ADVERTISEMENT

ಋತುಸ್ರಾವ ವೇಳೆ ಸ್ವಚ್ಛತೆಗೆ ಆದ್ಯತೆ ನೀಡಿ: ಸಿಇಒ

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 15:56 IST
Last Updated 3 ಜೂನ್ 2020, 15:56 IST
ಜಿಲ್ಲಾ ಪಂಚಾಯಿತಿ ಸಿಇಒ ನಾಗರಾಜ್ ಕಾರ್ಯಕ್ರಮ ಉದ್ಘಾಟಿಸಿದರು
ಜಿಲ್ಲಾ ಪಂಚಾಯಿತಿ ಸಿಇಒ ನಾಗರಾಜ್ ಕಾರ್ಯಕ್ರಮ ಉದ್ಘಾಟಿಸಿದರು   

ದೇವನಹಳ್ಳಿ: ಋತುಸ್ರಾವ ಮುಜುಗರ ಪಡೆಯುವ ವಿಷಯವಲ್ಲ. ಇದೊಂದು ನೈಸರ್ಗಿಕ ಪ್ರಕ್ರಿಯೆ, ಮಹಿಳೆಯರು ಋತುಚಕ್ರ ವೇಳೆ ಸ್ವಚ್ಛತೆಗೆ ಆದ್ಯತೆ ನೀಡಬೇಕು ಹಾಗೂ ಈ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಂ.ನಾಗರಾಜ ಹೇಳಿದರು.

ಮುಟ್ಟಿನ ಸ್ವಚ್ಛತೆಯ ಅಂತರರಾಷ್ಟ್ರೀಯ ದಿನಾಚರಣೆ ಹಾಗೂ ಋತುಚಕ್ರ ಜಾಗೃತಿ ಸಪ್ತಾಹದ ಅಂಗವಾಗಿ ಸ್ವಚ್ಛ ಭಾರತ ಅಭಿಯಾನಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವತಿಯಿಂದ ದೇವನಹಳ್ಳಿ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ನಡೆದ ಋತುಸ್ರಾವ ನೈರ್ಮಲ್ಯ ದಿನಾಚರಣೆ ಹಾಗೂ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಮುಟ್ಟಿನ ಸಂದರ್ಭದಲ್ಲಿ ಶೇಕಡ 50ರಷ್ಟು ಮಹಿಳೆಯರು ಅಸುರಕ್ಷತಾ ವಿಧಾನಗಳನ್ನು ಬಳಸುತ್ತಿದ್ದಾರೆ. ಇದರಿಂದಾಗಿ ಮಹಿಳೆಯರ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುವ ಸಾಧ್ಯತೆಗಳಿರುವುದರಿಂದ ಮುಟ್ಟಿನ ಸ್ವಚ್ಛತೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಗ್ರಾಮಗಳಲ್ಲಿ ಹೆಚ್ಚಾಗಿ ಏರ್ಪಡಿಸಬೇಕು’ ಎಂದರು.

ADVERTISEMENT

ಇದೆ ಸಂದರ್ಭದಲ್ಲಿ ಋತುಚಕ್ರವನ್ನು 28 ದಿನಗಳೆಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ಈ ಬಾರಿಯ ದಿನಾಚರಣೆಯನ್ನು 23 ಬಿಳಿ ಮಣಿ, 5 ಕೆಂಪು ಮಣಿಗಳನ್ನೊಳಗೊಂಡ ಬ್ಯಾಂಡ್‌ಅನ್ನು ಮಹಿಳೆಯರು ಕೈಗೆ ಧರಿಸುವ ಮೂಲಕ ಋತುಸ್ರಾವ ಜಾಗೃತಿ ಸಪ್ತಾಹ ದಿನವನ್ನು ಆಚರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೋವಿಂದರಾಜು, ದೇವನಹಳ್ಳಿ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಎಚ್.ಡಿ.ವಸಂತಕುಮಾರ್, ತಾಲ್ಲೂಕು ವೈದ್ಯೆ ಡಾ.ನೀತುರಾಣಿ, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹೇಮಾವತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.