರು

   

ದೊಡ್ಡಬಳ್ಳಾಪುರ: ಕಾರ್ಮಿಕರ ಹಿತರಕ್ಷಣೆಗೆ ಧಕ್ಕೆಯಾಗುವ ನಾಲ್ಕು ಕಾರ್ಮಿಕ ವಿರೋಧಿ ಸಂಹಿತೆ ಜಾರಿಗೆ ತರಲು ಹೊರಟಿರುವ ಕೇಂದ್ರ ಸರ್ಕಾರದ ನಿರ್ಧಾರ ಖಂಡಿಸಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ನೇತೃತ್ವದಲ್ಲಿ ಕರೆ ನೀಡಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲಿಸಿ ತಾಲ್ಲೂಕಿನ ವಿವಿಧ ಕಾರ್ಮಿಕ ಸಂಘಟನೆಗಳಿಂದ ನಗರದ ಸಿದ್ದಲಿಂಗಯ್ಯ ವೃತ್ತದ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.

ನಂತರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾಗವಹಿಸಲು ಬೆಂಗಳೂರು ಚಲೊ ನಡೆಸಲಾಯಿತು.

ADVERTISEMENT

ಬಿರ್ಲಾ ಸೂಪರ್‌ ಕಾರ್ಖಾನೆಯ ಕಾರ್ಮಿಕ ಸಂಘದ ಕಾರ್ಯದರ್ಶಿ ರೇಣುಕಾರಾಧ್ಯ ಮಾತನಾಡಿ, ‘ಕೇಂದ್ರ ಸರ್ಕಾರ ಬಹುರಾಷ್ಟ್ರೀಯ ಹಾಗೂ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಈಗ ತರಲು ಹೊರಟಿರುವ ನಾಲ್ಕು ಕಾರ್ಮಿಕ ಸಂಹಿತೆಗಳೇ ನಿದರ್ಶನವಾಗಿವೆ ಎಂದರು.

ವೇತನ ನೀತಿಯಿಂದಾಗಿ ಕಾರ್ಮಿಕರು ಮತ್ತಷ್ಟು ಗುಲಾಮರಾಗಲಿದ್ದಾರೆ. ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಯಾಗಬೇಕಿದೆ. ವಿದ್ಯುತ್‌ ಖಾಸಗೀಕರಣ, ಮಹಿಳೆಯರಿಗೆ ರಾತ್ರಿ ಪಾಳಿ ಕೆಲಸಕ್ಕೆ ವಿರೋಧ ಮೊದಲಾದ ಕಾರ್ಮಿಕ ನೀತಿಗಳನ್ನು ವಿರೋಧಿಸಿ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ಸಂಹಿತೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದೆ’ ಎಂದರು.

ಪ್ರತಿಭಟನೆಯಲ್ಲಿ ಸಿಪಿಎಂ ತಾಲ್ಲೂಕು ಕಾರ್ಯದರ್ಶಿ ರುದ್ರಾರಾಧ್ಯ, ಜೆಸಿಟಿಯು ಜಿಲ್ಲಾ ಸಂಚಾಲಕ ಪಿ.ಎ.ವೆಂಕಟೇಶ್‌ ಸೇರಿದಂತೆ ಸಿಐಟಿಯು, ಸಿಪಿಎಂ, ಎ.ಆರ್‌.ಡಿ.ಯು, ಬಿರ್ಲಾ ಸೂಪರ್‌ ಕಾರ್ಮಿಕರ ಸಂಘದ ಮುಖಂಡರು, ಕಾರ್ಮಿಕರು, ಅಂಗನವಾಡಿ ನೌಕರರ ಸಂಘದ ಕಾರ್ಯಕರ್ತೆಯರು ಇದ್ದರು.

ಗ್ರಾಮೀಣ ಅಂಚೆ ನೌಕರರು ಸಹ ನಗರದ ಅಂಚೆ ಕಚೇರಿ ಮುಂದೆ ಧರಣಿ ನಡೆಸುವ ಮೂಲಕ ಕಾರ್ಮಿಕ ವಿರೋಧಿ ಸಂಹಿತೆಗಳ ಜಾರಿಗೆ ವಿರೋಧ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.