ADVERTISEMENT

ಸಮಸ್ಯೆಗಳಿಗೆ ಶಾಶ್ವತ ಪರಿಹಾರ: ಭರವಸೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2022, 5:57 IST
Last Updated 29 ನವೆಂಬರ್ 2022, 5:57 IST
ಪಂಚರತ್ನ ರಥಯಾತ್ರೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಮಾತನಾಡಿದರು. ಶಾಸಕ ನಿಸರ್ಗ ನಾರಾಯಣಸ್ವಾಮಿ ಹಾಜರಿದ್ದರು
ಪಂಚರತ್ನ ರಥಯಾತ್ರೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಮಾತನಾಡಿದರು. ಶಾಸಕ ನಿಸರ್ಗ ನಾರಾಯಣಸ್ವಾಮಿ ಹಾಜರಿದ್ದರು   

ವಿಜಯಪುರ (ಬೆಂ.ಗ್ರಾಮಾಂತರ):ಚನ್ನರಾಯಪಟ್ಟಣಕ್ಕೆ ಸೋಮವಾರ ಆಗಮಿಸಿದ ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಪೂರ್ಣಕುಂಭ ಹಾಗೂ ವೀರಗಾಸೆ ಕುಣಿತದ ಮೂಲಕಸ್ವಾಗತ ಕೋರಲಾಯಿತು. ಪಕ್ಷದ ಕಾರ್ಯಕರ್ತರು ಎಚ್‌.ಡಿ. ಕುಮಾರಸ್ವಾಮಿಗೆಬೃಹತ್ ಗಾತ್ರದ ಸೇಬಿನ ಹಾರ ಹಾಕಿದರು.

ಬಳಿಕ ಮಾತನಾಡಿದ ಅವರು, ಪಂಚರತ್ನ ಯೋಜನೆಯು ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲು ಸಹಕಾರಿಯಾಗಲಿದೆ. ಸ್ವಾತಂತ್ರ್ಯ ಬಂದು 75 ವರ್ಷಗಳು ಕಳೆದರೂ ಬಡತನ, ನಿರುದ್ಯೋಗ ಸಮಸ್ಯೆ ಕಾಡುತ್ತಿದೆ. ಮಹಿಳಾ ಸಬಲೀಕರಣವಾಗಲಿಲ್ಲ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಈ ಸಮಸ್ಯೆಗಳನ್ನು ತೊಡೆದು ಹಾಕಲಿದ್ದೇವೆ ಎಂದರು.

‘ಚನ್ನರಾಯಪಟ್ಟಣದಲ್ಲಿ 239 ದಿನಗಳಿಂದ ನಿರಂತರವಾಗಿ ರೈತರ ಹೋರಾಟ ನಡೆಯುತ್ತಿದೆ. ಭೂಮಿ ಕೊಡುವುದಿಲ್ಲವೆಂದು ಹೋರಾಟ ಮಾಡುತ್ತಿದ್ದಾರೆ. ಈ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ’ ಎಂದು ತಿಳಿಸಿದರು.

ADVERTISEMENT

‘ಕೆಲವು ಮಧ್ಯವರ್ತಿಗಳು ಹಣದಾಸೆಗಾಗಿ ರೈತರನ್ನು ದಿಕ್ಕು ತಪ್ಪಿಸುತ್ತಿದ್ದಾರೆ. ರೈತರು ಭೂಮಿ ಕಳೆದುಕೊಂಡರೆ ಪುನಃ ಸಂಪಾದನೆ ಮಾಡಲು ಸಾಧ್ಯವಿಲ್ಲ. ಯಾರೂ ಕೂಡ ಭೂಮಿ ಕೊಡಲು ಒಪ್ಪಿಗೆ ನೀಡಬೇಡಿ. ನಿಮ್ಮ ಮಕ್ಕಳ ಭವಿಷ್ಯ ಕುರಿತು ಚಿಂತನೆ ನಡೆಸಿ. ಮುಂದಿನ ಜೆಡಿಎಸ್ ಸರ್ಕಾರದಲ್ಲಿ ನಿಮ್ಮೆಲ್ಲಾ ಸಮಸ್ಯೆಗಳನ್ನು ಸಂಪೂರ್ಣವಾಗಿ ನಿವಾರಣೆ ಮಾಡುತ್ತೇನೆ’ ಎಂದರು.

ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ಪಂಚರತ್ನ ರಥಯಾತ್ರೆ ಮೂಲಕ ಸಿಗುತ್ತಿರುವ ಜನ ಬೆಂಬಲವು ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸರ್ಕಾರ ರಚನೆ ಮಾಡುತ್ತದೆ ಎನ್ನುವುದನ್ನು ಸೂಚಿಸುತ್ತಿದೆ. ಈ ಕ್ಷೇತ್ರದಲ್ಲಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರೇ ಮುಂದಿನ ಪಕ್ಷದ ಅಭ್ಯರ್ಥಿಯಾಗಲಿದ್ದು, ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಅವರು ಸಚಿವರಾಗುತ್ತಾರೆ ಎಂದರು.

ರೈತರ ಮನವಿ: ವಿಜಯಪುರ ಹೋಬಳಿಯ ವೆಂಕಟಗಿರಿಕೋಟೆ ಹಾಗೂ ಸುತ್ತಮುತ್ತಲಿನ ರೈತರು ದ್ರಾಕ್ಷಿ ಬೆಳೆಯುವುದನ್ನು ರೂಢಿಸಿಕೊಂಡಿದ್ದು, ಈ ಭಾಗದಲ್ಲಿ ಕೋಲ್ಡ್ ಸ್ಟೋರೇಜ್ ಮಾಡಿಕೊಟ್ಟರೆ ರೈತರಿಗೆ ತುಂಬಾ ಅನುಕೂಲವಾಗಲಿದೆ. ದ್ರಾಕ್ಷಿ ಬೆಳೆಗೆ ವೈಜ್ಞಾನಿಕ ಬೆಲೆ ಸಿಗುವಂತೆ ಮಾಡಬೇಕಾಗಿದೆ ಎಂದು ರೈತರು ಒತ್ತಾಯಿಸಿದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಆರ್. ಮುನೇಗೌಡ, ಮಾರೇಗೌಡ, ನಲ್ಲಪ್ಪನಹಳ್ಳಿ ನಂಜಪ್ಪ, ಕೋರಮಂಗಲ ವೀರಪ್ಪ, ಚಿಕ್ಕಬಚ್ಚೇಗೌಡ, ಆರ್. ಅಮರನಾಥ್, ಕಲ್ಯಾಣ್ ಕುಮಾರ್ ಬಾಬು, ವೆಂಕಟರಮಣಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.